Home / ಕವನ / ಕವಿತೆ / ಒಂದು ಸಲ ಹೀಗಾಯಿತು

ಒಂದು ಸಲ ಹೀಗಾಯಿತು

ಕಲ್ಲಿನಂತಿದ್ದ ಹಲ್ಲನ್ನು
ಕಾಣದ ಕ್ರಿಮಿಗಳು ತಿಂದು
ಬೆಳಕಿನ ದಳದಂಥ ಹಲ್ಲು ಹುಳಿತು ಕಪ್ಪಾಗಿ ಹೋಯಿತು.
ಕಬ್ಬು ಸಿಗಿದ ಯಂತ್ರ ಕಡಲೆಪುರಿಗೆ ಬೆದರಿ
ನಿಂತರೆ ನೋವು, ಕೂತರೆ ನೋವು
ಮುಖ ಬಾತು ಮೂತಿ ಕುಂಬಳಕಾಯಾಯಿತು.
ಕಂಡ ಸ್ನೇಹಿತರೆಲ್ಲ ಕಷ್ಟಪಟ್ಟು ಗುರುತಿಸಿ
“ಏನೋ ಹನುಮಂತರಾಯ
ಹೆಸರು ನಿಜಮಾಡಿಕೊಂಡೆಯಲ್ಲೋ
ಯಾರ ಪ್ರಸಾದವಪ್ಪಾ” ಎಂದು ಕಿಚಾಯಿಸಿದರು!
ವಿಚಾರವೆಲ್ಲ ತಿಳಿದು –
“ಹಲ್ಲಿನ ಹಳ್ಳ ಮುಚ್ಚಿಸಿಬಿಡು ಅಥವಾ
ಹಾಳು ಹಲ್ಲೇ ಕಿತ್ತಿಸಿಬಿಡು
ಜೊತೆಗೇ ವಕ್ರ ಹಲ್ಲೆಲ್ಲ ಎತ್ತಿಸಿಬಿಡು!”
ಡೆಂಟಿಸ್ಟ್ ಜವರಪ್ಪ ಗೊತ್ತಲ್ಲ
ಮಹಾಪ್ರಚಂಡ
ಪಿಯುಸಿಲಿದ್ದಾಗಲೇ ಮೆಡಿಕಲ್ ಸೀಟು ಗಿಟ್ಟಿಸಿ
ತೊಂಬತ್ನಾಲ್ಕು ಪರ್ಸೆಂಟಿಗೇ ಟಾಂಗು ಕೊಟ್ಟ ಪಿಂಡ!
ಬಹಳ ವರ್ಷ ಓದಿದ್ದಾರೆ
ಬಹಳ ಪರೀಕ್ಷೆ ಬರೆದಿದ್ದಾರೆ
ಬಂದ ಕೇಸು ಎಂಥದೇ ಇರಲಿ
ಚೂರೂ ಉಳಿಯದಂತೆ ಕೀಳುತ್ತಾರೆ
ಹೋಗು, ಇಡಿಯ ಬಾಯೇ ಸರಿ ಮಾಡುತ್ತಾರೆ”
ಅಂತ ನಗುತ್ತ ಸಲಹೆ ಕೊಟ್ಟು
ಟಾಟಾ ಗುಡ್‌ಬೈ ಫೇರ್‌ವೆಲ್ ಎಲ್ಲ ಕಿರಿಚಿ ಹೋದರು.
ಬೆಳಿಗ್ಗೆ ಎದ್ದವನೇ ಡಾಕ್ಟರಲ್ಲಿಗೆ ಓಡಿದೆ.
ಸೋಡಾ ಸೀಸೆ ಕನ್ನಡಕದ
ಸೇಡಿನ ಛಾಯೆ ಮುಖದ
ಆರಡಿ ಸೈಂಧವ ಡಾಕ್ಟರನ್ನು ನೋಡಿ
ಒಳಗೇ ಜೀವ ನಡುಗಿತು.
ಬ್ಯಾಸ್ಕೆಟ್‌ಬಾಲ್‌ ಕ್ಯಾಪ್ಟನ್ನಿನಂತಿದ್ದ ಡಾಕ್ಟರು
