Home / ಕವನ / ಕವಿತೆ / ಮರಕುಟಿಗ

ಮರಕುಟಿಗ

ಕತ್ತಲಿಗೆ ಕತ್ತರಿ ಬಿದ್ದು ಇಷ್ಟಿಷ್ಟೇ ಹರಿದು
ಚಿಗುರೊಡೆದ ಮರದಲ್ಲಿ ಚಿಲಿಪಿಲಿ; ಒಂದಕ್ಕೊಂದು ಸೇರಿ
ಅಸ್ಪಷ್ಟ ಗದ್ದಲ: ಕಣ್ಣ ತೆರೆಯುವ ತುರಿಕೆ;
ಮನೆಯ ಒಳಹೊರಗೆಲ್ಲ ಬಳೆ ಸದ್ದು ಪೊರಕೆ.
ಮನದ ಮೂಲದಲ್ಲಿ ಬೇರಿಳಿದ ಮರ
ಗೀರಿದರೆ ಚಿಲ್ಲೆನ್ನುವ ರಸ; ಬೆಳವ ರಭಸ.
ಬೆಚ್ಚನೆಯ ಬಿಸಿಲಿಗೆ ಮಡುಗಟ್ಟಿದ್ದ ಮಂಜು
ಹತ್ತು ಕಡೆ ಹರಿಯುವುತ್ಸಾಹ.
ಗಿಡಗೆಂಟೆ ಮುಳ್ಳುಪೊದೆ ಉಬ್ಬುತಗ್ಗುಗಳ
ಸಮತಟ್ಟುಗೊಳಿಸಬೇಕೆಂಬ ಬುಲ್ಡೋಜರ್ ಬುದ್ದಿ.
ಹೀಗೆ ಬೆಳೆಯುತ್ತ ಬಂದದ್ದೇ ಒಂದು ಸುದ್ದಿ-
ಯಾಗಿ ಮರದ ಮೇಲೆಲ್ಲ ಟಕಟಕ ಸದ್ದು
ನೀಲಿ ಹಾಳೆಯ ಮೇಲೆ ಅಚ್ಚೊತ್ತಿದ ಹದ್ದು
ಮರಕುಟಿಗಗಳ ಸದ್ದು ನಿಲ್ಲಲಿಲ್ಲ;
ಚುಚ್ಚುವೆಚ್ಚರ ಹಕ್ಕಿ ಹಾರಲಿಲ್ಲ.

ಮೈನೆರೆದ ಮರದಲ್ಲಿ ಮೋಹಕುಟಿಗ
ಕಿತ್ತು ತಿನ್ನುವ ಕತ್ತುಬಳಸುವ ಹತ್ತಾರು ಸಲಗ
ಹಂಟರನು ಹಿಡಿದಾಗ ಹಲಗೆ ಬಡಿತ
ಕಾಲಕುಣಿಸುವ ಕುದುರೆ ಕೆನೆತ
ಹಂಟರಿನ ಮೈಯಲ್ಲಿ ಸಂಗೀತ ಸ್ವಿಚ್ಚೊತ್ತಿ
ಮೆಲ್ಲಗೆ ಮತ್ತೇರಿದ ಹೆಡೆಯ ನಾಗ.
ಅಚ್ಚೊತ್ತಿದ್ದ ಹದ್ದು ಎಚ್ಚೆತ್ತು ಬಡಿದಾಗ
ಸುತ್ತಮುತ್ತಲ ಮೋಡ ಕಿರುಚಿ ಕಣ್ಣೀರು.
ಅತ್ತಲಿಂದಿತ್ತ ಇತ್ತಲಿಂದಿತ್ತ ರಪರಪನೆ ಬಡಿವ
ಪುಕ್ಕಗಳಿಗೆ ಸಿಕ್ಕಿ ಮರದ ಮೈಯಲ್ಲಿ ದಿಗಿಲು!
ಹದ್ದಿನಾರ್ಭಟದಲ್ಲಿ ಅತ್ತು ಕರೆಯುವ ಮಹಲು
ಬೇರಿಗೆ ಭೈರಿಗೆ ಹಿಡಿವ ಭೋರ್ಗರೆವ ಹೊನಲು.
ದಿಕ್ಕು ಕಾಣದ ಹಕ್ಕಿಗಳು ಮರದಲ್ಲೆ ಮುಲುಗುಟ್ಟಿ
ಮತ್ತದೇ ಕೆಲಸ ಟಕ ಟಕ ಸದ್ದು
ಮೋಹದಲ್ಲೆ ಮೈದಳೆದ ಎಚ್ಚರದ ಗುದ್ದು.
ಮಣ್ಣ ಮೈಥುನದಲ್ಲಿ ಫಲ ಕಾಣುವ ಛಲ ಮರಕ್ಕೆ
ತಲೆಯಲ್ಲಿ ಒಂದೇ ಸಮ ಕುಕ್ಕುವ ಬಯಕೆ.
ಹಾಳು ಬಾವಿಯ ಹೂಣು ಆಳುದ್ದ ತುಂಬಿ
ಸಲಿಕೆ ಗುದ್ದಲಿಗೆ ಎಡೆಬಿಡದ ಕೆಲಸ
ಹೊಸ ಮಂಕರಿಗಳಲ್ಲಿ ಮಣ್ಣು ತುಂಬುವ ರಭಸ.
ಬೆವರು ಬಸಿದು ಹೊಸ ವರಸೆಯಲ್ಲಿ ಹತ್ತುವಾಗ
ದಡದಲ್ಲಿ ಬಾವಿಯೊಡೆಯರ ಪಹರೆ; ಕತ್ತಿಝಳಪು.
ನೆಚ್ಚಿ ನಡೆದವನು ಬೆಚ್ಚಿ ತಲೆತುಂಬ ಕುಟಿಗ-
ಎಚ್ಚರದ ಸಲಗ; ದಾರಿ ಹೊಳಪು.
ಜಗ್ಗದೆ ಕುಗ್ಗದೆ ನುಗ್ಗುತ್ತ ನಡೆದಾಗ
ಬಾವಿಯೊಡಯರಲೆಷ್ಟೋ ಬಂಧು ಬಳಗ!
ನಿಂತು ನೋಡನೋಡುತ್ತ ಸಾವರಿಸಿಕೊಂಡು
ಧ್ಯೇಯ ಧುಮ್ಮಿಕ್ಕಿ ಕರೆಂಟು ದೃಷ್ಟಿ
ಕತ್ತಿಗಳಿಗೆ ಕತ್ತು ಕೊಡದ ಮಲೆತ ಮುಷ್ಟಿ
ಮರದಲ್ಲಿ ಚೈತನ್ಯ ಸೂರ್‍ಯ ಚುರುಕು-
ಹಕ್ಕಿಯಚ್ಚರ ಚಬುಕು.

ಅದುರಿದೊಡೆಯರಿಂದ ದಡಕಡಿವ ಕಾರ್ಯ
ಮೇಲೆ ಮುಸುಕು ಮುಚ್ಚಿದ ಸೂರ್ಯ
ಬಿದ್ದರೂ ಬಿಡದೆ ಬೆನ್ನು ತಿರುಗಿಸದೆ ದಡದೆಡೆಗೆ ಬಂದಾಗ ಬೆದರುಗೊಂಬೆಗಳಿಗೆಲ್ಲ ಬೆರಗು.

ಹಾಳುಬಾವಿಯ ಆಳ ನೋಡಿ ನಕ್ಕಾಗ
ನಾಚಿಕೆಯೆ ನೀರಾಗಿ ತಳ ತೋಯುತಿತ್ತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...