Home / ಕವನ / ಕವಿತೆ / ಅಂತರ

ಅಂತರ

ಹುಡುಗನಾಗಿದ್ದ ದಿನಗಳ ನೆನಪು : ಆಗ
ನಮ್ಮೂರ ಹೊಳೆ ತುಂಗೆ ಶಾಂತನಿರ್ಮಲ ಅಂತರಂಗೆ;
ಹೊರಗಿನ ಬಿಸಿಲು
ಒಳಗೆ ಬಿಂಬಿಸಿ ತಳದ ತನಕ ನದಿಯ ಮನಸ್ಸು
ಸ್ವಚ್ಛ ಪ್ರತ್ಯಕ್ಷ ಸಂಪದ್ಯುಕ್ತ
ಜಲದ ರೇಸಿಮೆಹಾಳೆ ಸೀಳಿ ಹಾಯುವ, ಹಾಗೆ
ಹೀಗೆ ಹೇಗೋ ಹೊರಳಿ ಉರಿಯ ಚಿಮ್ಮುವ ಮೀನು,
ಕೆಳಗೆ ಥಳ ಥಳ ಮರಳು
ಬಾದಾಮಿ ದ್ರಾಕ್ಷಿ ಗೋಡಂಬಿ ಬಿಕ್ಕಿದ ಹಾಗೆ
ಹೊಳೆಯ ಮೂಕ ಸುಖಕ್ಕೆ ಮಾತು ದಕ್ಕಿದ ಹಾಗೆ
ಥರಾಥರಾವರಿ ಹರಳು.

ಇದೆಲ್ಲ ತಡಿಯಲ್ಲಿ.
ಆರಂಭದಿಂದ ಹತ್ತಾರು ಅಡಿಯಲ್ಲಿ
ಯಾರಿಗು ನಿರಾಳ, ಹೊಳೆ ಇಳಿದು ಹೋದಂತೆಲ್ಲ
ಒಳ‌ಒಳಗೆ ಕೆಳಕೆಳಗೆ
ಈಜುಗಲಿ ಸೀನ ಆಚಾರಿ ದತ್ತಣ್ಣನಿಗು
ತಳಸಿಗದ ಕಾಳಹಸುರಿನ ಆಳ ಆಭೀಳ,
ಯಾವ ಕಾಲದ್ದೊ
ಯಾರ್‍ಯಾರೆಲ್ಲ ಎಸೆದದ್ದೊ
ಗಂಗೆಯ ಹೆಸರು ಹೇಳಿ ಯಾರೆಲ್ಲ ಮುಡಿಸಿದ್ದೊ
ನೆರೆಮೊರೆದು ಕರೆಯೊಡೆದು ಜಾರಿ ಒಳಸೇರಿದ್ದೊ
‘ಮುಳುಗಿ ತರಬಲ್ಲೆಯೋ ಎಲ್ಲಿ ತಾ?’ ಎನ್ನುವ
ಸವಾಲಿನಲ್ಲಿ ಎಸೆದದ್ದೊ
ಆಣೆ ಪಾವಾಣೆ ರೂಪಾಯಿ ಚಿಲ್ಲರೆಯಿರಲಿ
ಪಾತ್ರೆ ಪಡಿ ಬೆಳ್ಳಿ ಬಂಗಾರ ನಡುಸಿಂಗಾರ ಕೂಡ ಇರುವ ವದಂತಿ
ಅರೆಕಂತಿ ನದಿ ನಡುವೆ ಕರೆಯುತ್ತ ನಿಂತಿರುವ
ಆನೆ ಬಂಡೆಯ ಬದಿಗೆ
* * *

ಕಲಿಯುಕ್ಕಿ ಆನೆಬಂಡೆಯ ಕಡೆಗೆ ಈಜಿರುವ
ಪಡ್ಡೆಹುಡುಗರ ದಂಡು.
ಹತ್ತಿ, ಬಂಡೆಯ ನೆತ್ತಿ ಕೂಗಿ ಹಾರುವ ದಿಟ್ಟ ಕಿಟ್ಟಡಿಗ.
ಹುಚ್ಚುಕೆಚ್ಚಿಗೆ ಕಟ್ಟುಬೆರಗಾಗಿ ನಿಂತ ಕಟ್ಟಾಳುಗಳ ಎದುರಲ್ಲಿ
ಹೊಸ ಹೊಸಾ ಕಸರತ್ತು.
ಐದಾರು ಆಳು ಆಳದ ಮರಳ ಮೈತಬ್ಬಿ ಬರುವ
ಬಿಟ್ಟಿ ಷರತ್ತು,
ಮುಳುಗಿದನೊ, ಉಸಿರು ಬಿಗಿಹಿಡಿದು, ದಿಟ್ಟಿಯ ನೆಟ್ಟು
ರಕ್ಷೆಕಾಯುವ ಗುಂಪು.
ಬರಲಿಲ್ಲ ಒಂದು ಕ್ಷಣ
ಎಲ್ಲ ಕಣ್ಣುಗಳಲ್ಲಿ ತವಕ ಅಶಂಕೆ ಕಳವಳ ಏನೊ ತಳಮಳ.
ಮರುಚಣ
ಬಂದ ಹೋ ಹೋ ಬಂದ ಎಂಬ ಕೇಕೆಯ ನಡುವೆ
ಛಂಗನೇ ಮೇಲೆದ್ದು ಮರಳ ಸಾಕ್ಷಿಯ ತೂರಿ
ಈಜಿ ಸಾಗುವ ಛಂದ,
ಈ ಸಾಹಸಕ್ಕೆಲ್ಲ ಬೆಲೆಯಿತ್ತು, ಮೆಚ್ಚಿಗೆ ಇತ್ತು, ಮೇಲು ನೆಲೆಯಿತ್ತು.
ಮೇಲಾಟ ಹೂಡಿ ಸೆಣಸುವ ಸರಿಸವಾಲುಗಳ
ರಣಧೀರ ಪಡೆಯಿತ್ತು.
* * *

