Home / ಕವನ / ಕವಿತೆ / ದನಿಗಳು

ದನಿಗಳು

ನಡುರಾತ್ರಿಯ ನಾಭಿಯಲ್ಲಿ
ನೆಲ ಜಲ ಮಾತಾಡಿತ ?
ಹಗಲಿನ ಹದ್ದುಗಳು ಹಾರಿ
ಹಮ್ಮಿಗೆ ಗದ್ಗದ ಮೂಡಿ
ತರ್ಕ ಚಿತೆಗೆ ಬಿದ್ದಿತ ?
ತಳದ ಹುತ್ತ ಬಾಯಿ ತೆರೆದು
ನಿದ್ದೆಯಿದ್ದ ನಾಗರಾಗ
ಮೂಕಸನ್ನೆ ತಾಕಲಾಡಿ ಎಚ್ಚರಕ್ಕೆ ಚೆಲ್ಲಿತ ?
ಬಾನಿನ ಮಹೇಂದ್ರಕಾಯ
ಅಸಂಖ್ಯ ನೇತ್ರವ ಬಿಚ್ಚಿ
ಉಳುಕಿದ ಮಣ್ಣೆದೆಯನ್ನು ಚಂದ್ರಹಸ್ತ ಸವರಿತ ?

ಬಂದಿರೇ, ಆಹ!
ಬನ್ನಿರೇ
ಏಕಾಂತಕ್ಕೆಳೆವ ಒಗಟುಗಳೇ
ಬಗೆಹರಿಯದ ಜಿಗಟುಗಳೇ
ಯಾಕೆ ಹೀಗೆ ಕಾಡುತ್ತೀರಿ ?
ಮೋಡದಲ್ಲಿ ನಿಧಾನ ಮೂಡುವ ಅರ್ಥಾತೀತ ಗೂಢಗಳೆ
ಹೊಳೆ ಬೆಟ್ಟ ಬಿಕ್ಕಿದ ಅನುಕ್ತ ಗಾಢಗಳೆ
ನೇಗಿಲು ಹೂಡುತ್ತೀರಿ ಯಾಕೆ ಎದೆಗೆ ನಿಷ್ಕರುಣಿಗಳೆ?
ನಿದ್ದೆ ಹಬ್ಬದ ನೋವ ಬೆಳೆಯುತ್ತೀರಿ ಯಾಕೆ ?
ತಬ್ಬಿದ ಮಣ್ಣಿನ ಸುಖಕ್ಕೆ ಮುಳಿಯುತ್ತೀರಿ ಯಾಕೆ ?
ನಿಂತ ಮುಖ ನಿಂತಂತೆ ಚಲಿಸುವ ನೀವು
ದಯಾಕ್ಷಿ ಭಯಗಳೆ
ರಾಕ್ಷಸ ನಯಗಳೆ
ಲಕ್ಷಣಗೆರೆ ದಾಟಿಸಬರುವಿರೆ ?
ವ್ಯವಹಾರ ಕೊಯಿಲಾಗುವ ಮುನ್ನ
ಮಳೆ ನಷ್ಟದಲ್ಲಿ ಹುಟ್ಟುವ
ಹೆಸರಿಲ್ಲದ ಇಷ್ಟಗಳೆ
ಯಾಕೆ ಕಾಡುತ್ತೀರಿ ಹೀಗೆ ?
ಕಾಡಿ, ಮುಖ ದೀನಮಾಡಿ
ಬೇಡುವ ಧಾಟಿಯಲ್ಲಿ ನೀಡಿಬಿಡುತ್ತೀರಿ ಹೇಗೆ ?

ಉರಿವ ಹಗಲ ಆರಿಸಿದ
ಇರುಳ ಪನ್ನೀರೇ ಘನಿಸಿತೆ ?
ಕಿರುತಿಂಗಳ ಕೊರಗುಬೆಳಕಲ್ಲಿ ಮುಗಿಲು
ಮುಡಿಗಡ್ಡದ ಮುನಿಗಳ ರೂಪಿಸಿತೆ ?
ಮುನಿಗಳೆ!
ಪಾತಾಳ ಜಯಿಸಿದ ದನಿಗಳೆ
ನಿಮ್ಮ ಕೈಕಾಲಿಗೆ ನೀರೆರೆಯಲಿ ಹೇಗೆ
ಕಲಿತ ವೇದಾಂತವೆಲ್ಲ ಬಚ್ಚಲ ಕೊಚ್ಚೆ;
ನಿಮಗೆ ಏನ ತೊಡಿಸಲಿ ಹೇಗೆ
ನಕ್ಷತ್ರಗಂಗೆ ಉದ್ದಸಾಲದ ಕಚ್ಚೆ;
ಕ್ಷಣಸತ್ಯದ ಹೆಣ ಮೆಟ್ಟಿ ಬರುವ
ಅಮೂರ್ತ ಗುರಿಗಳೆ
ಕಡಲೊಡಲಿಗೆ ತಣ್ಣಗೆ ಹರಿದು
ಗಿರಿನೆತ್ತಿ ಕಾರುವ ವಿರೋಧದುರಿಗಳೆ
ಕೋಟ್ಯಂತರ ಇಳೆಕಣಗಳ ಗುಡಿಸುವ ಬರಲುಗಳೆ
ಮಣ್ಣನಾಲಿಗೆಯಿಂದ ಹಿಡಿಯಲಿ ಹೇಗೆ ?
ನಿಮ್ಮನ್ನು ಹಿಡಿಯದ ನುಡಿ
ಬರಿ ನಾದದ ಬೇಗೆ.

ಗೋಳದ ಗುರುತ್ವದಾಚೆಗೆ
ಗಿರಿತೂಕವೆ ಜಳ್ಳು,
ಬೆಳಕಿನ ವೇಗಕ್ಕೆಳೆದರೆ
ಕಾಯದ ರೂಪವೆ ಸುಳ್ಳು,
ಬಣ್ಣಗಳೋ ಕಣ್ಣ ಭ್ರಮೆ
ಕಣ್ಣೋ ಅದಕ್ಕೆ ನಲಿಯುವ ಬೆಳ್ಳು,
ಇಲ್ಲಿಯ ಹಗಲು ಎಲ್ಲಿಗೊ
ಇರುಳೂ ಅಲ್ಲವಾಗಿ
ಈವರೆಗೆ ಕಂಡದ್ದೆಲ್ಲ
ಕಾಣದ್ದರ ನೆರಳು.

ಎಂಬ ಬಗೆ ಕವಿಸುವ
ಕವಿಸಿ ಕುದಿಸುವ
ಕುದಿಸಿ ಉದಿಸುವ ಧಗ ಧಗ ಚಂದ್ರರೆ
ಸತ್ಯದ ಮೈಯಲ್ಲಿ ಸುಳಿಯುವ
ಸುಳ್ಳಿನ ಚಹರೆ ನೀಡಿ ಯಾಕೆ
ಶಂಕೆಯಲ್ಲಿ ಅದ್ದುತ್ತೀರಿ ?
ಬೆಳಕು ಹರಿಯಲು ಕರಗುವ
ಅಸ್ಪಷ್ಟ ಚೀರುಗಳೆ
ಅಯ್ಯೋ!
ಯಾಕೆ ಹಾಗೆ ತೀರುತ್ತೀರಿ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...