Home / ಕವನ / ಕವಿತೆ / ಅನಾಥ

ಅನಾಥ


ನಿಜ ಮಾರಾಯರೆ
ನಿಮ್ಮಂತೆ ದೊಡ್ಡಜಾತಿಯ ಗುಡ್ಡಗರ್ಭದಲ್ಲಿ
ಹುಟ್ಟಿದವ ನಾನಲ್ಲ;
ಅಂಥ ದೌರ್ಭಾಗ್ಯ ನನ್ನದಲ್ಲ.
ದಿಡ್ಡಿಬಾಗಿಲ ಬಳಿ ಗೊಡ್ಡು ಬಾಯಿಯ ತೆರೆದು
ಬುಗುಬುಗು ಬಂಡಿ ಬಿಡುವವನಲ್ಲ;
ಚಂದ್ರಬೆಳಕಿನಲ್ಲಿ ಲಾಂದ್ರ ಹುಡುಕುವ ನಿಮ್ಮ
ಸಂದಿಮನ ನನಗಿಲ್ಲ.

ನ್ಯಾಯ ಬುತ್ತಿಕಟ್ಟಿ ನೆತ್ತಿ ಮೇಲಿಟ್ಟುಕೊಂಡ
ನಕ್ಕಿ ಮುಖದ ಮಾರಾಯರೆ
ಮತ್ತೆಮತ್ತೇಕೆ ಎಳೆಯುವಿರಿ ಕಬ್ಬಿಣದ ಮೈಮೇಲೆ
ದಬ್ಬಳದ ಬರೆ?
ನನಗೆ ನೆನಪಿದೆ: ನಾನು ನಿಮ್ಮವನಲ್ಲ
ನಿಮ್ಮ ಹಳೆ ಆಸ್ತಿ ಅಸ್ಥಿ ನನಗೆ ಬೇಕಿಲ್ಲ
ಬುರುಗು ಬುದ್ಧಿ ನನ್ನದಲ್ಲ.

ಒಂದು ವೇಳೆ
ನಿಮ್ಮ ಏರ್‌ಕಂಡೀಷನ್ಡ್ ಮನೆಯಲ್ಲಿ ಹುಟ್ಟಿದ್ದರೆ
ಜಂಗಿಸಿದರೂ ಜಗ್ಗದ ದೊಡ್ಡ ಗೋಡೆಯ
ಗೂಡೆವನದಲ್ಲಿ ನನ್ನ ಸಾಕಿದ್ದರೆ
ಲಂಗರು ಹಾಕಿ ನೀವು ನಿಂತಿದ್ದರೆ
ಜುಟ್ಟು ಜುಟ್ಟಿಗೆ ಜೋಲಿ ಕಟ್ಟಿ
ಕೆಂಪು ಕಹಳೆಯೂದುತ್ತಿದ್ದೆ.
ನಿಮ್ಮ ಗಟಾರಿನ ಮುಂದೆ ಗುಟುರು ಹಾಕುತ್ತಿದ್ದೆ.
ಬೆಲೆಯಿಲ್ಲದ ಎಲೆಗಳಿಗೆ ಕೊಳೆತ ಕಸಕಡ್ಡಿ ಗುಡ್ಡೆಗಳಿಗೆ
ಸುಂಟರಗಾಳಿಯ ಹಂಟರಾಗುತ್ತಿದ್ದೆ:
ನಾನು ನಾನೇ ಆಗುತ್ತಿದ್ದೆ.


ನಿಮಗೂ ಅಷ್ಟೆ ಮಾರಾಯರೆ
ನನ್ನನ್ನು ನಿಮ್ಮವನು ಎಂದುಕೊಂಡವರೆ
ನನ್ನ ಬಾಳಿನ ಸುತ್ತ ಬೇಲಿ ಕಟ್ಟುವವರೆ
ಬೇಸಿಗೆಯಲ್ಲೇ ನಿಮ್ಮ ವರ್ಷವೃಷ್ಟಿ!
ಬಂಜೆಬಾನಿಂದ ಪುಷ್ಪವೃಷ್ಟಿ!
ನೀವು ಹಾಕುವ ಹಾರ ಬಲು ಭಾರ ಸ್ವಾಮಿ
ನಡೆಯಲಾರೆ ನಾನು ತಡೆಯಲಾರೆ
ಅಲ್ಲಿ ಕರೆಯುವ ಆ ಕೆಂಪು ಕಂಗಳ ಬಿಟ್ಟು
ತಣ್ಣನೆಯ ತಂಗಳನು ತಿನ್ನಲಾರೆ.
ನಿಮ್ಮವರಾದ ನನ್ನ ಅಪ್ಪ ಅಮ್ಮನ ಖುಷಿಯ
ಕಂದನಾದದ್ದು ನನ್ನ ತಪ್ಪಲ್ಲ;
ನಾನು ನಿಮ್ಮವನೂ ಅಲ್ಲ.


ಹೊರಟೆ;
ಭೂತಬಾಯಿಗೆ ಬಿರಟೆ
ಹೊಡೆದು ಹೊರಟೆ
ಕಳ್ಳು ಕುಡಿದು ಕಾಡಿಸುವ ಕೊಳ್ಳಿದೆವ್ವಗಳಿಗೆ ದಕ್ಕದೆ
ದಮ್ಮು ಕಟ್ಟಿ ಹೊರಟೆ.
ಮರಳು ನೆಲದಲ್ಲಿ ದೈತ್ಯ ನೆರಳು
ಗೋಮಾಳೆ ಹಿಚುಕುವ ಭೂತ ಬೆರಳು
ಅಡ್ಡ ಹಳಿಗಳ ಮೇಲೆ ಚಕ್ರದುರುಳು.
ಕೊರಳ ಕೊಡದೆ ಕ್ಷಣಮಾತ್ರ ಕಂಪಿಸದೆ
ನನ್ನವರ ನಾನು ಹುಡುಕಿ ಹೊರಟೆ

ಅಲ್ಲೊಂದು ಇಲ್ಲೊಂದು ನನ್ನವೇ ಮುಖ ಕಂಡು
ಮುಂಬಾಗಿಲ ಮುಗುಳ್ನಗೆಯಲ್ಲಿ ಮೈಮರೆತು
ಅದು ಹುಣ್ಣಿಮೆ ಹೊತ್ತು!
ಕ್ಷಣ ಕಳೆದು ಕಣ್ಣು ಬಿಟ್ಟರೆ ಅಯ್ಯೋ! ಕಗ್ಗತ್ತಲು!
ನಗ್ನಕಪ್ಪಿನಲ್ಲಿ ವಿಕಟ ನಗೆ ಎತ್ತಲು.
ಬಾಯ್ತೆಗೆದ ಭೂತಭೂಮಿಯ ಕೋರೆದಾಡೆಗಳಂತೆ ಕೊಳ್ಳಿ-
ಕುಣಿತ.
ನುಗ್ಗಲೇಬೇಕೆಂಬ ನೊಗ ಹೊತ್ತು ನಿಂತ ನಾನು
ಅನಾಥ
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...