Home / ಕವನ / ಕವಿತೆ / ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಯಾವಾಗ ನೋಡಿದ್ರೂ
ಜರಿಶಾಲು, ರೇಷ್ಮೆ ಪೇಟ
ದೀಪಾ-ಧೂಪಾ
ಹೂವು-ಹಾರ ಜೊತೆಗೆ
ನಾಯಕರ ನಗೂ ಮುಖ
ಹೊತ್ಕೊಂಡು ಬರ್‍ತಾ ಇದ್ದ
ಪೇಪರ್‌ನಾಗೆ ನಿನ್ನ
ಸುದ್ದಿನೂ ಓದ್ದೇ ಕಣಪ್ಪಾ…

ದಿಕ್ಕಿಲ್ಲದಂಗೆ ರಾಶಿ ಬಿದ್ದಿದ್ದ
ಟೊಮೊಟೊ, ಆಲೂಗಡ್ಡೆ, ಮೆಕ್ಕೆಜೋಳದ
ಜತೆಗೆ ಕಂಗಾಲಾಗಿ ಕೂತಿದ್ದ
ನಿನ್ನ ಚಿತ್ರಾನೂ ಮುಖಪುಟದಾಗೆ
ನೋಡ್ದೆ ಕಣಪ್ಪಾ

ಅಲ್ಲಾ ಕಣಪ್ಪಾ…
ಭಾರತಾಂಬೆಯ ಬೆನ್ನೆಲುಬು
ಅಂತ ಯಾಮಾರಿ ಕುಂತಿದ್ಯಲ್ಲಾ
ಈಗ ನೋಡು…
ನೀ ಯಾರ ಅಂತ
ಕೇಳೋರು ಇಲ್ಲ…

ನೀ ಹತ್ತು ಪೈಸೆಗೆ ಮಾರೋದನ್ನ
ಹತ್ತು ರೂಪಾಯಿಗೆ ತಕ್ಕೊಳೋ
ನಾ ಹೇಳ್ತೀನಿ ಕೇಳು…

ನೀ ಹದರಬೇಡ
ಇಲಿ ಪಾಷಾಣ
ಕೀಟ ನಾಶಕ ಕುಡ್ದು
ಜೀವ ತಕ್ಕೊಬ್ಯಾಡ

ಭೂಮಿ-ಕಾಣಿ, ಮಳೆ-ಬೇಳೆ
ಎಲ್ಲಾ ಮರ್‍ತು ಬಿಡು
ನೀ ಬಿತ್ತೋದೂ ಬ್ಯಾಡ
ನೀ ಬೆಳೆಯೋದೂ ಬ್ಯಾಡ
ಕೈ ಕೆಸರು ಮಾಡಿಕೊಳ್ಳೋದೂ ಬ್ಯಾಡ
ಬೆವರ ಸುರಿಸೋದೂ ಬ್ಯಾಡ
ನುಸಿ ಪೀಡೆ, ಕೀಟ ಬಾಧೆ, ಪೇಟೆ ಧಾರಣೆ
ಅಂತ ತಲೆಕೆಡಿಸಿಕೊಳ್ಳಬ್ಯಾಡ
ಅಕ್ಕಿ, ರಾಗಿ, ಕೊತ್ತಿಮಿರಿ, ಕರಿಬೇವು
ಎಲ್ಲಾ ಅಮೇರಿಕಾದಿಂದ ಬರುತ್ತೆ
ನೀ ಸುಮ್ಕಿದ್ದು ಬಿಡು ಆರಾಮ…

ಆ ಹಳೆ ಪಂಚೆ
ಹರಕಲು ಚಡ್ಡಿ
ಹವಾಯಿ ಚಪ್ಪಲಿ
ಮೋಟು ಬೀಡಿ ಮೊದ್ಲು ಬಿಸಾಕು
ಜೀನ್ಸ್ ಪ್ಯಾಂಟು, ರಂಗೀಲಾ ಷರಟು
ಮೊದ್ಲು ತೊಟ್ಕೊ…