ಕುರ್ಚಿಗೆ ನನ್ನನ್ನು ತಳ್ಳಿ
ಕಣ್ಣೆತ್ತರಕ್ಕೇರಿಸಿಕೊಂಡರು
ಮರದ ಸಣ್ಣ ಸುತ್ತಿಗೆ ಎತ್ತಿಕೊಂಡು
ತಲೆಗೆ ಸರ್ಚ್‍ಲೈಟ್ ಬಿಟ್ಟರು.
ಸುತ್ತಿಗೆಯಿಂದ ಮೆತ್ತಗೆ ನೆತ್ತಿ ಮೇಲೆ ಬಡಿದರು
ಕತ್ತಿನ ಕೆಳಗೆ ಬಡಿದರು
ಕುತ್ತಿಗೆ ಪಕ್ಕ ಬಡಿದರು.
ಗಾಬರಿಯಾಗಿ ‘ಡಾಕ್ಟರೇ!’ ಎಂದೆ.
‘ಯೋಚನೆ ಬೇಡಿ ಎಲ್ಲ ನಿರ್ನಾಮ ಮಾಡಿಬಿಡುತ್ತೇನೆ’ ಎಂದರು
‘ಅಲ್ಲಲ್ಲ ಡಾಕ್ಟರೇ, ಇಲ್ಲಿ ಹಲ್ಲು’ ಎಂದೆ.
‘ಹಯ್ಯೋ ಅಜ್ಞಾನವೆ!
ಅಲ್ಲಿಗೆ ಇಲ್ಲಿಗೆ ಹಲ್ಲಿಗೆ
ನಡುನೆತ್ತಿಯಿಂದ ಎಲ್ಲೆಂದರಲ್ಲಿಗೆ
ಎಲ್ಲದಕ್ಕೂ ಸಂಬಂಧವಿದೆ ಇವರೆ
ಇಲ್ಲಿ ತಟ್ಟಿದರೆ ಅಲ್ಲಿ ಅಲುಗಬೇಕು, ಕೇಳಿಲ್ಲವಾ
You cannot stir a stone
without disturbing a star’ ಎಂದರು!
ಒಳ್ಳೆ ಗ್ರಹಚಾರವಾಯಿತಲ್ಲ ಎನ್ನಿಸಿತು.
ಚಾಕು ಸೂಜಿ ಕತ್ತರಿ ಎಲ್ಲ
ನನ್ನೆದುರೇ ಕುದಿಸಲು ಹಾಕಿ
ಕೂತಿರಿ ಹೊರಗೆ ಮತ್ತೆ ಕರೆಯುತ್ತೇನೆ ಒಳಗೆ
ಎಂದರು ಡಾಕ್ಟರು.
ಅದುರುವ ಎದೆ ಹಿಡಿದು ಕೂತು
ಎದುರಿಗಿದ್ದ ಪೇಪರ್ ಎತ್ತಿಕೊಂಡರೆ
ಮುಖಪುಟದಲ್ಲೇ ವೈದ್ಯರ ಚಳುವಳಿ
ಕ್ಯಾಪಿಟೇಷನ್ ರದ್ದು ಮಾಡಿ ಕತ್ತೆಗಳನ್ನು ಹೊರದೂಡಿ
ಎಂಬ ದಪ್ಪಕ್ಷರದ ಕಳಕಳಿ!

ಪರಿಸ್ಥಿತಿ ಅರ್ಥವಾಯಿತು.
ಕುದಿಯುವ ಪದಾರ್ಥಗಳನ್ನು ಬದಿಯಲ್ಲಿದ್ದವರಿಗೆ ಬಿಟ್ಟು
ಹೇಳದೆ ಕೇಳದೆ ಡಾಕ್ಟರಿಗೆ
ಹಾರಿ ಹೊರಬಂದೆ ಬೀದಿಗೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...