Home / ಕವನ / ಕವಿತೆ / ನವೋದಯದ ನಲವು : ಜಿ ಎಸ್ ಎಸ್

ನವೋದಯದ ನಲವು : ಜಿ ಎಸ್ ಎಸ್

ನವಿರಾದ ಭಾವದಲೆಗಳ
ಸೀಳುತ್ತಾ ಮುನ್ನುಗ್ಗುತ್ತಿತ್ತು
ನವ್ಯದ ಹಡಗು

ಆಹಾ! ಏನು ಬಿಂಕ, ಬೆಡಗು, ಬಿನ್ನಾಣ
ಕೋಡುಗಲ್ಲಿನ ಮೇಲೆ
ಕಡಲ ಹಕ್ಕಿಗಳಂತೆ ಕೂತು ನೋಡಿದೆವು.

ಕಾರಿರುಳು-
‘ಕರಿಯ ನಭದ ಕಣ್ಗಳಂತೆ
ಅಭಯದೊಂದು ರೂಹಿನಂತೆ
ತೇಲಿಬಿಟ್ಟ ದೀಪದಂತೆ’
ನೂರು ತಾರೆ ಬೆಳಕ ಬೀರಲು
ಪುಟ್ಟ ದೋಣಿಯಲಿ ಕೂತು
ರಾತ್ರಿ-ಹಗಲು ರಾಕ್ಷಸ ಅಲೆಗಳನ್ನು ತಳ್ಳುತ್ತಾ
ಹರಸಾಹಸದಿಂದ ದಡ ಸೇರಿದೆವು.

ಮುಸ್ಸಂಜೆ-
ಆಗಸದಲ್ಲಿ ಬೆಳ್ಳಕ್ಕಿಗಳ ಸಾಲು
‘ದೇವರ ರುಜು’
ಪರವಶತೆಯಿಂದ ನೋಡಿದೆವು.
ಕಣಿವೆಯ ಮುದುಕ
ಕೈ ಮರವಾದ; ಮುನ್ನಡೆದೆವು.
‘ಮೂಡಲ ಮನೆಯಲ್ಲಿ ಮುತ್ತಿನ ನೀರು
ಗಿಡಗಂಟೆಗಳ ಕೊರಳಲ್ಲಿ ಹಕ್ಕಿಗಳ ಹಾಡು’
ತಲೆದೂಗಿದೆವು.

ಶಾನುಭೋಗರ ಮಗಳು
ಕಾಲಿಗೆ ನೀರಿತ್ತು ಕೈತುತ್ತು ನೀಡಿದಳು;
‘ಎನಿತು ಜನ್ಮದಲಿ ಎನಿತು ಜೀವರಿಗೆ
ಎನಿತು ನಾವು ಋಣಿಯೋ’ ತಲೆಬಾಗಿದೆವು.

ಹಾದಿಯ ತುಂಬಾ
ನಗುತ್ತಿತ್ತು ಏಳುಸುತ್ತಿನ ಮಲ್ಲಿಗೆ
‘ಹಚ್ಚನೆ ಹಸುರ ಗಿಡದಿಂದೆಂತು
ಮೂಡಿತ್ತೋ ಬೆಳ್ಳಗೆ’
-ಅನತಿ ದೂರದಲ್ಲೇ ಕಲ್ಲು ಬಂಡೆಯನ್ನೇರಿ
ಅದಾರೋ… ಯಾರವರು, ಯಾರು?
ಎದೆತುಂಬಿ ಹಾಡುತ್ತಿದ್ದರು.

ಹಮ್ಮು-ಬಿಮ್ಮು ಸೋಕದ ಹಾಡು
ನೊಂದ ಜೀವರಿಗೆ ತಂಪನೀಯುವ ಹಾಡು
ಪ್ರೀತಿ-ಸ್ನೇಹಗಳ ಪಸರಿಸುವ ಹಾಡು
ಎಲ್ಲೋ ಅಳುವ ಮಗುವನೂ ಸಂತೈಸುವ ಹಾಡು
ನವ-ನವೀನ ಭಾವದ ಹಾಡು.

ಹಾಡಿನ ಹಾಡಿಯಲ್ಲಿ ಬೀಡುಬಿಟ್ಟು
ಹಾಡಿಗೆ ನಮ್ಮನ್ನೇ ನಾವು ಕೊಟ್ಟು ಕೊಂಡೆವು
ನೂರು ಭಾವದ ಬಾವಿ ಮೊಗೆ ಮೊಗದು
ಸಿಹಿನೀರ ಕುಡಿದೆವು

ಕಡಲನೀಜುವೆನೆಂಬ ಮರುಳ ಹಡಗು
ತನಗೆ ತಾ ಹೊರೆಯಾಗಿ ತಾನೆ ಮುಳುಗುತ್ತಿತ್ತು…
ಅಲೆಯ ಮೇಲೊಂದು ತಾವರೆಯ ಎಲೆ
ಎಲೆಯ ಮೇಲೊಂದು ಪುಟ್ಟ ಹಣತೆ
ತೇಲುತ್ತಿತ್ತು ತನ್ನ ಪಾಡಿಗೆ ತಾನೇ
ನೀಲ ಮೌನದಲ್ಲಿ…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...