ಪಿಜ್ಜಾ ತಿನ್ನು, ಕೋಲಾ ಕುಡಿ
ಪ್ಯಾಕ್‌ನಲ್ಲಿ ಮಡಗಿರೋ
ಚಿಕನ್ನು, ಮಟನ್ನು ತಿಂದು
ಪಾಪು, ರ್‍ಯಾಪು ಕೇಳ್ತಾ
ಟಿ. ವಿ. ನಲ್ಲಿ W.W.F ನೋಡ್ತಾ ಮೊಬೈಲ್‌ನಲ್ಲಿ ಕಷ್ಟ-ಸುಖ
ಇಚಾರಿಸ್ತ ಸುಮ್ಕಿದ್ದು ಬಿಡು ಆರಾಮ…
ಹಾಂ… ಹಾಗೆ… ಹಾಗೆ…
ನೋಡ್ತಾ ಇರು ಹ್ಯಾಗೆ
ಹ್ಯಾಗೆ ಆಗುತ್ತೆ ಮ್ಯಾಜಿಕ್ಕು!
ನಿನ್ನೂರು ಮಂಗಾಪುರ ಅಲ್ವಾ?
ಈಗ ನೋಡು…
ಹ್ಯಾಗೆ ಆಗಿದೆ ಸಿಂಗಾಪುರ!

ನೋಡ್ತಾ ಇರು…
ಹೈಟೆಕ್ ಆಸ್ಪತ್ರೆ ಬತ್ತದೆ
ಯಮಗಾತ್ರ ಪವರ್ ಪ್ರಾಜೆಕ್ಟ್ ಬಂದು
ರಾತ್ರಿ-ಹಗಲು ದೀಪ ಉರೀತದೆ
ಕುಡಿಯೋ ನೀರು ಬಾಟ್ಲಿನಲ್ಲಿ
ತಂತಾನೆ ತುಂಬ್ಕೊಂಡು
ಮನೆ ಬಾಗಿಲಿಗೆ ಬಂದು ಬೀಳ್ತದೆ

ಎತ್ತಿನ ಬಂಡಿಗಳು
ಏರೋಪ್ಲೇನ್ ಥರಾ ಹಾರ್‍ಕೋತ
ಸೀದಾ ದಿಲ್ಲಿಗೇ ಹೋಗ್ಬೇಕು
ಆಪಾಟಿ ರಸ್ತೆಗೋಳು ಬತ್ತವೆ
ನಿನ್ನ ಮಕ್ಕಳು, ಮರಿಮಕ್ಕಳು
ದೊಡ್ಡ ದೊಡ್ಡ ಶಾಲೆಗೆ ಹೋಗ್ತಾವೆ
ಎ. ಬಿ. ಸಿ. ಡಿ ಕಲಿತಾವೆ
ಅಮೆರಿಕೆಗೆ ಹಾರಿ
ಕೊಪ್ಪರಿಗೆ ಹಣ ಬಾಚ್ತಾವೆ…

ಹಬ್ಬೆಟ್ಟು-ಛಾಪಾಕಾಗದ
ಸಾಲ, ಬಡ್ಡಿ, ಜಪ್ತಿ
ಉಹುಂ ಕನಸಿನಲ್ಲೂ ಯೋಚಿಸಬ್ಯಾಡ
ನೀ…ರಾಮ-ಕೃಷ್ಣ ಅನ್ನೋದು ಬ್ಯಾಡ
ಕಂಪ್ಯೂಟರ್ ದೇವತೆ
ನಿನ್ನ ಮೈಮ್ಯಾಲೆ ಬಂದು
ಖಂಡಿತ ಮೋಕ್ಷ ಕಾಣಿಸ್ತಾಳ…

ಅದಕ್ಕೆ ಕಣಪ್ಪಾ ನಾ ಹೇಳ್ತೀನೀ ಕೇಳು…
ನೀ ಸುಮ್ಕಿದ್ದು ಬಿಡು…
ಬಾಯ್ ಮುಚ್ಕೊಂಡು… ಕಿವಿ ಮುಚ್ಕೊಂಡು…
ಕಣ್ಣು ಮುಚ್ಕೊಂಡು…

ಹಾಂ ಹಾಗೆ… ಹಾಗೆ…
ಉಸಿರೆತ್ತಬ್ಯಾಡ….
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...