Home / ಕವನ / ಹನಿಗವನ / ಅನಾಮಿಕಗಳು

ಅನಾಮಿಕಗಳು

ಒಮ್ಮೊಮ್ಮೆ
ಎವೆಕಳಚಿ ಕೂರುತ್ತೇನೆ ಒಬ್ಬನೇ.
ನಿಧಾನ ಇಳಿಯುತ್ತೇನೆ :
ಅಪ್ಪನ ತಲೆ
ಅಜ್ಜನ ಎದೆ
ಮಾಸಿದ ಮುಖಗಳ ಕಟಿ ತೊಡೆ ನಡೆ
ಬಹಳ ಬೇಕಾಗಿಯೂ
ತಿಳಿಯದ ಹೆಡೆ ;
ಇಳಿ ಇಳಿಯುತ್ತ
ಸದ್ದಿಲ್ಲದೆ ಸುತ್ತ ಹುತ್ತ ಏಳುತ್ತ
ಬೆಳಕು ತೊದಲುತ್ತದೆ
ನೆನಪು ಮಾಸುತ್ತದೆ
ಕತ್ತಲ ರಾಡಿ
ಉಗ್ಗಿ ಹಾಯುತ್ತದೆ.
ಈಗ
ತೆವಳುವುದೆ ಸರಿ
ಮರವು ಮಂಪರಿನ
ತಳಕ್ಕೆ, ಅಲ್ಲ,
ಇನ್ನೂ ಕೆಳಕ್ಕೆ :
ದನಿ ಜಿಗಿಯದ ಪಿಸು ಉಸುರಿನ
ಹೊಲಕ್ಕೆ.

ಬರುತ್ತಿವೆ ಮೇಲೆ
ನಿಧಾನ ಉಬ್ಬುವ ದಿಬ್ಬಗಳು
ಮಬ್ಬಿನವು,
ಹಾಗೇ ಕೊರಗಿನಲ್ಲಿ
ಗಾತ್ರ ಸಮೆಸಮೆದು

ಅರರೇ
ಗಜ್ಜುಗ ಗಾತ್ರದ ಬೀಜಗಳು;
ಆಕಾರದ ಬಿಗಿತಕ್ಕೆ
ಇಂದ್ರಿಯ ಜಿಗಿತಕ್ಕೆ
ಒಗ್ಗದ ಬಗ್ಗದ
ಕಾಮರೂಪಿ ತಾಮಸ ಕುಡಿಗಳು ;
ದಟ್ಟ ಬೆಳಕನ್ನ ಬೇಡುವ
ಕರಿಗೋಡೆಗೆ ತಲೆ ತೀಡುವ
ಕಿರುಗತ್ತಲೆಗಳು
ಭಾಷೆ ಹೊದೆಯದ ಬೆತ್ತಲೆಗಳು;
ದರಿ ಪೊದೆಗಳ
ಒಡಲಿನಲ್ಲಿ ಪಿಸುಗುಟ್ಟುವ
ಹಸಿ ಬೆದೆಗಳು
ಹೊಸ ಕುದಿಗಳು.

ಇವು
ಮೆತ್ತಗೆ ಬಿಚ್ಚಿ ಸುತ್ತಿದ ಸಿಂಬಿ
ಸರಸರ ಪರಪರ
ಹುಸಿನಿಜಗಳ ನಂಬಿ
ಹುದುಗಿ ಸರಿಯುವ ಹಾವು ನೋವುಗಳು
ಕಾವುಗಳು
ಯಾವ ಏಟಿಗೆ ಎದ್ದವೋ
ಈ ಬಾವುಗಳು?

ಒಂದೆರಡನ್ನು ಹಿಡಿದು,
ಹಗಲಿಗೆ ಎದ್ದೆ
ಎನ್ನುವ ಮೊದಲೇ ಜಾರಿ
ಕೈಯಿಂದ ಬಿದ್ದುವು.
ಸಂದಿತನಕ ಬಂದಿದ್ದಾಗ
ನೋಡಿದೆನಲ್ಲ.
ರಾಡಿ ಬೆಳಕಲ್ಲಿ ಕೆಂಚು ಹಪ್ಪಳದಂತೆ
ಕೊಂಚ ತುದಿ ಕಂಡವು.

ಎಂಥದೋ ದೆವ್ವದ ಮರಿಗಳ?
ಎಂಥದೋ ದೈವ ಹೆತ್ತವ?
ಅರ್ಥವಾಗದು.
ಹುಟ್ಟದ ಕೂಸಿನ ಮೈ ಮುದ್ರೆ
ಗುರುತಿಸುವುದು ಹೇಗೆ?
ಮತ್ತೆ ಪುಳಕ್ಕನೆ ಮುಳುಗಿದವು
ತಳದಲ್ಲಿ,
ಕತ್ತಲ
ಕೊಳದಲ್ಲಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...