Home / ಕವನ / ಕವಿತೆ / ಅಂತರ

ಅಂತರ

ಹುಡುಗನಾಗಿದ್ದ ದಿನಗಳ ನೆನಪು : ಆಗ
ನಮ್ಮೂರ ಹೊಳೆ ತುಂಗೆ ಶಾಂತನಿರ್ಮಲ ಅಂತರಂಗೆ;
ಹೊರಗಿನ ಬಿಸಿಲು
ಒಳಗೆ ಬಿಂಬಿಸಿ ತಳದ ತನಕ ನದಿಯ ಮನಸ್ಸು
ಸ್ವಚ್ಛ ಪ್ರತ್ಯಕ್ಷ ಸಂಪದ್ಯುಕ್ತ
ಜಲದ ರೇಸಿಮೆಹಾಳೆ ಸೀಳಿ ಹಾಯುವ, ಹಾಗೆ
ಹೀಗೆ ಹೇಗೋ ಹೊರಳಿ ಉರಿಯ ಚಿಮ್ಮುವ ಮೀನು,
ಕೆಳಗೆ ಥಳ ಥಳ ಮರಳು
ಬಾದಾಮಿ ದ್ರಾಕ್ಷಿ ಗೋಡಂಬಿ ಬಿಕ್ಕಿದ ಹಾಗೆ
ಹೊಳೆಯ ಮೂಕ ಸುಖಕ್ಕೆ ಮಾತು ದಕ್ಕಿದ ಹಾಗೆ
ಥರಾಥರಾವರಿ ಹರಳು.

ಇದೆಲ್ಲ ತಡಿಯಲ್ಲಿ.
ಆರಂಭದಿಂದ ಹತ್ತಾರು ಅಡಿಯಲ್ಲಿ
ಯಾರಿಗು ನಿರಾಳ, ಹೊಳೆ ಇಳಿದು ಹೋದಂತೆಲ್ಲ
ಒಳ‌ಒಳಗೆ ಕೆಳಕೆಳಗೆ
ಈಜುಗಲಿ ಸೀನ ಆಚಾರಿ ದತ್ತಣ್ಣನಿಗು
ತಳಸಿಗದ ಕಾಳಹಸುರಿನ ಆಳ ಆಭೀಳ,
ಯಾವ ಕಾಲದ್ದೊ
ಯಾರ್‍ಯಾರೆಲ್ಲ ಎಸೆದದ್ದೊ
ಗಂಗೆಯ ಹೆಸರು ಹೇಳಿ ಯಾರೆಲ್ಲ ಮುಡಿಸಿದ್ದೊ
ನೆರೆಮೊರೆದು ಕರೆಯೊಡೆದು ಜಾರಿ ಒಳಸೇರಿದ್ದೊ
‘ಮುಳುಗಿ ತರಬಲ್ಲೆಯೋ ಎಲ್ಲಿ ತಾ?’ ಎನ್ನುವ
ಸವಾಲಿನಲ್ಲಿ ಎಸೆದದ್ದೊ
ಆಣೆ ಪಾವಾಣೆ ರೂಪಾಯಿ ಚಿಲ್ಲರೆಯಿರಲಿ
ಪಾತ್ರೆ ಪಡಿ ಬೆಳ್ಳಿ ಬಂಗಾರ ನಡುಸಿಂಗಾರ ಕೂಡ ಇರುವ ವದಂತಿ
ಅರೆಕಂತಿ ನದಿ ನಡುವೆ ಕರೆಯುತ್ತ ನಿಂತಿರುವ
ಆನೆ ಬಂಡೆಯ ಬದಿಗೆ
* * *

ಕಲಿಯುಕ್ಕಿ ಆನೆಬಂಡೆಯ ಕಡೆಗೆ ಈಜಿರುವ
ಪಡ್ಡೆಹುಡುಗರ ದಂಡು.
ಹತ್ತಿ, ಬಂಡೆಯ ನೆತ್ತಿ ಕೂಗಿ ಹಾರುವ ದಿಟ್ಟ ಕಿಟ್ಟಡಿಗ.
ಹುಚ್ಚುಕೆಚ್ಚಿಗೆ ಕಟ್ಟುಬೆರಗಾಗಿ ನಿಂತ ಕಟ್ಟಾಳುಗಳ ಎದುರಲ್ಲಿ
ಹೊಸ ಹೊಸಾ ಕಸರತ್ತು.
ಐದಾರು ಆಳು ಆಳದ ಮರಳ ಮೈತಬ್ಬಿ ಬರುವ
ಬಿಟ್ಟಿ ಷರತ್ತು,
ಮುಳುಗಿದನೊ, ಉಸಿರು ಬಿಗಿಹಿಡಿದು, ದಿಟ್ಟಿಯ ನೆಟ್ಟು
ರಕ್ಷೆಕಾಯುವ ಗುಂಪು.
ಬರಲಿಲ್ಲ ಒಂದು ಕ್ಷಣ
ಎಲ್ಲ ಕಣ್ಣುಗಳಲ್ಲಿ ತವಕ ಅಶಂಕೆ ಕಳವಳ ಏನೊ ತಳಮಳ.
ಮರುಚಣ
ಬಂದ ಹೋ ಹೋ ಬಂದ ಎಂಬ ಕೇಕೆಯ ನಡುವೆ
ಛಂಗನೇ ಮೇಲೆದ್ದು ಮರಳ ಸಾಕ್ಷಿಯ ತೂರಿ
ಈಜಿ ಸಾಗುವ ಛಂದ,
ಈ ಸಾಹಸಕ್ಕೆಲ್ಲ ಬೆಲೆಯಿತ್ತು, ಮೆಚ್ಚಿಗೆ ಇತ್ತು, ಮೇಲು ನೆಲೆಯಿತ್ತು.
ಮೇಲಾಟ ಹೂಡಿ ಸೆಣಸುವ ಸರಿಸವಾಲುಗಳ
ರಣಧೀರ ಪಡೆಯಿತ್ತು.
* * *

