Home / ಕವನ / ಕವಿತೆ / ನೀ ಕರುಣಿಸಿದ ಬೆಳಕು

ನೀ ಕರುಣಿಸಿದ ಬೆಳಕು

ಹುಲ್ಲುಗಾವಲ ಹುಡುಕಿ ಹೊರಟ ಪಶುಗಳ ಹಿಂಡು
ಮುಂದೆ ಮುಂದೆ
ಕಾಯುತ್ತ ಹೊರಟಿರುವ ಗಂಡು ಹೆಣ್ಣಿನ ದಂಡು
ಅದರ ಹಿಂದೆ
ಪಶುಗು ಪಶುಪತಿಗು ಇರುವೆಲ್ಲ ಅಂತರ ಪಾದಸಂಖ್ಯೆಯೊಂದೆ.
ಕಾಲೆರಡು ಕೈಯಾಗಿ
ಬಾಲ ಕ್ಷೀಣಿಸಿ ಅಡಗಿ
ತಲೆ ಬದಲು ಬುದ್ಧಿಗೇ ಕೊಂಬು ಮೂಡಿ
ಬೆಳೆದ ಹಮ್ಮಿಗೆ ಈ ದ್ವಿಪಾದಿ ತಂದೆ.
ಅಪ್ಪನೋ ಅಣ್ಣನೋ ಅತ್ತಿಗೆಯೊ ಸೊಸೆಯೊ
(ಭಾಷೆ ಯಾರಿಗೆ ಗೊತ್ತು?)
ಗಂಡು ಬಿತ್ತ
ತಿಳಿದ ಸಂಬಂಧ ಒಂದೇ
ಹೆಣ್ಣು ಕ್ಷೇತ್ರ.
ಎಲೆ ಚರ್‍ಮ ಬಟ್ಟೆ ಬರೆ
ಬೆದೆ ಕುದಿಯೆ ಗುಹೆಯೆ ಮರೆ,
ತಿಂದು ಮಲಗಿದ್ದೊಂದೆ, ಕೆರಳಿ ಹೊರಳಿದ್ದೊಂದೆ
ಪಶುವ ಬಳಸಿದ್ದೊಂದೆ ತಿಳಿದ ಸೂತ್ರ
ಕೊಳದಲ್ಲಿ ಕಂಡ ಮುಖ
ತಲೆಯ ಕಾಡಿರಲಿಲ್ಲ
ಒಳಗೆ ಮೂಡಿರಲಿಲ್ಲ ಸ್ವಗತ ಚಿತ್ರ
* * *

ಹಿಮದ ಕಣಿವೆಗಳಲ್ಲಿ ಹೊಕ್ಕು ತೂರಿ
ತಮದ ಸಾವಿರಭವದ ಎದೆಯ ಸೀಳಿ
ನೊಂದು ಕಡೆಗೂ ಬಂದ
ಅಲ್ಲಿಂದ ಇಲ್ಲಿಗೆ
ವೋಲ್ಗಾದಿಂದ ದಿಲ್ಲಿಗೆ,
ಕದಡು ನಿಜಗಳ ಕೊಳದ ತಟ್ಟತಳಕ್ಕೆ ತಳ್ಳಿ
ತಿನಿಂತ ಕಲಿಕೆಗೆ,
ಭಯದಿಂದ ಉಳಿಕೆಗೆ
ಸ್ವಂತ ವೃತ್ತದ ಆಚೆ ಮುಗಿಲ ಡಮರುಗ ಕೇಳಿ
ನವಿಲಿಡುವ ಕೇಕೆಗೆ.
ಬಂದ ರಭಸಕೆ ದಣಿದು
ಹುಟ್ಟು ಪಯಣವ ತಡೆದು
ಹಾಯೆನಿಸಿ ಉರುಳಿದ
ಹೊರಳಿದ ಅರಳಿದ
ಗಂಗೆ ಯಮುನೆಯರ ಸಿರಿದಡಗಳಲ್ಲಿ,
ಗ್ರಹ ತಾರೆಗಳು ಹೊಳೆವ, ನಭಕ್ಕೆ ಮುಗಿಲನು ಬೆಳೆವ
ಜೀವನದಿಗಳು ಕೊಟ್ಟ ಕನಸಿನಲ್ಲಿ
* * *

ಎದ್ದಾಗ ಕಣ್ಣಲ್ಲಿ ನಕ್ಷತ್ರಗಳ ಬೆಳಕು
ದನಿ ಹೊರಳಿ ನಡುನಡುವೆ ಸಣ್ಣ ಗುಡುಗು.
ಒದೆಯಲೆತ್ತಿದ ಕಾಲು ಗುರಿ ಮರೆತು ತೂಗಿ
ಹೊಡೆಯಲೆತ್ತಿದ ತೋಳು ಬಿನ್ನಾಣ ಬೀಗಿ
ಪ್ರಥಮ ಶ್ರೀನೃತ್ಯದ ಅಪೂರ್ವ ಭಂಗಿ;
ತರೆದೆದೆಯ ಮೇಲೆ ಏನೇನೊ ಬಣ್ಣದ ಗುರುತು
ಬರಿಯ ಸೊಂಟವ ಮರೆಸಿ ನೂಲು ಲುಂಗಿ.
ಎರಡೆರಡು ಏಳಾಗಿ ಗಣಿತವೇ ಆಳಾಗಿ
ಲೋಕ ವ್ಯವಹಾರಕ್ಕೆ ರೂಪಾಂತರ,
ಗಿರಿ ಕಾಡು ಕಡಲು ತುಂಬಿರುವ ಉಪಗ್ರಹ ಕೂಡ
ತಾಯಾಗಿ ಉಟ್ಟಿತ್ತು ಪೀತಾಂಬರ.

