Home / ಕವನ / ಕವಿತೆ / ಸವಾರಿ

ಸವಾರಿ

ರಜೆಯಲ್ಲಿ ಹಳ್ಳಿಯ ಮನೆಗೆ ಹೊರಟಿದ್ದೆ.
ಹಳೆಮನೆ, ಅಮ್ಮ ಮುದುಕಿ, ಇಲ್ಲೇ ಸಾಯುತ್ತೇನೆ ಎನ್ನುವ ಹಟ,
ತಾನೇ ಬೇಯಿಸಿಕೊಂಡು
ಮೈಕೈ ನೋಯಿಸಿಕೊಂಡು
ಒಂದೆಮ್ಮೆಯನ್ನೂ ಮೇಯಿಸಿಕೊಂಡು
ಅಲ್ಲೇ ಅವಳ ಬಿಡಾರ.

ಹಳ್ಳಿಯಲ್ಲಿ ಕಾಲಿಡುತ್ತ ತೀರುವ ಸಂಜೆ.
ಸುತ್ತಲ ನೋಟ-
ಹಗಲಿನ ಬೆನ್ನಿನ ಮೇಲಿನ ಇರುಳಿನ ಬರವಣಿಗೆ.
ಹಸು ಎಮ್ಮೆಯಾಗಿ
ರಂಗ ತಿಮ್ಮನಾಗಿ
ದಾರಿಯ ಹಳೆ ಅರಳಿ
ಮಾರಿಯ ತಲೆಯಾಗಿ
ಬುದ್ದಿಗೆ ಲೆಕ್ಕ ತಪ್ಪುವ ತಿಕ್ಕಲು ಗಳಿಗೆ.
ಮನೆ ಬಳಿ ಬಂದಾಗ
ಕಪ್ಪಗೆ
ಅಷ್ಟೆತ್ತರ
ಯಾರೋ ಒಳಹೊಕ್ಕಿದ್ದು ನೋಡಿ
‘ಯಾರಿರಬಹುದೇ, ಜವರನಾ?’ ಎಂದೆ ಇವಳಿಗೆ.
‘ಎಲ್ಲಿ, ಯಾವಾಗ? ಸುಮ್ಮನೆ ಬನ್ನಿ’ ಎಂದಳು ತಿನ್ನುವ ದನಿಯಲ್ಲಿ.
ನಗರದ ಹುಡುಗಿ ಹಳ್ಳಿಗೆ ರೇಗಿದ್ದಾಳೆ ಎನ್ನಿಸಿ
ತೆಪ್ಪಗೆ ನಡೆದು ಸೀದಾ ಮನೆಬಾಯಿಯಲ್ಲಿ ತಲೆ ಇಟ್ಟೆ

ರಾತ್ರಿ ಮಲಗಿದ್ದೇವೆ. ಎಲ್ಲರಿಗು ನಿದ್ದೆ.
ನನಗೆ ಆಯಾಸ, ಮಂಪರು
ಕೊಟ್ಟಿಗೆಯಲ್ಲಿ ಏನೋ ಸದ್ದು ಕಾಳಗ.
ಬೀಸಿದ ಹಾಗೆ
ಬಿದ್ದಹಾಗೆ
ಒಪ್ಪದೆ ಎದ್ದು ಗುದ್ದಿದ ಹಾಗೆ
ಕಟ್ಟು ಕಳಚಲು ಕಾಳಿ
ಹಿಗ್ಗಾಮುಗ್ಗಾ ಎಗರುವ ಹಾಗೆ.
ಇವಳನ್ನು ಎಬ್ಬಿಸಿ ‘ಕೊಟ್ಟಿಗೆ ಸದ್ದು ಕೇಳುತ್ತೇನೇ?’ ಎಂದೆ.
‘ಯಾಕೆ ಏನೇನೋ ಆಡುತ್ತೀರಿ ಸುಮ್ಮನೆ ಮಲಗಿ’ ಎಂದಳು
ಯತ್ನಿಸಿದೆ. ಇಲ್ಲ. ಗದ್ದಲ ಹೆಚ್ಚುತ್ತ ನಡೆದು
ಹತ್ತಿಕ್ಕಲಾಗದೆ ಎದ್ದೆ. ಹೊರಟೆ.
ಇವಳೋ
ಕತ್ತಲೆಯಲ್ಲೂ ಬೆನ್ನು ಹತ್ತಿದಳು ಸಾವಿತ್ರಿ
ಲಾಟೀನು ಹಿಡಿದು ಪಿರಿಪಿರಿ ಗೊಣಗುತ್ತ.

ಕೊಟ್ಟಿಗೆ ಹೊರಗಿನಿಂದ ಕಿವಿಕೊಟ್ಟು ಆಲಿಸಿದೆ
‘ಏನೋ ಪಿಸು ಪಿಸು ಶಬ್ದ.
ಕೇಳುತ್ತಾ?’ ಅಂದೆ ಕಿವಿಯಲ್ಲಿ.
ಅಚ್ಚರಿಯಲ್ಲಿ ನನ್ನನ್ನೇ ದಿಟ್ಟಿಸಿ
‘ಇನ್ನೂ ನಿದ್ದೆಯಾ,
ಯಾರು ಪಿಸುಗುಟ್ಟಬಹುದು ಈ ಎಂ.ಎ. ಜೊತೆ?’
ಎಂದು ನಕ್ಕಳು.
ಪಿಯುಸಿ ಫೇಲಾದವಳ ವ್ಯಂಗ್ಯ!
‘ಅಂದರೆ ಎಲ್ಲ ಕಲ್ಪನೆಯಾ?’ ಎಂದೆ.
‘ಕವಿಗಳಲ್ಲವಾ? ರವಿ ಕಾಣದ್ದೆಲ್ಲ….’
ಎಂದು ತಿವಿದು ಅರಳಿದಳು.
ಕೊಟ್ಟಿಗೆ ಬಳಿಯೂ ಸರಸ,
ಇರುಳಿಗೇ ಹಾಗೆ
ಜೀವ ನೆಕ್ಕುವ ಚಪಲ ಎನ್ನಿಸಿ
ಲಾಟೀನು ಹಿಡಿದು ಒಳಕ್ಕೆ ಕಾಲಿಟ್ಟೆ.