ಈಗ
ನದಿಯಲ್ಲಿ ನೀರಿಲ್ಲ,
ಏಕೊ ಕಾಲನೆ ಬಲ್ಲ,
ಕಾಸಿ ಬರೆ ಎಳೆದಂತೆ ತಳದ ಮೈಯಲ್ಲೆಲ್ಲ
ಕಪ್ಪು ಹಸಿರಿನ ನೀಳ ಪಟ್ಟೆ
ಕೊಳೆಯುವ ಬಟ್ಟೆ :
ನಡುನಡುವೆ ನಡೆಗೊಂದು ನಾಯಿಕೊಡೆ ಪಾಚಿತೊಡೆ,
ಹೆಸರಿರದ ದೆಸೆಯಿರದ ಸಸ್ಯ
ಕುರುಚಲು ಜೊಂಡು;
ರಕ್ತಮಾಂಸವೆ ಇರದ ಅಸ್ಥಿಪಂಜರ ತೆರೆದ
ಒಡಲ ಭೀತಿ
ನದಿಯ ರೀತಿ.
ಹರಿಗೋಲು ದೋಣಿ ತಪ್ಪೋತ್ಸವಗಳಿರಲಿ
ಹೆಜ್ಜೆ ಮುಳುಗದ ಲಜ್ಜೆನಡಿಗೆ ನದಿಗೆ.
ಬಣ್ಣ ಬಾವುಟವಿರದ
ಬಿದಿರ ಗುಮ್ಮಟ ಮುರಿದ
ಪಾಳುಗುಡಿ ತೇರಿನ ಬೋಳುಮಂಡೆ
ಅಸಿಧಾರೆ ಬಿಸಿಲಲ್ಲಿ ಆನೆಬಂಡೆ.
ಬಟ್ಟೆ ಒಗೆಯುವ ಕಲ್ಲು
ಊರೊಳಗೆ ಬಂದು
ಮನೆ ಮೆಟ್ಟಿಲು,
ಲಾರಿಗಟ್ಟಲೆ ಮರಳು ತೋಡಿ ಮಾಡಿದ ಹೊಂಡ
ವಟರುಗಪ್ಪೆ ಕುಲಕ್ಕೆ
ತೊಟ್ಟಿಲು.
* * *

ಬೆತ್ತಲಾಗಸದಲ್ಲಿ ಮುಂದೆಂದೊ ಮತ್ತೆ
ಕರಿಮುಗಿಲ ಜಹಜುಗಳ ಸಾಲು;
ಸಾಗಿ ಬರಲಿವೆ ದಿಕ್ಕುದಿಕ್ಕಿಂದ, ಸುಳಿವಂತೆ
ಭಾಗೀರಥಿಯ ಹೆಜ್ಜೆಗಾಲು.
ಪುಟ್ಟ ಮಸಿಗುಡ್ಡೆಗಳು ಮೈಗೆ ಮೈ ತಾಗಿ
ಬೆಳೆದೀತು ಕಾರ್ಮುಗಿಲ ಬೆಟ್ಟ;
ಇಷ್ಟು ದಿನಗಳ ಹೊಟ್ಟೆಯುರಿಯೆ ನಡಿಗೆಗೆ ನುಗ್ಗಿ
ನಡುಗದೇ ಕುಣಿತಕ್ಕೆ ಅಟ್ಟ?
ಬತ್ತಿ ಕೊಳೆಯುವ ಹೊಳೆಯ ಬಸಿರಿಗನಸು
ಕೆತ್ತಿರುವ ನೆಲದೆದೆಗೆ ಹಸಿರಿನುಣಿಸು
ಸಂದಾಯವಾದೀತು ಎಂದಾದರೊಂದು ದಿನ
ಸಪ್ಪೆ ಬಾಳಿಗೆ ಉಪ್ಪು ನಿಂಬೆ ಮೆಣಸು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...