Home / ಕವನ / ಕವಿತೆ / ದನಿಗಳು

ದನಿಗಳು

ನಡುರಾತ್ರಿಯ ನಾಭಿಯಲ್ಲಿ
ನೆಲ ಜಲ ಮಾತಾಡಿತ ?
ಹಗಲಿನ ಹದ್ದುಗಳು ಹಾರಿ
ಹಮ್ಮಿಗೆ ಗದ್ಗದ ಮೂಡಿ
ತರ್ಕ ಚಿತೆಗೆ ಬಿದ್ದಿತ ?
ತಳದ ಹುತ್ತ ಬಾಯಿ ತೆರೆದು
ನಿದ್ದೆಯಿದ್ದ ನಾಗರಾಗ
ಮೂಕಸನ್ನೆ ತಾಕಲಾಡಿ ಎಚ್ಚರಕ್ಕೆ ಚೆಲ್ಲಿತ ?
ಬಾನಿನ ಮಹೇಂದ್ರಕಾಯ
ಅಸಂಖ್ಯ ನೇತ್ರವ ಬಿಚ್ಚಿ
ಉಳುಕಿದ ಮಣ್ಣೆದೆಯನ್ನು ಚಂದ್ರಹಸ್ತ ಸವರಿತ ?

ಬಂದಿರೇ, ಆಹ!
ಬನ್ನಿರೇ
ಏಕಾಂತಕ್ಕೆಳೆವ ಒಗಟುಗಳೇ
ಬಗೆಹರಿಯದ ಜಿಗಟುಗಳೇ
ಯಾಕೆ ಹೀಗೆ ಕಾಡುತ್ತೀರಿ ?
ಮೋಡದಲ್ಲಿ ನಿಧಾನ ಮೂಡುವ ಅರ್ಥಾತೀತ ಗೂಢಗಳೆ
ಹೊಳೆ ಬೆಟ್ಟ ಬಿಕ್ಕಿದ ಅನುಕ್ತ ಗಾಢಗಳೆ
ನೇಗಿಲು ಹೂಡುತ್ತೀರಿ ಯಾಕೆ ಎದೆಗೆ ನಿಷ್ಕರುಣಿಗಳೆ?
ನಿದ್ದೆ ಹಬ್ಬದ ನೋವ ಬೆಳೆಯುತ್ತೀರಿ ಯಾಕೆ ?
ತಬ್ಬಿದ ಮಣ್ಣಿನ ಸುಖಕ್ಕೆ ಮುಳಿಯುತ್ತೀರಿ ಯಾಕೆ ?
ನಿಂತ ಮುಖ ನಿಂತಂತೆ ಚಲಿಸುವ ನೀವು
ದಯಾಕ್ಷಿ ಭಯಗಳೆ
ರಾಕ್ಷಸ ನಯಗಳೆ
ಲಕ್ಷಣಗೆರೆ ದಾಟಿಸಬರುವಿರೆ ?
ವ್ಯವಹಾರ ಕೊಯಿಲಾಗುವ ಮುನ್ನ
ಮಳೆ ನಷ್ಟದಲ್ಲಿ ಹುಟ್ಟುವ
ಹೆಸರಿಲ್ಲದ ಇಷ್ಟಗಳೆ
ಯಾಕೆ ಕಾಡುತ್ತೀರಿ ಹೀಗೆ ?
ಕಾಡಿ, ಮುಖ ದೀನಮಾಡಿ
ಬೇಡುವ ಧಾಟಿಯಲ್ಲಿ ನೀಡಿಬಿಡುತ್ತೀರಿ ಹೇಗೆ ?

ಉರಿವ ಹಗಲ ಆರಿಸಿದ
ಇರುಳ ಪನ್ನೀರೇ ಘನಿಸಿತೆ ?
ಕಿರುತಿಂಗಳ ಕೊರಗುಬೆಳಕಲ್ಲಿ ಮುಗಿಲು
ಮುಡಿಗಡ್ಡದ ಮುನಿಗಳ ರೂಪಿಸಿತೆ ?
ಮುನಿಗಳೆ!
ಪಾತಾಳ ಜಯಿಸಿದ ದನಿಗಳೆ
ನಿಮ್ಮ ಕೈಕಾಲಿಗೆ ನೀರೆರೆಯಲಿ ಹೇಗೆ
ಕಲಿತ ವೇದಾಂತವೆಲ್ಲ ಬಚ್ಚಲ ಕೊಚ್ಚೆ;
ನಿಮಗೆ ಏನ ತೊಡಿಸಲಿ ಹೇಗೆ
ನಕ್ಷತ್ರಗಂಗೆ ಉದ್ದಸಾಲದ ಕಚ್ಚೆ;
ಕ್ಷಣಸತ್ಯದ ಹೆಣ ಮೆಟ್ಟಿ ಬರುವ
ಅಮೂರ್ತ ಗುರಿಗಳೆ
ಕಡಲೊಡಲಿಗೆ ತಣ್ಣಗೆ ಹರಿದು
ಗಿರಿನೆತ್ತಿ ಕಾರುವ ವಿರೋಧದುರಿಗಳೆ
ಕೋಟ್ಯಂತರ ಇಳೆಕಣಗಳ ಗುಡಿಸುವ ಬರಲುಗಳೆ
ಮಣ್ಣನಾಲಿಗೆಯಿಂದ ಹಿಡಿಯಲಿ ಹೇಗೆ ?
ನಿಮ್ಮನ್ನು ಹಿಡಿಯದ ನುಡಿ
ಬರಿ ನಾದದ ಬೇಗೆ.

ಗೋಳದ ಗುರುತ್ವದಾಚೆಗೆ
ಗಿರಿತೂಕವೆ ಜಳ್ಳು,
ಬೆಳಕಿನ ವೇಗಕ್ಕೆಳೆದರೆ
ಕಾಯದ ರೂಪವೆ ಸುಳ್ಳು,
ಬಣ್ಣಗಳೋ ಕಣ್ಣ ಭ್ರಮೆ
ಕಣ್ಣೋ ಅದಕ್ಕೆ ನಲಿಯುವ ಬೆಳ್ಳು,
ಇಲ್ಲಿಯ ಹಗಲು ಎಲ್ಲಿಗೊ
ಇರುಳೂ ಅಲ್ಲವಾಗಿ
ಈವರೆಗೆ ಕಂಡದ್ದೆಲ್ಲ
ಕಾಣದ್ದರ ನೆರಳು.

ಎಂಬ ಬಗೆ ಕವಿಸುವ
ಕವಿಸಿ ಕುದಿಸುವ
ಕುದಿಸಿ ಉದಿಸುವ ಧಗ ಧಗ ಚಂದ್ರರೆ
ಸತ್ಯದ ಮೈಯಲ್ಲಿ ಸುಳಿಯುವ
ಸುಳ್ಳಿನ ಚಹರೆ ನೀಡಿ ಯಾಕೆ
ಶಂಕೆಯಲ್ಲಿ ಅದ್ದುತ್ತೀರಿ ?
ಬೆಳಕು ಹರಿಯಲು ಕರಗುವ
ಅಸ್ಪಷ್ಟ ಚೀರುಗಳೆ
ಅಯ್ಯೋ!
ಯಾಕೆ ಹಾಗೆ ತೀರುತ್ತೀರಿ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...