Home / ಕವನ / ಕವಿತೆ / ಚಂದನಶಿಲ್ಪ

ಚಂದನಶಿಲ್ಪ

ವಿಂಧ್ಯಗಿರಿ ದೇವರು ಕಂದರ್ಪನ ಅವತಾರ
ಪಾದಕ್ಕೆ ಕಮಲ ನೆತ್ತಿಗೆ ಚಂದ್ರ,
ನಿಂತ ನಿಲುವು ರಾಗವೋ ವಿರಾಗವೋ
ರವಿಯೇ ತಾರ ಬುವಿಯೇ ಮಂದ್ರ,
ಕೆಳೆಗೆ ಬೆಳೆದ ಗಿಡಮರಗಳ ನಡುವೆ
ಊಳುವ ಗಾಳಿಯ ಕರುಣಾಕ್ರಂದ,
ಕೊಂಚ ಗದ್ಯ ಇನ್ನೆಲ್ಲ ಪದ್ಯ
ಮರ ಹಿಡಿದ ಫಲವಲ್ಲ ಅಲ್ಲಲ್ಲೇ ನೈವೇದ್ಯ,
ಹಗಲು ಬಿಸಿಲ ಸ್ನಾನ
ರಾತ್ರಿ ಚಿಕ್ಕೆ ಹೊತ್ತ ಕತ್ತಲ ಛತ್ರಿಯಡಿಗೆ
ತಣ್ಣಗೆ ಕಲ್ಲಿನೆದೆಯೊಳಗೆ
ಕೊತ ಕೊತ ಕುದಿಯುವ
ಪೂರ್ವ ಭವಗಳ ಪಾಪಧ್ಯಾನ,
ದೂರಕ್ಕೆ ದೇವರು ಕಲ್ಲು ಸೆಟೆದಂತೆ ಕಾಣುತ್ತಾರೆ;
ಪರೀಕ್ಷಿಸಿ ನೋಡಿ
ನಡುವೆ ಹಠಾತ್ತನೆ ಬೆಚ್ಚುತ್ತಾರೆ.

ವಿಂಧ್ಯಗಿರಿ ದೇವರಿಗೆ ಬಂಧನವಿಲ್ಲದ ಮನೆ
ಅದರ ಇಲ್ಲದ ಬಾಗಿಲನ್ನು
ಹಗಲು ಬಿಚ್ಚುತ್ತದೆ ರಾತ್ರಿ ಮುಚ್ಚುತ್ತದೆ,
ಬಹಳ ಹಿಂದೆ ಅವರ
ಬೆಲ್ಲದ ಗಲ್ಲವನ್ನ ಬೆಳಕಿನ ಇರುವೆ ಕಚ್ಚಿ
ಸುಖದ ನೋವ ಚುಚ್ಚಿ
ಮಣ್ಣು ನರಳಿತು, ಹಣ್ಣು ಮಾಯಿತು;
ಹೊಕ್ಕಳ ಕೆರಳು ಸತ್ತು ಮುಖದಲ್ಲಿ
ಮಕ್ಕಳ ನಗೆ ಹುಟ್ಟಿತು
ಆಗಿಂದ ಅದು

ಬೆಳೆದೇ ಬೆಳೆದು ಬೆಳೆದೇ ಬೆಳೆದು
ಬಂದವರ ಎದೆಯಲ್ಲಿ ಅಕ್ಕಿ ಚೆಲ್ಲುತ್ತದೆ,
ಸಿಕ್ಕಿ ಬಿದ್ದಿದ್ದರೆ ಅಲ್ಲಿ ತಿನ್ನುವ ಹಕ್ಕಿ
ಫಕ್ಕನೆ ಹಿಡಿದು ಮುಗಿಲಿಗೆ ಹಾರಿಸುತ್ತದೆ.

