Home / ಕವನ / ಕವಿತೆ / ದನಿಗಳು

ದನಿಗಳು

ನಡುರಾತ್ರಿಯ ನಾಭಿಯಲ್ಲಿ
ನೆಲ ಜಲ ಮಾತಾಡಿತ ?
ಹಗಲಿನ ಹದ್ದುಗಳು ಹಾರಿ
ಹಮ್ಮಿಗೆ ಗದ್ಗದ ಮೂಡಿ
ತರ್ಕ ಚಿತೆಗೆ ಬಿದ್ದಿತ ?
ತಳದ ಹುತ್ತ ಬಾಯಿ ತೆರೆದು
ನಿದ್ದೆಯಿದ್ದ ನಾಗರಾಗ
ಮೂಕಸನ್ನೆ ತಾಕಲಾಡಿ ಎಚ್ಚರಕ್ಕೆ ಚೆಲ್ಲಿತ ?
ಬಾನಿನ ಮಹೇಂದ್ರಕಾಯ
ಅಸಂಖ್ಯ ನೇತ್ರವ ಬಿಚ್ಚಿ
ಉಳುಕಿದ ಮಣ್ಣೆದೆಯನ್ನು ಚಂದ್ರಹಸ್ತ ಸವರಿತ ?

ಬಂದಿರೇ, ಆಹ!
ಬನ್ನಿರೇ
ಏಕಾಂತಕ್ಕೆಳೆವ ಒಗಟುಗಳೇ
ಬಗೆಹರಿಯದ ಜಿಗಟುಗಳೇ
ಯಾಕೆ ಹೀಗೆ ಕಾಡುತ್ತೀರಿ ?
ಮೋಡದಲ್ಲಿ ನಿಧಾನ ಮೂಡುವ ಅರ್ಥಾತೀತ ಗೂಢಗಳೆ
ಹೊಳೆ ಬೆಟ್ಟ ಬಿಕ್ಕಿದ ಅನುಕ್ತ ಗಾಢಗಳೆ
ನೇಗಿಲು ಹೂಡುತ್ತೀರಿ ಯಾಕೆ ಎದೆಗೆ ನಿಷ್ಕರುಣಿಗಳೆ?
ನಿದ್ದೆ ಹಬ್ಬದ ನೋವ ಬೆಳೆಯುತ್ತೀರಿ ಯಾಕೆ ?
ತಬ್ಬಿದ ಮಣ್ಣಿನ ಸುಖಕ್ಕೆ ಮುಳಿಯುತ್ತೀರಿ ಯಾಕೆ ?
ನಿಂತ ಮುಖ ನಿಂತಂತೆ ಚಲಿಸುವ ನೀವು
ದಯಾಕ್ಷಿ ಭಯಗಳೆ
ರಾಕ್ಷಸ ನಯಗಳೆ
ಲಕ್ಷಣಗೆರೆ ದಾಟಿಸಬರುವಿರೆ ?
ವ್ಯವಹಾರ ಕೊಯಿಲಾಗುವ ಮುನ್ನ
ಮಳೆ ನಷ್ಟದಲ್ಲಿ ಹುಟ್ಟುವ
ಹೆಸರಿಲ್ಲದ ಇಷ್ಟಗಳೆ
ಯಾಕೆ ಕಾಡುತ್ತೀರಿ ಹೀಗೆ ?
ಕಾಡಿ, ಮುಖ ದೀನಮಾಡಿ
ಬೇಡುವ ಧಾಟಿಯಲ್ಲಿ ನೀಡಿಬಿಡುತ್ತೀರಿ ಹೇಗೆ ?

ಉರಿವ ಹಗಲ ಆರಿಸಿದ
ಇರುಳ ಪನ್ನೀರೇ ಘನಿಸಿತೆ ?
ಕಿರುತಿಂಗಳ ಕೊರಗುಬೆಳಕಲ್ಲಿ ಮುಗಿಲು
ಮುಡಿಗಡ್ಡದ ಮುನಿಗಳ ರೂಪಿಸಿತೆ ?
ಮುನಿಗಳೆ!
ಪಾತಾಳ ಜಯಿಸಿದ ದನಿಗಳೆ
ನಿಮ್ಮ ಕೈಕಾಲಿಗೆ ನೀರೆರೆಯಲಿ ಹೇಗೆ
ಕಲಿತ ವೇದಾಂತವೆಲ್ಲ ಬಚ್ಚಲ ಕೊಚ್ಚೆ;
ನಿಮಗೆ ಏನ ತೊಡಿಸಲಿ ಹೇಗೆ
ನಕ್ಷತ್ರಗಂಗೆ ಉದ್ದಸಾಲದ ಕಚ್ಚೆ;
ಕ್ಷಣಸತ್ಯದ ಹೆಣ ಮೆಟ್ಟಿ ಬರುವ
ಅಮೂರ್ತ ಗುರಿಗಳೆ
ಕಡಲೊಡಲಿಗೆ ತಣ್ಣಗೆ ಹರಿದು
ಗಿರಿನೆತ್ತಿ ಕಾರುವ ವಿರೋಧದುರಿಗಳೆ
ಕೋಟ್ಯಂತರ ಇಳೆಕಣಗಳ ಗುಡಿಸುವ ಬರಲುಗಳೆ
ಮಣ್ಣನಾಲಿಗೆಯಿಂದ ಹಿಡಿಯಲಿ ಹೇಗೆ ?
ನಿಮ್ಮನ್ನು ಹಿಡಿಯದ ನುಡಿ
ಬರಿ ನಾದದ ಬೇಗೆ.

ಗೋಳದ ಗುರುತ್ವದಾಚೆಗೆ
ಗಿರಿತೂಕವೆ ಜಳ್ಳು,
ಬೆಳಕಿನ ವೇಗಕ್ಕೆಳೆದರೆ
ಕಾಯದ ರೂಪವೆ ಸುಳ್ಳು,
ಬಣ್ಣಗಳೋ ಕಣ್ಣ ಭ್ರಮೆ
ಕಣ್ಣೋ ಅದಕ್ಕೆ ನಲಿಯುವ ಬೆಳ್ಳು,
ಇಲ್ಲಿಯ ಹಗಲು ಎಲ್ಲಿಗೊ
ಇರುಳೂ ಅಲ್ಲವಾಗಿ
ಈವರೆಗೆ ಕಂಡದ್ದೆಲ್ಲ
ಕಾಣದ್ದರ ನೆರಳು.

ಎಂಬ ಬಗೆ ಕವಿಸುವ
ಕವಿಸಿ ಕುದಿಸುವ
ಕುದಿಸಿ ಉದಿಸುವ ಧಗ ಧಗ ಚಂದ್ರರೆ
ಸತ್ಯದ ಮೈಯಲ್ಲಿ ಸುಳಿಯುವ
ಸುಳ್ಳಿನ ಚಹರೆ ನೀಡಿ ಯಾಕೆ
ಶಂಕೆಯಲ್ಲಿ ಅದ್ದುತ್ತೀರಿ ?
ಬೆಳಕು ಹರಿಯಲು ಕರಗುವ
ಅಸ್ಪಷ್ಟ ಚೀರುಗಳೆ
ಅಯ್ಯೋ!
ಯಾಕೆ ಹಾಗೆ ತೀರುತ್ತೀರಿ!
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...