Home / ಕವನ / ಕವಿತೆ / ಹಳ್ಳಿ

ಹಳ್ಳಿ

ಬೆಂಗಳೂರಿನಲ್ಲಿ ಬುದ್ಧಿಯ ಬಿಸಿಬೇಳೆ
ಬಾತು ತಿನ್ನುತ್ತ ಸಂಕೀರ್ಣ ಅಸಂಗತ ಹಾಳುಮೂಳು
ಹೂತು ತಲೆತಪ್ಪಲೆಗೆ ಸಟ್ಟುಗ ತಿರುವುತ್ತ
ಹೊಟ್ಟೆಯಲ್ಲಿ ಹೂವರಳಿಸ ಹೊರಟವನು
ಹಳ್ಳಿಗೆ ಹೋದಾಗ ಭ್ರಮೆ ಬಿಳುಚಿಕೊಂಡಿತು.

ಚೌಕಟ್ಟಿಲ್ಲದ ಊರಬಾಗಿಲು ನೆಲಮುಗಿಲು
ಪ್ರೈಮರಿ ಶಾಲೆಯಲ್ಲಿ ಶಾರದೆಗೆ ಸೀರೆ ಉಡಿಸುವ ಸಡಗರ
ಗೋಡೆಗಳ ಕಟ್ಟು ಕಳಚಿ ಗಾಳಿ ಬೆಳಕು ಅಗಾಧ
ಮೇಲು ಕೀಳು ತಲೆಕೆಳಗು ಮಾಡಿದ ಏಕೈಕ ವೇದಿಕೆ ಎಲ್ಲ ತರ-
ಗತಿಗಲ್ಲೆ ಸ್ಥಾನಮಾನ.
ಒಂದೊಂದ್ಲ ಒಂದು ವಂದಾಕೆ ಸಾ, ಬಸವ ಕಮಲ ಜಿಗುಟ್ದಾ ಸಾ
ಇತ್ಯಾದಿ ಹ್ರಸ್ವ ದೀರ್ಘ ವೈವಿಧ್ಯ ಸ್ವರಮೇಳ
ಸರಸ್ವತಿ ಸೌಧಕ್ಕೆ ಗುದ್ದಲಿಪೂಜೆಯ ಗದ್ದಲ.

ಊರ ಹೊಕ್ಕರೆ ಸಂದಿಗೊಂದಿಗಳಲ್ಲಿ ನೆಲಕ್ಕೆ ಕಾಲರ
ಕಕ್ಕಿತ್ತು; ಗಾರೆನೆಲ ಉಪ್ಪು ಉಕ್ಕಿತ್ತು
ಬೀದಿಯಲ್ಲೆಲ್ಲ ಭಾರತ ದರ್ಶನ;
ಹಿಟ್ಟಿನ ಸೀಕು ತಿನ್ನುತ್ತ ನಿಂತ ಸಿಂಬಳಬುರುಕ ತಲೆಕೆರುಕ
ಮೂಳೆಚಕ್ಕಳ ತಂಡತಂಡದ ಭವಿಷ್ಯ ಇಕ್ಕಳದಲ್ಲಿ ಬತ್ತಲೆ ಗ್ರಾಮಗಿರಣಿಯಲ್ಲಿ ಮೈತಳೆದ ಬೆರಣಿ
ಬಾಳು ಬಿಡಿಸುತ್ತ ಬಂದ ಸೊನ್ನೆ ಸರಣಿ
ನೊಗ ಹೊತ್ತು ಹೊರಟ ಬಡ ಎತ್ತಿನ ಕತ್ತು ಹುಣ್ಣು
ಗೋಣಿತಾಟಿನಲ್ಲಿ ಗೋವಿನ ಮೈ ನೀಟು ಮಾಡುವ ಹೆಣ್ಣು
ಇಲ್ಲದ ಹಾಲಿಗೆ ಕೆಚ್ಚಲು ಕಚ್ಚಿ ಚಪ್ಪರಿಸುವ ಕರು-
ವಿನ ಹಿಂದೆ ನಿಂತು ಮೂಸಿ ನೋಡುವ ನಾಯಿ
ಕಂಡು ಕಲ್ಲು ಎಸೆಯಲೆ ಎಂದುಕೊಂಡಾಗ
ಹಳ್ಳಿಗೇ ಹೆರಿಗೆ ಮಾಡಿಸಲು ಪ್ರಮಾಣವಚನ ಸ್ವೀಕರಿಸಿದ
ಪುಢಾರಿ ಹಲ್ಲು ಕಿಸಿದ

