Home / ಕವನ / ಕವಿತೆ / ನವೋದಯದ ನಲವು : ಜಿ ಎಸ್ ಎಸ್

ನವೋದಯದ ನಲವು : ಜಿ ಎಸ್ ಎಸ್

ನವಿರಾದ ಭಾವದಲೆಗಳ
ಸೀಳುತ್ತಾ ಮುನ್ನುಗ್ಗುತ್ತಿತ್ತು
ನವ್ಯದ ಹಡಗು

ಆಹಾ! ಏನು ಬಿಂಕ, ಬೆಡಗು, ಬಿನ್ನಾಣ
ಕೋಡುಗಲ್ಲಿನ ಮೇಲೆ
ಕಡಲ ಹಕ್ಕಿಗಳಂತೆ ಕೂತು ನೋಡಿದೆವು.

ಕಾರಿರುಳು-
‘ಕರಿಯ ನಭದ ಕಣ್ಗಳಂತೆ
ಅಭಯದೊಂದು ರೂಹಿನಂತೆ
ತೇಲಿಬಿಟ್ಟ ದೀಪದಂತೆ’
ನೂರು ತಾರೆ ಬೆಳಕ ಬೀರಲು
ಪುಟ್ಟ ದೋಣಿಯಲಿ ಕೂತು
ರಾತ್ರಿ-ಹಗಲು ರಾಕ್ಷಸ ಅಲೆಗಳನ್ನು ತಳ್ಳುತ್ತಾ
ಹರಸಾಹಸದಿಂದ ದಡ ಸೇರಿದೆವು.

ಮುಸ್ಸಂಜೆ-
ಆಗಸದಲ್ಲಿ ಬೆಳ್ಳಕ್ಕಿಗಳ ಸಾಲು
‘ದೇವರ ರುಜು’
ಪರವಶತೆಯಿಂದ ನೋಡಿದೆವು.
ಕಣಿವೆಯ ಮುದುಕ
ಕೈ ಮರವಾದ; ಮುನ್ನಡೆದೆವು.
‘ಮೂಡಲ ಮನೆಯಲ್ಲಿ ಮುತ್ತಿನ ನೀರು
ಗಿಡಗಂಟೆಗಳ ಕೊರಳಲ್ಲಿ ಹಕ್ಕಿಗಳ ಹಾಡು’
ತಲೆದೂಗಿದೆವು.

ಶಾನುಭೋಗರ ಮಗಳು
ಕಾಲಿಗೆ ನೀರಿತ್ತು ಕೈತುತ್ತು ನೀಡಿದಳು;
‘ಎನಿತು ಜನ್ಮದಲಿ ಎನಿತು ಜೀವರಿಗೆ
ಎನಿತು ನಾವು ಋಣಿಯೋ’ ತಲೆಬಾಗಿದೆವು.

ಹಾದಿಯ ತುಂಬಾ
ನಗುತ್ತಿತ್ತು ಏಳುಸುತ್ತಿನ ಮಲ್ಲಿಗೆ
‘ಹಚ್ಚನೆ ಹಸುರ ಗಿಡದಿಂದೆಂತು
ಮೂಡಿತ್ತೋ ಬೆಳ್ಳಗೆ’
-ಅನತಿ ದೂರದಲ್ಲೇ ಕಲ್ಲು ಬಂಡೆಯನ್ನೇರಿ
ಅದಾರೋ… ಯಾರವರು, ಯಾರು?
ಎದೆತುಂಬಿ ಹಾಡುತ್ತಿದ್ದರು.

ಹಮ್ಮು-ಬಿಮ್ಮು ಸೋಕದ ಹಾಡು
ನೊಂದ ಜೀವರಿಗೆ ತಂಪನೀಯುವ ಹಾಡು
ಪ್ರೀತಿ-ಸ್ನೇಹಗಳ ಪಸರಿಸುವ ಹಾಡು
ಎಲ್ಲೋ ಅಳುವ ಮಗುವನೂ ಸಂತೈಸುವ ಹಾಡು
ನವ-ನವೀನ ಭಾವದ ಹಾಡು.

ಹಾಡಿನ ಹಾಡಿಯಲ್ಲಿ ಬೀಡುಬಿಟ್ಟು
ಹಾಡಿಗೆ ನಮ್ಮನ್ನೇ ನಾವು ಕೊಟ್ಟು ಕೊಂಡೆವು
ನೂರು ಭಾವದ ಬಾವಿ ಮೊಗೆ ಮೊಗದು
ಸಿಹಿನೀರ ಕುಡಿದೆವು

ಕಡಲನೀಜುವೆನೆಂಬ ಮರುಳ ಹಡಗು
ತನಗೆ ತಾ ಹೊರೆಯಾಗಿ ತಾನೆ ಮುಳುಗುತ್ತಿತ್ತು…
ಅಲೆಯ ಮೇಲೊಂದು ತಾವರೆಯ ಎಲೆ
ಎಲೆಯ ಮೇಲೊಂದು ಪುಟ್ಟ ಹಣತೆ
ತೇಲುತ್ತಿತ್ತು ತನ್ನ ಪಾಡಿಗೆ ತಾನೇ
ನೀಲ ಮೌನದಲ್ಲಿ…
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...