Home / ಕವನ / ಕವಿತೆ / ರಸದ ಬೀಡು!

ರಸದ ಬೀಡು!

ಏನಿದು ಭಗ್ಗೆಂದು ಕೇಕೆ?
ಬೆಚ್ಚಿ ನೋಡಿದರೆ ಇಲ್ಲಿ ಕೈಕೈ ಹಿಡಿದು ಕುಣಿಯುವ
ಕತ್ತಲಕುಲ ವೃತ್ತ!
ನಡುವೆ ನಾಚನಿಂತ ಬಡ ಒಡಲ ನಗ್ನಮೊತ್ತ.

ನಡುಗಿಸುತ್ತದೆ ಮೈ; ಕಂಪಿಸುತ್ತದೆ ಕೈ
ಚಿತ್ತದಲ್ಲಿ ಕೆತ್ತಿದ ಪ್ರಶ್ನೆ ಕೆಣಕುತ್ತದೆ:
ಕಟ್ಟಿದೆವೆ ನಾವು ಹೊಸ ನಾಡೊಂದನು ರಸದ ಬೀಡೊಂದನು?

ಬುದ್ಧ ಗಾಂಧಿ ಬಂದರು
ಉತ್ತಿ ಬಿತ್ತಿ ಬೆಳೆತಂದು ಬಾಗಿಲು ಬಡಿದರು
ಮಿಲಿಟರಿ ಮಾದರಿಯಲ್ಲಿ ನಿಂತು
ಪಾದ ತೊಳೆದವರೆ ಎಲ್ಲರು!
-ಒಂದು ಕ್ಷಣ ಮೈಪುಳಕ ನೆನಪು
ಸುರುಳಿ ಬಿಚ್ಚುವ ಸಂತೋಷ ಸೆಲೆ.

ಈ ರಸದ ಬೀಡಿನಲ್ಲಿ ಹಿಂಡಿ ಹೀರಿ ಕಡೆಗೆ ಬಿಡದೆ
ಬೀಜ ಕಿತ್ತು ಬೀದಿಗೆ ಬಿಟ್ಟ ಮಾವಿನ ಓಟೆ ಸಮೃದ್ಧ ಸ್ವಾಮಿ
ಇಲ್ಲಿಗೆ ಬಂದು ನೀರು ಕೇಳಿಬಿಟ್ಟಿರಿ! ಸಿಕ್ಕುವುದಿಲ್ಲ.
ಫುಟ್‌ಪಾತಿನಲ್ಲಿ ಪ್ರಾಣಬಿಡುವ ಸತ್ಪ್ರಜೆಗೆ ಇಗೋ ತೆಗೆದುಕೊಳ್ಳಿ ತರ್ಪಣ;
ಹಂಡೆ ಹೆಂಡವುಂಟು; ವಿಸ್ಕಿ ಬ್ರಾಂದಿಯುಂಟು.

ನಮ್ಮದು ಹರೆಯದ ಹೊಚ್ಚ ಹೊಸನಾಡು
ಮಸ್ತಕಪುಸ್ತಕದಲ್ಲಿ ಮಿಂಚಿದ್ದರೆ ದಫ್ತರಿನಲ್ಲಿ ಬಚ್ಚಿಟ್ಟುಕೊ
ಜೋಪಾನ! ತೆರೆದಪುಸ್ತಕಗಳಿಗಿಲ್ಲಿ ಬೆಂಕಿಕಡ್ಡಿ; ಬೂದಿಗುಡ್ಡೆ.
ಕುಪ್ಪುಗತ್ತಿಗೆ ಒಂದೊಂದೇ ಬೀಳುತ್ತೆ ಧುತ್ತೆಂದು ಬೊಡ್ಡೆ.
ಕಡೆಗೆ ಕಾಣಿಸುವುದು ಮುಂಡೆಯಾದ ಮೂಗಿಮರ.

ಹಾಗಾದರೆ ಈ ನಾಡು ಬಂಜೆ?
ಈ ನೆಲದ ಜಲದಲ್ಲಿ ಇರುವುದೆಲ್ಲ ನಂಜೆ?
ಬಂದರಲ್ಲ ಸಿದ್ಧರು ಗೆದ್ದರಲ್ಲ ಬದ್ಧರು?
ಪಾರಿವಾಳಗಳ ಸಂತತಿಯೇ ಇಲ್ಲಿ ಸಂದಿತ್ತಲ್ಲ?
ಕೋಗಿಲೆಯಿಂಚರದಲ್ಲಿ ನವಿಲು ನಲಿದಿತ್ತಲ್ಲ?
ಸಿಂಹ ಸೊಂಡಿಲ ಹಿಡಿದು ಆಟ ಆಡಿತ್ತಲ್ಲ?