ಮೈ ತುಂಬ ಯೋಜನೆಯ ಮ್ಯಾಪು ಮುದ್ರಿಸಿಕೊಂಡು
ಮಾರುದ್ದ ಮಾತು ಹೊಸೆದ
ಬಚ್ಚಲಿನ ನೀರು ನಿಂತ ಕೊಚ್ಚೆ ಕಾಲುವೆಗೆ ಯಾರೋ ಒಬ್ಬ
ಸತ್ತ ಇಲಿ ಹೆಗ್ಗಣ ಎಸೆದ.

ಚಾವಡಿಯ ಚಂದ್ರಯಾನದ ಚರ್ಚೆಯಲ್ಲಿ
ಪೂಜಾರಿ ಪಾತ್ರ ಎಷ್ಟು ಗಾತ್ರ!
ಬೀಡಿಯ ಒಂದೊಂದು ದಮ್ಮಿಗೂ ತರಾವರಿ ಶೈಲಿ ಚಿಮ್ಮಿ
ಚಂದ್ರಯಾನ ಸುಳ್ಳು ಚಿಲ್ಲರೆ- ಎಂದು ಸಾರಿದ
ತನ್ನ ಮಂತ್ರಯಂತ್ರ ಎಷ್ಟು ಘನ ಬಲ್ಲಿರೆ- ಎಂದು ಭುಜ ಕುಣಿಸಿದ.
ಎಲ್ಲಿ ಸಲ್ಲದಿದ್ದರೂ ನನ್ನಲ್ಲಿ ಸಲ್ಲಿರೆ- ಎಂದು ಕರೆ ನೀಡಿದ
ಮಾತಿನಿಂದ ಮಾತಿಗೆ ಸರ್ಕಸ್ಸು ನೆಗೆತ ಮಗ್ನ ಮಹಾಜನರ
ಅನುಭವ ಮಂಟಪದಲ್ಲಿ ಗಾಂಧಿ ಇಂದಿರಾಗಾಂಧಿ ಸೇಂದಿ
ಎಲ್ಲ ಹುಟ್ಟಿಸತ್ತು ಸತ್ತುಹುಟ್ಟಿ ಪಾಪ!
ಸಂಸ್ಕಾರ ಮಾಡದೆ ಬರಿ ಸಂತಾಪ!

ತೆನೆ ತೆಕ್ಕೆಗೆ ತುಡಿಯುತ್ತ ಆಸ್ತಮ ಹತ್ತಿದ ಫಸಲು ಪಡೆದ ಬೆವರು
ಬರೆದ ಕತೆ ಲೆಕ್ಕಕ್ಕೆ ಸಿಕ್ಕದಷ್ಟು ಪುನರ್‌ಮುದ್ರಣವಾಗುತ್ತಿದೆ
ಅಷ್ಟು ಇಷ್ಟು ಬಂದರೆ ಪ್ರಕಾಶಕನ ಪಾಲಾಗುತ್ತಿದೆ.
ದಡ್ಡ ದೊಡ್ಡ ಕುರುಡು ಹುರುಡು ಬುದ್ಧಿಲದ್ದಿ
ಎಲ್ಲ ತರದ ತವರಾದ ಹಳ್ಳಿ
ಬಳ್ಳಿ ಹಬ್ಬಿದ ಸಾವುಚಪ್ಪರದಲ್ಲಿ ಮಣ್ಣ ಮದುವೆಯಾಗುತ್ತಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...