Home / ಕವನ / ಕವಿತೆ / ಅನಾಥ

ಅನಾಥ


ನಿಜ ಮಾರಾಯರೆ
ನಿಮ್ಮಂತೆ ದೊಡ್ಡಜಾತಿಯ ಗುಡ್ಡಗರ್ಭದಲ್ಲಿ
ಹುಟ್ಟಿದವ ನಾನಲ್ಲ;
ಅಂಥ ದೌರ್ಭಾಗ್ಯ ನನ್ನದಲ್ಲ.
ದಿಡ್ಡಿಬಾಗಿಲ ಬಳಿ ಗೊಡ್ಡು ಬಾಯಿಯ ತೆರೆದು
ಬುಗುಬುಗು ಬಂಡಿ ಬಿಡುವವನಲ್ಲ;
ಚಂದ್ರಬೆಳಕಿನಲ್ಲಿ ಲಾಂದ್ರ ಹುಡುಕುವ ನಿಮ್ಮ
ಸಂದಿಮನ ನನಗಿಲ್ಲ.

ನ್ಯಾಯ ಬುತ್ತಿಕಟ್ಟಿ ನೆತ್ತಿ ಮೇಲಿಟ್ಟುಕೊಂಡ
ನಕ್ಕಿ ಮುಖದ ಮಾರಾಯರೆ
ಮತ್ತೆಮತ್ತೇಕೆ ಎಳೆಯುವಿರಿ ಕಬ್ಬಿಣದ ಮೈಮೇಲೆ
ದಬ್ಬಳದ ಬರೆ?
ನನಗೆ ನೆನಪಿದೆ: ನಾನು ನಿಮ್ಮವನಲ್ಲ
ನಿಮ್ಮ ಹಳೆ ಆಸ್ತಿ ಅಸ್ಥಿ ನನಗೆ ಬೇಕಿಲ್ಲ
ಬುರುಗು ಬುದ್ಧಿ ನನ್ನದಲ್ಲ.

ಒಂದು ವೇಳೆ
ನಿಮ್ಮ ಏರ್‌ಕಂಡೀಷನ್ಡ್ ಮನೆಯಲ್ಲಿ ಹುಟ್ಟಿದ್ದರೆ
ಜಂಗಿಸಿದರೂ ಜಗ್ಗದ ದೊಡ್ಡ ಗೋಡೆಯ
ಗೂಡೆವನದಲ್ಲಿ ನನ್ನ ಸಾಕಿದ್ದರೆ
ಲಂಗರು ಹಾಕಿ ನೀವು ನಿಂತಿದ್ದರೆ
ಜುಟ್ಟು ಜುಟ್ಟಿಗೆ ಜೋಲಿ ಕಟ್ಟಿ
ಕೆಂಪು ಕಹಳೆಯೂದುತ್ತಿದ್ದೆ.
ನಿಮ್ಮ ಗಟಾರಿನ ಮುಂದೆ ಗುಟುರು ಹಾಕುತ್ತಿದ್ದೆ.
ಬೆಲೆಯಿಲ್ಲದ ಎಲೆಗಳಿಗೆ ಕೊಳೆತ ಕಸಕಡ್ಡಿ ಗುಡ್ಡೆಗಳಿಗೆ
ಸುಂಟರಗಾಳಿಯ ಹಂಟರಾಗುತ್ತಿದ್ದೆ:
ನಾನು ನಾನೇ ಆಗುತ್ತಿದ್ದೆ.


ನಿಮಗೂ ಅಷ್ಟೆ ಮಾರಾಯರೆ
ನನ್ನನ್ನು ನಿಮ್ಮವನು ಎಂದುಕೊಂಡವರೆ
ನನ್ನ ಬಾಳಿನ ಸುತ್ತ ಬೇಲಿ ಕಟ್ಟುವವರೆ
ಬೇಸಿಗೆಯಲ್ಲೇ ನಿಮ್ಮ ವರ್ಷವೃಷ್ಟಿ!
ಬಂಜೆಬಾನಿಂದ ಪುಷ್ಪವೃಷ್ಟಿ!
ನೀವು ಹಾಕುವ ಹಾರ ಬಲು ಭಾರ ಸ್ವಾಮಿ
ನಡೆಯಲಾರೆ ನಾನು ತಡೆಯಲಾರೆ
ಅಲ್ಲಿ ಕರೆಯುವ ಆ ಕೆಂಪು ಕಂಗಳ ಬಿಟ್ಟು
ತಣ್ಣನೆಯ ತಂಗಳನು ತಿನ್ನಲಾರೆ.
ನಿಮ್ಮವರಾದ ನನ್ನ ಅಪ್ಪ ಅಮ್ಮನ ಖುಷಿಯ
ಕಂದನಾದದ್ದು ನನ್ನ ತಪ್ಪಲ್ಲ;
ನಾನು ನಿಮ್ಮವನೂ ಅಲ್ಲ.


ಹೊರಟೆ;
ಭೂತಬಾಯಿಗೆ ಬಿರಟೆ
ಹೊಡೆದು ಹೊರಟೆ
ಕಳ್ಳು ಕುಡಿದು ಕಾಡಿಸುವ ಕೊಳ್ಳಿದೆವ್ವಗಳಿಗೆ ದಕ್ಕದೆ
ದಮ್ಮು ಕಟ್ಟಿ ಹೊರಟೆ.
ಮರಳು ನೆಲದಲ್ಲಿ ದೈತ್ಯ ನೆರಳು
ಗೋಮಾಳೆ ಹಿಚುಕುವ ಭೂತ ಬೆರಳು
ಅಡ್ಡ ಹಳಿಗಳ ಮೇಲೆ ಚಕ್ರದುರುಳು.
ಕೊರಳ ಕೊಡದೆ ಕ್ಷಣಮಾತ್ರ ಕಂಪಿಸದೆ
ನನ್ನವರ ನಾನು ಹುಡುಕಿ ಹೊರಟೆ

ಅಲ್ಲೊಂದು ಇಲ್ಲೊಂದು ನನ್ನವೇ ಮುಖ ಕಂಡು
ಮುಂಬಾಗಿಲ ಮುಗುಳ್ನಗೆಯಲ್ಲಿ ಮೈಮರೆತು
ಅದು ಹುಣ್ಣಿಮೆ ಹೊತ್ತು!
ಕ್ಷಣ ಕಳೆದು ಕಣ್ಣು ಬಿಟ್ಟರೆ ಅಯ್ಯೋ! ಕಗ್ಗತ್ತಲು!
ನಗ್ನಕಪ್ಪಿನಲ್ಲಿ ವಿಕಟ ನಗೆ ಎತ್ತಲು.
ಬಾಯ್ತೆಗೆದ ಭೂತಭೂಮಿಯ ಕೋರೆದಾಡೆಗಳಂತೆ ಕೊಳ್ಳಿ-
ಕುಣಿತ.
ನುಗ್ಗಲೇಬೇಕೆಂಬ ನೊಗ ಹೊತ್ತು ನಿಂತ ನಾನು
ಅನಾಥ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...