Home / ಕವನ / ಕವಿತೆ / ಸತ್ಯ ಎಂದರೆ ಗಡಿಯಾಚೆಯ ಸುಳ್ಳು

ಸತ್ಯ ಎಂದರೆ ಗಡಿಯಾಚೆಯ ಸುಳ್ಳು

‘ಬಿಡಿ ಬಿಡಿ, ಎಲ್ಲ ಬರಿ ಉಡಾಫೆ’ ಎಂದೆ,
ನಕ್ಕರು.

‘ನೋಡು ಮರಿ, ಹತ್ತಾರು ಬಾರಿ
ಹೋಗಿ ಬಂದಿರುವ ದಾರಿ,
ಹೆಜ್ಜೆ ಗುರುತಿರುವ ಕಾಡು
ಬೇಕಾದರೆ ಬಂಡವಾಳ ಹೂಡು.
ಆದರೆ ಒಂದು ವಿಷಯ
ಊರಿರುವದೇ ಆಚೆ
ಹೋಗಿ ಸೇರಲೇ ಬೇಕು,
ದಾರಿ ಸಾಗಲೇ ಬೇಕು,
ತಕ್ಕ ಆಸಕ್ತಿಗೆ ಕಾಯಲೇಬೇಕು’
ಎಂದರು.

‘ಹೇಳಿಬಿಡಿ’ ಎಂದೆ
ಹಾಳಾಗಲಿ
ಕೇಳಿ ಕಳಿಸಿಬಿಡೋಣ
ಪ್ರಾರಬ್ಧ ಅಂತ.
ಅಸಹನೆ ಅರ್ಥವಾಗಿ ನಕ್ಕರು.

‘ಗಡಿಯೊಳಗೇ ಇರುವವನಿಗೆ’ ಗೋಡೆ ಅಡ್ಡವಾಗಿ
ಥಿಯೇಟರಿನೊಳಗಿನ ಚಿತ್ರದ ಸತ್ಯ ಇದೆಲ್ಲ.
ಮೈ ಅಲುಗದಂತೆ ಕುರ್ಚಿಯಲ್ಲಿಯೇ ಇದ್ದು
ಮನಸ್ಸು ಮಾತ್ರ ಅದರಿಂದ ಎದ್ದು
ಶಕುಂತಳೆ ರೇಖಾಳನ್ನು ದುಶ್ಯಂತ ಅಮಿತಾಭನಾಗಿ ತಬ್ಬುವ,
ಯಾರ ಒಡಲಲ್ಲೋ ಇಳಿದು
ತನ್ನಾಸೆಗಳನ್ನು ಆಡಿ ಕಳೆದು
ಕಡೆಗೆ ಕೊಳಬಿಟ್ಟು ಬರುವ ಅನುಭವ-
ಹೇಳು ನಾವು ಯಾರು?’ ಎಂದರು.
‘ಇದೆಲ್ಲ ಕಲೆ ನಾಟಕ ಚಿತ್ರದ ವಿಷಯ
ಉಳಿದದ್ದು ಹೇಳಿ ಈ ಗಟ್ಟಿಲೋಕ ಸುಳ್ಳಾ?’ ಎಂದೆ.

‘ಇಲ್ಲ.
ಬಾಳುತ್ತಿರುವ ಸುಳ್ಳು
ಸಾಯುವ ತನಕದ ಸತ್ಯ,
ಕನಸಿನಲ್ಲಿ ಅಸಂಬದ್ಧವೆಲ್ಲ ನಡೆಯೋಲ್ಲವಾ?’ ಎಂದರು.
ಕುತೂಹಲ ಚಿಗುರಿ
‘ಹೌದು ಹೌದು ಹೇಳಿ’ ಎಂದೆ
‘ಅಸಂಬದ್ಧ ಆಡಿಲ್ಲವಾ
ಅಸಂಬದ್ಧ ಕೇಳಿಲ್ಲವಾ?
ಕಂಡಿದ್ದ ಮೈಗೆ
ಕಾಣದ ಮುಖ ಹುಟ್ಟಿ
ಕೈಯನ್ನೇ ರೆಕ್ಕೆ ಹಾಗೆ ಬೀಸಿ ಗಾಳಿಯಲ್ಲಿ ಈಜಲ್ಲವಾ?
ನದಿತಳದಲ್ಲಿ ಮನೆ,
ಜಲಕನ್ಯೆಯ ಜೊತ ಭೋಗ,
ಅರ್ಧಗಂಟೆಯಲ್ಲೇ ಐವತ್ತು ವರುಷ ಬಾಳಿಲ್ಲವಾ?
ಬಗೆ ಬಗೆ ಸತ್ಯ,
ಎಲ್ಲಕ್ಕೂ ಅದರದ್ದೇ ಗಣಿತ ಕುಣಿತ
ಯಾರು ಪ್ರಶ್ನಿಸಿದ್ದರು ಅವನ್ನು ಗಡಿಯೊಳಗೆ
ಯಾವತ್ತು?’ ಎಂದರು.

