Home / ಕವನ / ಕವಿತೆ / ಮರಕುಟಿಗ

ಮರಕುಟಿಗ

ಕತ್ತಲಿಗೆ ಕತ್ತರಿ ಬಿದ್ದು ಇಷ್ಟಿಷ್ಟೇ ಹರಿದು
ಚಿಗುರೊಡೆದ ಮರದಲ್ಲಿ ಚಿಲಿಪಿಲಿ; ಒಂದಕ್ಕೊಂದು ಸೇರಿ
ಅಸ್ಪಷ್ಟ ಗದ್ದಲ: ಕಣ್ಣ ತೆರೆಯುವ ತುರಿಕೆ;
ಮನೆಯ ಒಳಹೊರಗೆಲ್ಲ ಬಳೆ ಸದ್ದು ಪೊರಕೆ.
ಮನದ ಮೂಲದಲ್ಲಿ ಬೇರಿಳಿದ ಮರ
ಗೀರಿದರೆ ಚಿಲ್ಲೆನ್ನುವ ರಸ; ಬೆಳವ ರಭಸ.
ಬೆಚ್ಚನೆಯ ಬಿಸಿಲಿಗೆ ಮಡುಗಟ್ಟಿದ್ದ ಮಂಜು
ಹತ್ತು ಕಡೆ ಹರಿಯುವುತ್ಸಾಹ.
ಗಿಡಗೆಂಟೆ ಮುಳ್ಳುಪೊದೆ ಉಬ್ಬುತಗ್ಗುಗಳ
ಸಮತಟ್ಟುಗೊಳಿಸಬೇಕೆಂಬ ಬುಲ್ಡೋಜರ್ ಬುದ್ದಿ.
ಹೀಗೆ ಬೆಳೆಯುತ್ತ ಬಂದದ್ದೇ ಒಂದು ಸುದ್ದಿ-
ಯಾಗಿ ಮರದ ಮೇಲೆಲ್ಲ ಟಕಟಕ ಸದ್ದು
ನೀಲಿ ಹಾಳೆಯ ಮೇಲೆ ಅಚ್ಚೊತ್ತಿದ ಹದ್ದು
ಮರಕುಟಿಗಗಳ ಸದ್ದು ನಿಲ್ಲಲಿಲ್ಲ;
ಚುಚ್ಚುವೆಚ್ಚರ ಹಕ್ಕಿ ಹಾರಲಿಲ್ಲ.

ಮೈನೆರೆದ ಮರದಲ್ಲಿ ಮೋಹಕುಟಿಗ
ಕಿತ್ತು ತಿನ್ನುವ ಕತ್ತುಬಳಸುವ ಹತ್ತಾರು ಸಲಗ
ಹಂಟರನು ಹಿಡಿದಾಗ ಹಲಗೆ ಬಡಿತ
ಕಾಲಕುಣಿಸುವ ಕುದುರೆ ಕೆನೆತ
ಹಂಟರಿನ ಮೈಯಲ್ಲಿ ಸಂಗೀತ ಸ್ವಿಚ್ಚೊತ್ತಿ
ಮೆಲ್ಲಗೆ ಮತ್ತೇರಿದ ಹೆಡೆಯ ನಾಗ.
ಅಚ್ಚೊತ್ತಿದ್ದ ಹದ್ದು ಎಚ್ಚೆತ್ತು ಬಡಿದಾಗ
ಸುತ್ತಮುತ್ತಲ ಮೋಡ ಕಿರುಚಿ ಕಣ್ಣೀರು.
ಅತ್ತಲಿಂದಿತ್ತ ಇತ್ತಲಿಂದಿತ್ತ ರಪರಪನೆ ಬಡಿವ
ಪುಕ್ಕಗಳಿಗೆ ಸಿಕ್ಕಿ ಮರದ ಮೈಯಲ್ಲಿ ದಿಗಿಲು!
ಹದ್ದಿನಾರ್ಭಟದಲ್ಲಿ ಅತ್ತು ಕರೆಯುವ ಮಹಲು
ಬೇರಿಗೆ ಭೈರಿಗೆ ಹಿಡಿವ ಭೋರ್ಗರೆವ ಹೊನಲು.
ದಿಕ್ಕು ಕಾಣದ ಹಕ್ಕಿಗಳು ಮರದಲ್ಲೆ ಮುಲುಗುಟ್ಟಿ
ಮತ್ತದೇ ಕೆಲಸ ಟಕ ಟಕ ಸದ್ದು
ಮೋಹದಲ್ಲೆ ಮೈದಳೆದ ಎಚ್ಚರದ ಗುದ್ದು.
ಮಣ್ಣ ಮೈಥುನದಲ್ಲಿ ಫಲ ಕಾಣುವ ಛಲ ಮರಕ್ಕೆ
ತಲೆಯಲ್ಲಿ ಒಂದೇ ಸಮ ಕುಕ್ಕುವ ಬಯಕೆ.
ಹಾಳು ಬಾವಿಯ ಹೂಣು ಆಳುದ್ದ ತುಂಬಿ
ಸಲಿಕೆ ಗುದ್ದಲಿಗೆ ಎಡೆಬಿಡದ ಕೆಲಸ
ಹೊಸ ಮಂಕರಿಗಳಲ್ಲಿ ಮಣ್ಣು ತುಂಬುವ ರಭಸ.
ಬೆವರು ಬಸಿದು ಹೊಸ ವರಸೆಯಲ್ಲಿ ಹತ್ತುವಾಗ
ದಡದಲ್ಲಿ ಬಾವಿಯೊಡೆಯರ ಪಹರೆ; ಕತ್ತಿಝಳಪು.
ನೆಚ್ಚಿ ನಡೆದವನು ಬೆಚ್ಚಿ ತಲೆತುಂಬ ಕುಟಿಗ-
ಎಚ್ಚರದ ಸಲಗ; ದಾರಿ ಹೊಳಪು.
ಜಗ್ಗದೆ ಕುಗ್ಗದೆ ನುಗ್ಗುತ್ತ ನಡೆದಾಗ
ಬಾವಿಯೊಡಯರಲೆಷ್ಟೋ ಬಂಧು ಬಳಗ!
ನಿಂತು ನೋಡನೋಡುತ್ತ ಸಾವರಿಸಿಕೊಂಡು
ಧ್ಯೇಯ ಧುಮ್ಮಿಕ್ಕಿ ಕರೆಂಟು ದೃಷ್ಟಿ
ಕತ್ತಿಗಳಿಗೆ ಕತ್ತು ಕೊಡದ ಮಲೆತ ಮುಷ್ಟಿ
ಮರದಲ್ಲಿ ಚೈತನ್ಯ ಸೂರ್‍ಯ ಚುರುಕು-
ಹಕ್ಕಿಯಚ್ಚರ ಚಬುಕು.

ಅದುರಿದೊಡೆಯರಿಂದ ದಡಕಡಿವ ಕಾರ್ಯ
ಮೇಲೆ ಮುಸುಕು ಮುಚ್ಚಿದ ಸೂರ್ಯ
ಬಿದ್ದರೂ ಬಿಡದೆ ಬೆನ್ನು ತಿರುಗಿಸದೆ ದಡದೆಡೆಗೆ ಬಂದಾಗ ಬೆದರುಗೊಂಬೆಗಳಿಗೆಲ್ಲ ಬೆರಗು.

ಹಾಳುಬಾವಿಯ ಆಳ ನೋಡಿ ನಕ್ಕಾಗ
ನಾಚಿಕೆಯೆ ನೀರಾಗಿ ತಳ ತೋಯುತಿತ್ತು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...