ಯಾರೋ ದೀಪಕ್ಕೆ ಗುರಿಯಿಟ್ಟು ಉಫ್ ಎಂದಂತೆ
ಹುಷ್ಷನೆ ಉಸಿರು ನುಗ್ಗಿ ಗುರಿ ತಪ್ಪಿ ಬೆಳಕು ಆಡಿತು.
ಒಂದೇ ಗಳಿಗೆ
ನಾನು, ಎಮ್ಮೆ, ಕಂಬ, ಕಲಗಚ್ಚಿನ ಬಾನಿ-ಎಲ್ಲಕ್ಕೂ
ಈ ತುದಿಯಿಂದ ಆ ತುದಿತನಕ
ನೆರಳಿನ ತೂಗುಯ್ಯಾಲೆ.
ನಿಂತಿರುತ್ತ ಎದುರೇ ನನ್ನ ಬಿಂಬದ ಪರಿಭ್ರಮಣ.
ಆಹಾ! ಎನ್ನಿಸಿ ನೋಡಿದೆ
ನೋಡುತ್ತ ನೋಡುತ್ತ –
ಎಲ ಎಲ ಏನದು!
ನಮ್ಮ ನೆರಳಿನ ಜೊತೆಗೂ ತೂಗುವ
ಕೆದರಿದ ಕೂದಲ
ಆ ಭಯಂಕರ ತಲೆ ಯಾರದು?
ಹೊರಳಿ ನೋಡುವ ಸೆಳೆತ, ಕಾತರ
ಆಗದ ಭಯ
ನೆತ್ತರು ಹೆಪ್ಪಾಗಿ
ಅಮ್ಮಾ ಎಂದು ಚೀರಿ
ಹಠಾತ್ತನೆ ಜಿಗಿದೆ ಹೊರಕ್ಕೆ
ಹಣೆಬಡಿಸಿಕೊಂಡು ಬಾಗಿಲ ಚೌಕಕ್ಕೆ.

‘ಏನ್ರೀ’ ಎಂದಳು ಬೆದರಿ
‘ಏನಿಲ್ಲ ಕಪ್ಪೆ’ ಎಂದೆ ತೊದಲಿ.
ನಗುತ್ತಿದ್ದವಳ ಕಣ್ಣು ತಪ್ಪಿಸಿ
ನಿಧಾನ ಓರೆಗಣ್ಣಲ್ಲಿ
ಕೊಟ್ಟಿಗೆ ಮೂಲೆಗೆ ದೃಷ್ಟಿ ಹರಿಸಿದೆ
ಹುಲ್ಲು ಉಚ್ಚೆ ಸಗಣಿ ಹೊಂಡಗಳ ನರಕದಲ್ಲಿ
ಸವಾರಿ ಹೊರಟು ನಿಂತಂತಿದ್ದ ರಾವುಗಣ್ಣಿನ ಮಹಿಷ!
* * *

ಬೆಳಿಗ್ಗೆ ಕಣ್ಣುಬಿಟ್ಟಾಗ ಗಂಟೆ ಒಂಬತ್ತು
ಮೈ ಸಣ್ಣಗೆ ಸುಡುತ್ತಿತ್ತು
ಕಾಫಿ ಕೊಟ್ಟ ಅಮ್ಮನ ಕಣ್ಣ ಅತ್ತು ಕೆಂಪಾಗಿತ್ತು
ಅಮ್ಮ ಹಣೆ ಸವರುತ್ತ –
‘ಏನೋ ರಾಮು ಇದೆಲ್ಲ?
ಬಂದವನೇ ತಲೆ ಬಡಿಸಿಕೊಂಡೆಯಲ್ಲ’ ಎಂದಳು.
ನಿಟ್ಟುಸಿರು ಬಿಟ್ಟು ಮತ್ತೆ
‘ಸದ್ಯ ಇಷ್ಟಕ್ಕೇ ಮುಗಿಯಿತಲ್ಲ
ಹೇಗಿದೆ ನೋಡು ಗುರುತು
ಥೇಟು ಕೈಬೆರಳ ಹಾಗೆ!’ ಎಂದಳು.
ನಾನು ‘ಅಮ್ಮ, ರಾತ್ರಿ ಕಾಳಿ…’ ಎಂದದ್ದೇ ತಡ
ಬಿಕ್ಕುತ್ತ
‘ಬಂಡೆ ಹಾಗಿತ್ತು ಮುಂಡೇದು’
ಯಾರದ್ದು ಇದಕ್ಕೆ ಬಡಿಯಿತೋ
‘ಋಣ ಮುಗಿಸಿ ಹೋಯಿತು’ ಎಂದು
ಗಳಗಳ ಅತ್ತಳು.
*****

 

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