ವಿಂಧ್ಯಗಿರಿ ದೇವರಿಗೆ ರೆಪ್ಪೆಯಿದೆ ಬಡಿಯುವುದಿಲ್ಲ
ಇರಿಯುವಂತೆ ದಿಟ್ಟಿ,
ಧಗಧಗ ಪ್ರಾಯ, ಸುಡುವುದಿಲ್ಲ;
ಪಂಚಾಗ್ನಿ ಮೆಟ್ಟಿದ ಜಟ್ಟಿ,
ಅವರಿಗೆ
ವಸ್ತ್ರ ಕತ್ತಲೆ ಬೆಳಕು ಬೆತ್ತಲೆ
ಸುಡುವ ಸೂರ್‍ಯ ತಂಪು ಕಿತ್ತಲೆ.
ಅಡ್ಡ ನೋಡಿದರೆ
ಮಲಗಿದ ದೇವರ ಎದೆಯಲ್ಲಿ ಅಲಗು
ಉದ್ದ ನೋಡಿದರೆ
ಸೆಟೆದ ವಿಗ್ರಹದ ಕಣ್ಣಲ್ಲಿ ಮಿನುಗು.

ನಡುರಾತ್ರಿ ಭೂಮಿಗೆ ಮಂಪರು:
ಬಾನು ತುಟಿತೆರೆದು
ದೇವಕನ್ಯೆಯರು ಇಳಿದು
ದೇವರ ಮೈಗೆ ಗಂಧ ತೊಡೆಯುತ್ತಾರೆ;
ಹೊಕ್ಕಳಿಗೆ ಮುತ್ತು ಸುರಿದು;
ತೊಡೆಗೆ ಲಟಿಗೆ ತೆಗೆದು
ಪಾದಕ್ಕೆ ದಿಂಡುರುಳಿ ಮುಳು ಮುಳು ಅಳುತ್ತಾರೆ;
ದೇವರ ಕಣ್ಣಲ್ಲಿ ಥಟ್ಟನೆ ದೀಪ ಹತ್ತಿ
ಅಳುವಂತೆ ಉರಿಯುತ್ತದೆ;
ಹದ್ದೊಳಗಿನ ಪಾಪ ಉದ್ದುದ್ದ ಬೆಳೆದು
ತುಟಿಗಳು ಚಲಿಸುತ್ತವೆ.
ಆದರೆ
ತಾವರೆ ಮೆಟ್ಟಿದವರು
ತಿಂಗಳು ಮುಡಿದವರು
ರಾಗಕ್ಕೆ ಮಂಗಳ ಹಾಡಿದವರು
ದೇವರು.
ಮಾತು ಹೊರಡುವ ಮುಂಚೆ ಅಲ್ಲೆ ಹೂತಂತಾಗಿ
ಮೊಳೆತ ಪ್ರಾಣದ ಆಸೆ ಕಮರುತ್ತದೆ,
ಗಾಳಿ
ಸಟೆದ ಕಲ್ಲಿನ ಸುತ್ತ ಚೀರುತ್ತದೆ.

ವಿಶಾಪದ ನಿರೀಕ್ಷೆಯಲ್ಲಿ ದೇವರು ನಿಂತಿದ್ದಾರೆ.
ಒಂದು ದಿನ
ಅಭಯಹಸ್ತ ಮೂಡುತ್ತದೆ
ನಿಜದ ಕೆಚ್ಚ ನೀಡುತ್ತದೆ
ಬಿಲ್ಲು ಬಾಣ ಕೈಗೆ ಕಲಿಸಿ
ಮೈರುಚಿಯನ್ನೆಲ್ಲ ಉರಿಸಿ
ಭಕ್ತವೃಂದ ಸುತ್ತ ಕೊರೆದ ಲಕ್ಷಣಗೆರೆ ಅಳಿಸುತ್ತದೆ;
ಮಾದ ಹುಣ್ಣು ಮತ್ತೆ ಜ್ವಲಿಸಿ
ಸತ್ತ ಕೆರಳು ತಿರುಗಿ ಜನಿಸಿ
ಶಾಪದ ಕೊನೆ ತರುತ್ತದೆ
ಅಸ್ತಿಕಗಣದ ಚೀತ್ಕಾರದ ನಡುವೆ
ದೇವಕವಚ ಸಿಡಿಯುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...