ಈಗ
ನದಿಯಲ್ಲಿ ನೀರಿಲ್ಲ,
ಏಕೊ ಕಾಲನೆ ಬಲ್ಲ,
ಕಾಸಿ ಬರೆ ಎಳೆದಂತೆ ತಳದ ಮೈಯಲ್ಲೆಲ್ಲ
ಕಪ್ಪು ಹಸಿರಿನ ನೀಳ ಪಟ್ಟೆ
ಕೊಳೆಯುವ ಬಟ್ಟೆ :
ನಡುನಡುವೆ ನಡೆಗೊಂದು ನಾಯಿಕೊಡೆ ಪಾಚಿತೊಡೆ,
ಹೆಸರಿರದ ದೆಸೆಯಿರದ ಸಸ್ಯ
ಕುರುಚಲು ಜೊಂಡು;
ರಕ್ತಮಾಂಸವೆ ಇರದ ಅಸ್ಥಿಪಂಜರ ತೆರೆದ
ಒಡಲ ಭೀತಿ
ನದಿಯ ರೀತಿ.
ಹರಿಗೋಲು ದೋಣಿ ತಪ್ಪೋತ್ಸವಗಳಿರಲಿ
ಹೆಜ್ಜೆ ಮುಳುಗದ ಲಜ್ಜೆನಡಿಗೆ ನದಿಗೆ.
ಬಣ್ಣ ಬಾವುಟವಿರದ
ಬಿದಿರ ಗುಮ್ಮಟ ಮುರಿದ
ಪಾಳುಗುಡಿ ತೇರಿನ ಬೋಳುಮಂಡೆ
ಅಸಿಧಾರೆ ಬಿಸಿಲಲ್ಲಿ ಆನೆಬಂಡೆ.
ಬಟ್ಟೆ ಒಗೆಯುವ ಕಲ್ಲು
ಊರೊಳಗೆ ಬಂದು
ಮನೆ ಮೆಟ್ಟಿಲು,
ಲಾರಿಗಟ್ಟಲೆ ಮರಳು ತೋಡಿ ಮಾಡಿದ ಹೊಂಡ
ವಟರುಗಪ್ಪೆ ಕುಲಕ್ಕೆ
ತೊಟ್ಟಿಲು.
* * *

ಬೆತ್ತಲಾಗಸದಲ್ಲಿ ಮುಂದೆಂದೊ ಮತ್ತೆ
ಕರಿಮುಗಿಲ ಜಹಜುಗಳ ಸಾಲು;
ಸಾಗಿ ಬರಲಿವೆ ದಿಕ್ಕುದಿಕ್ಕಿಂದ, ಸುಳಿವಂತೆ
ಭಾಗೀರಥಿಯ ಹೆಜ್ಜೆಗಾಲು.
ಪುಟ್ಟ ಮಸಿಗುಡ್ಡೆಗಳು ಮೈಗೆ ಮೈ ತಾಗಿ
ಬೆಳೆದೀತು ಕಾರ್ಮುಗಿಲ ಬೆಟ್ಟ;
ಇಷ್ಟು ದಿನಗಳ ಹೊಟ್ಟೆಯುರಿಯೆ ನಡಿಗೆಗೆ ನುಗ್ಗಿ
ನಡುಗದೇ ಕುಣಿತಕ್ಕೆ ಅಟ್ಟ?
ಬತ್ತಿ ಕೊಳೆಯುವ ಹೊಳೆಯ ಬಸಿರಿಗನಸು
ಕೆತ್ತಿರುವ ನೆಲದೆದೆಗೆ ಹಸಿರಿನುಣಿಸು
ಸಂದಾಯವಾದೀತು ಎಂದಾದರೊಂದು ದಿನ
ಸಪ್ಪೆ ಬಾಳಿಗೆ ಉಪ್ಪು ನಿಂಬೆ ಮೆಣಸು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...