ಎಲಾ! ಎನಿಸಿತು.
ನಿಜವೆನಿಸಿದರೂ ಒಪ್ಪಲು ಬಾರದೆ ಕೇಳಿದೆ
‘ಇದೆಲ್ಲ ಕನಸು ಕುಡಿಯುವ ಮನಸಿನ ಅಮಲು ಅಲ್ಲವೆ?
ಹುಲ್ಲಿನ ಮಾತು ಹೇಳಿ
ಕಂಪಿಸಲೂ ಬಾರದ ಕಲ್ಲಿನ ಮಾತು ಹೇಳಿ
ಕುಡಿಯಲು ಬಾರದ ಬೆಟ್ಟ ನದಿ ಜಡಗಳ ಸತ್ಯಕ್ಕೆ
ಎಲ್ಲಿದೆ ದಾಳಿ ?’ ಎಂದು
ಕಡೆಗೊಮ್ಮೆ ಹೆಡತಲೆಗೇ ಕೊಡಲಿ ಬೀಸಿದೆ!
‘ಹೌದಾ’ ಎಂದವರೇ ನಗುತ್ತ ಕೇಳಿದರು;
‘ಭೂಮಿಯ ಸೆಳೆತ ಮೀರಿದ ಮೇಲೆ
ಮಣಕ್ಕೆ ಎಷ್ಟು ತೂಕ, ತೃಣಕ್ಕೆ ಎಷ್ಟು ತೂಕ?
ನದಿ ಅಲ್ಲಿ ಹರಿಯುತ್ತದೆಯೆ?
ಕಾಮನ ಬಿಲ್ಲಿನ ಬಣ್ಣಗಳಲ್ಲಿ
ಯಾವುದು ಸುಳ್ಳು, ಯಾವುದು ಸಾಚಾ,
ಸತ್ಯಕ್ಕೆ ತಡೆಯುತ್ತದೆಯೆ?
ಬೆಳಕಿನ ವೇಗದಲ್ಲಿ ಎಸೆದರು ಎನ್ನು
ವಸ್ತು ಉಳಿಯುತ್ತದೆಯೆ?
ಹೇಳು ಹೇಳು,
ಸತ್ಯ ಎಂದರೆ ಯಾವುದು ಹೇಳೋ’ ಎಂದರು.

ಕಂಗಾಲಾದೆ
ಕುತ್ತಿಗೆಗೆ ಗುರಿಯಿಟ್ಟಂತೆ
ಹಿಂದಕ್ಕೆ ಬೀಸಿ ಬರುತ್ತಿರುವುದು
ನಾನೇ ಬೀಸಿದ ಕೂಡಲಿ ಎನಿಸಿತು.
ಗುರಿಗೆ ಸರಿಯಾಗಿ ತಲೆಕೊಡುತ್ತ ಹೇಳಿದೆ:
‘ಹೌದು ಹೌದು,
ಗಡಿ ದಾಟಿದ ಮೇಲೆ ಎಲ್ಲ ಬರಿ ಜಳ್ಳು,
ನಮ್ಮ ಸತ್ಯ ಕೂಡ ಗಡಿಯಾಚೆಗೆ ಸುಳ್ಳು.’
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...