ಈಗ ಸಿಡಿಲಿನ ಮೊಳಗು ಇಂದ್ರರಥ ಚೀತ್ಕಾರ,
ಕರಿಮುಗಿಲಿನೋಳಿ ರಾಕ್ಷಸರ ದಾಳಿ,
ಸುರಿವ ಮಳೆ ಅರ್ಘ್ಯ ಹೋಮಕ್ಕೆ ಕರುಣಿಸಿ ಬಾನು
ಕಾಲಕಾಲಕ್ಕೆ ಸುರಿವ ಜಲದ ಪಾಳಿ;
ಕಾಡ ಬಿದಿರಿನ ಮೊಳೆಯ ಹಾದು ಊಳಿದ ಗಾಳಿ
ತೂರಿ ಕೊಳಲಿನಲಿ ಬಗೆ ಬಗೆಯ ರಾಗ
ಬರಲಿರುವ ಭಾರಿ ನೆರೆಯರಿವು ಯಾರಿಗೆ ಆಗ?
ಪುಂಗಿನಾದಕೆ ಹೆಡೆಯ ಆಡಿಸಲು ತೊಡಗಿತ್ತು ಕಾಳನಾಗ.
* * *

ಏನು ಗೊತ್ತಿತ್ತು
ಗುರುತು ಎಲ್ಲಿತ್ತು
ನವನವೋನ್ಮೇಷೆ ನೀನೊಲಿದು ಬಂದಾಗ?
ಹಕ್ಕಿಹೂವುಗಳೆಲ್ಲ ಮಾತಾಡಿಕೊಂಡರೂ,
ದಿಕ್ಕುಗಳ ಹಣೆಯಲ್ಲಿ ಚುಕ್ಕಿಗಳು ಹೂಳದರೂ,
ಸಂಜೆಹಣ್ಣಿನ ಸುತ್ತ ಚಲಿಸಿ ನೀರದಪತ್ರ
ಕನಕಾಂಬರಗಳಾಗಿ ಉರಿ ಮಿಂಚಿ ಹನಿದರೂ,
ಹರಿವ ತೊರೆಗಳ ತಳದ ಗುರುಜುಗಲ್ಲಿನ ದನಿಯ
ಶ್ರುತಿಮಾಡಿ ತನ್ನದನಿ ಅದರೊಡನೆ ಕುಣಿದರೂ
ತನ್ನನ್ನೆ ಬಳಸಿ
ನೀ ಬಂದೆ ಎಂದು
ಹೊಡೆದ ವ್ಯಾಧನು ಕೂಡ ಅರಿಯಲಿಲ್ಲ.
ಸೂರ್ಯಚಂದ್ರರ ಬಿಂಬ ನೆಲದಲ್ಲಿ ನೆಡಲು
ಮರ್‍ತ್ಯಚಿತ್ತದ ಹೊಲಕೆ ನಿನ್ನಿಳಿಸಿ ತರಲು
ತಲೆಗೊಟ್ಟು ನಿಂತಂಥ ತಾಪಸಿ ಜಟಾಧರಗೂ
ಶಾಪ ವರವಾದದ್ದು ತಿಳಿಯಲಿಲ್ಲ.
ಬದುಕನ್ನು ಬಳಸಿ ಮಲಗಿದ್ದ ಸಾವಿನ ಸರ್ಪ
ಹರಿದುಹೋದುದನವರು ಕಾಣಲಿಲ್ಲ.
* * *

ಮುತ್ತಜ್ಜ ಮುನಿಯ ಮನಕಿಳಿದ ಭಾಗೀರಥಿಯು
ಹರಿದು ಬಂದಿದ್ದಾಳೆ ಇಲ್ಲಿ ತನಕ,
ಮುಟ್ಟಿದ್ದೆ ತಡ ಮೃಗದ ಶಾಪವೂ ವರವಾಗಿ
ಕಳಚಿ ನೋಡಿದೆ ಕಣ್ಣು ತನ್ನ ಸ್ವಾರ್ಥ.
ಕೆಡೆದ ತರಗಲೆ ಎದ್ದು ಪರ್ಣಶಾಲೆ,
ಬಿದ್ದ ನೆಲವೇ ಎದ್ದು ಸೌಧಮಾಲೆ,
ಹೊದ್ದು ಹೊರಗಾದ ಅನುಭವ ನಿತ್ಯರತಿಯಾಗಿ
ಮೃಗವು ಮರೆಯಾಗುವುದು ಅನಂಗಲೀಲೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...