ಕಾವಿಬಟ್ಟೆಯಲ್ಲಿ ಕಾವಿಗೆ ಕೂತ ಕೋಳಿ
ಮಾಡಿದ ಮರಿಗಳದೆಷ್ಟು ಗದ್ದಲ ಗೊಂದಲ!
‘ಹೊಟ್ಟೆಗಿಲ್ಲವೆ? ಯಾಕೆ ಯೋಚನೆ? ಗಂಟುಮೂಟೆಕಟ್ಟು
ನಾವಿಲ್ಲವೆ ಜಟ್ಟಿಗಳು? ಮುಗಿಲಿಗೆ ಮಣ್ಣುಹೊರುವ ತಟ್ಟಿಗಳು?’
ಪಾಪ! ಗದಗುಡುವಾಗಸಕ್ಕೆ ಗರಗಸ ಹಿಡಿವ ಕೆಲಸ
ಬಾನ ಕೊಯ್ಯದಿದ್ದರೂ ಬಾಳು ಕೊಯ್ಯುತ್ತದೆ
ಸುಯ್ಯುತ್ತದೆ; ತೊಟ್ಟಿಕ್ಕುವ ಬೆವರು ತೋರಿಸಿ
‘ಆಹಾ! ಮಳೆ ಬಂತು ಮಳೆ ನಮ್ಮ ಮಹಿಮೆಯ ಬೆಳೆ’
-ಹುಯ್ಯಲಿಡುತ್ತದೆ ನಿತ್ಯನಿರಂತರ ನಿರಾಕಾರ ಕಾವಿಕುಲ

ಕೇರಿಕೇರಿಯಲ್ಲಿ ಹರಿದು ಘನೀಭವಿಸಿದ ಗೊಡ್ಡು ಬೆಟ್ಟಗಳು
ಪುರ್ರನೆ ಹಾರುತ್ತವೆ; ಪಟ ಪಟ ಪುಕ್ಕ ಬಡಿದು
ರೊಪ್ಪದಲ್ಲಿ ಕುಪ್ಪೆ ಹಾಕುತ್ತವೆ; ಕುಪ್ಪಳಿಸುತ್ತವೆ.
ಪಟ್ಟದ ಮೇಲೆ ಹುಬ್ಬು ಹಾರಿಸಿ, ಮೀಸೆ ತಿರುವುತ್ತವೆ.

ಧರ್ಮದೊಡ್ಡಿಯಲ್ಲಿ ದೊಗಲೆ ಬಟ್ಟೆ ಜೇಬು ತುಂಬ
ವಿಶ್ವಕಲ್ಯಾಣ ಸರಕು, ಚುರುಕು ಮತಾಪು
ವಜ್ರಾಯುಧ ಯೋಧ ಊದುವ ಕಹಳೆಗೆ ಮೂಲ-
ಭೂತ ಹಕ್ಕು ಚ್ಯುತಿಯಾರೋಪ ರೋಪು.

ಗೂರಲು ಹತ್ತಿ ಬೋರಲು ಬಿದ್ದ ಬಾಳಿಗೆ ಬಿರಟೆ
ತೊಗಟೆ ಸುಲಿದ ಮರ ಅಜರಾಮರ
ಚಿಂದಿಬಟ್ಟೆ ಹಸಿದ ಹೊಟ್ಟೆ ಮೂಳೆಕೈಕಾಲುಗಳಿಗೆ
ವೈಶಂಪಾಯನ ಸರೋವರ.

ಚಿತ್ತ ಬುತ್ತಿ ಕಟ್ಟಿ ಅಲೆಯೊಳಗೆ ಆಸೆಹಚ್ಚಿ
ಹೊಯ್ಯುವ ಜನಗಣಕ್ಕೆ ಬಲರಾಮಾಗಮನ ಚಿಂತೆ.
ಹಾಳು ಸುರಿಯುವ ಮನೆ ಮಸಣದಲ್ಲಿ
ಇರಿಯುತ್ತಿದ್ದಾರೆ ಉರಿಸುತ್ತಿದ್ದಾರೆ ತೊಲೆ ಜಂತೆ.

ಉರಿನಾಲಗೆಯಲ್ಲಿ ಚಿಮ್ಮ ಬಾರದೆ ನವಸೃಷ್ಟಿ?
ನಮ್ಮ ಮಣ್ಣು ಅರಳಿಸಿದ ಪುಷ್ಪವೃಷ್ಟಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...