Home / ಕವನ / ಕವಿತೆ / ಬೀಳ್ಕೊಡುಗೆ

ಬೀಳ್ಕೊಡುಗೆ

ಮುಗಿಯಿತು
ಬಾಳಿನ ಒಂದು ಮಜಲು
ಅವರು ಕರೆದೊಯ್ಯಲು ಬಂದಿಹರು
ಹೊರಡ ಬೇಕಾಗಿದೆ
ಹೊಸ ಜಾಗಕೆ
ಹೊಸ ಬಾಳನು ನಡೆಸಲು
ಕಸಿ ಮಾಡಿದ ಸಸಿ ತೆರದಿ
ಇಲ್ಲಿಗೆ, ಇನ್ನು ಮೇಲೆ
ನಾನೊಬ್ಬ ಅತಿಥಿಯಾದೆನೆಂದು ತಿಳಿದಾ ಇವಳಿಗೆ,
ತನ್ನೊಳಗೆ ಏನೋ ಆಗುತ್ತಿದೆ
ಏನೆಂದು ಹೇಳಲರಿಯಳು
ಘಳಿಗೆ ಘಳಿಗೆಗೂ ನಿಟ್ಟುಸಿರು, ನಿರಾಸಕ್ತಿ
ಮುಖ ಕಿತ್ತರಿಷ್ಟೂ ರಕ್ತ ಬರುವುದಿಲ್ಲ
ಶಕ್ತಿ ಸೋರಿ ಹೋದಂತೆನಿಸಿ
ಕೂತರೆ ಕೂತಲ್ಲೇ ಆಗಿ
ದೆವ್ವ ಬಡಿದವಳಾಗಿದ್ದಾಳೆ.
ನಿಟ್ತು ಗಣ್ಣಿಗೆ ಬಿದ್ದಿಹಳು
ಏನೋ ನೋಡುತ್ತಿರುವಳು, ಏನೋ ಕಾಣಿಸುವುದು
ಎಲ್ಲಾ ಹೊಸ ಹೊಸದೆನಿಸುವುದು
ಮತ್ತೆ ಮತ್ತೆ ನೋಡ ಬೇಕೆನಿಸುವುದು,
ಎದೆ, ಬಿಳಿ ಮೋಡಕ್ಕಿಟ್ಟು ಕೊಂಡಂತಾಗಿ
ನೋವಿನ ಜಡಿ ಹಿಡಿದಿದೆ….

ಅತ್ತ ಬಂದ ಹಾಗೂ ಅಲ್ಲ
ಇತ್ತ ಬಿಟ್ಟ ಹಾಗೂ ಅಲ್ಲ
ಹೆಜ್ಜೆ ಇಟ್ಟಲ್ಲಿ ಕೆಸರು ಪಿಚಕಾರಿಯಾಗಿ ಹಾರುವಂತೆ
ಏನು ನೋಡಿದರೂ….. ಇನ್ನೆಲ್ಲಿ ಇದೆಲ್ಲಾ
ಯಾರನ್ನು ನೋಡಿದರೂ….. ಇನ್ನೆಲ್ಲಿ ಇವರೆಲ್ಲಾ
ಎಂಬ ನೋವು
ಓಡುತ್ತಾ ಬಂದ
ಮುದ್ದಿನ ಬೆಕ್ಕು
‘ನನಗೆ ತಿಳಿದಿದೆ ನೀನು ಹೋಗುವೆ ’ ಯೆಂಬಂತೆ
‘ಮಿಯಾಂವ್ ಮಿಯಾಂವ್’ ಎಂದು ನರಳಿದರೆ
ಮೊದಲೆ ಏರಿಯ ಮೇಲೆ ಹೊರಳುವಂತೆ ತುಂಬಿ
ಜೀಕುತ್ತಿದ್ದು
ಹಿಡಿಸಲಾರದ ಹಾಗೆ ಕೋಡಿ ಹೋಗುತ್ತಿರಲು
ಮೇಲೆ ಹೊಸದಾಗಿ ಪ್ರವಾಹ ಬಂದು ಗುದ್ದಿದರೆ
ಫಕ್ಕನೆ ಕರಿಬಾನ ಸಾಲು ಉರುಳಿದಂತೆ
ಕೋಡಿ ಧಡ ಧಡ ಕಿತ್ತು ಹೋಗುವ ಹಾಗೆ
ಬಿಕ್ಕುಕ್ಕುವವು ಒಂದೇ ಸಮನೆ

ಹೆಜ್ಜೆ ಸಪ್ಪಳವಾಯಿತು
ಕಂಡರಿನ್ನು –
ಯಾಕಮ್ಮಣ್ಣಿ ಹೀಗಳುವೆ?
ನೀನು ಸೀಮೆಗಿಲ್ಲದವಳಾಗಿಬಿಟ್ಟೆ ಬಿಡು
ಶುಭವೆಂದು ಕಾಲಿಡುವಾಗ ಅಳುವರೇನು?
ಹೀಗಾದರಾಯಿತು ಹೆತ್ತವರಿಗೆ ಹೊತ್ತವರಿಗೆ
ಕೀರ್ತಿ ಬಂದ ಹಾಗೆಯೆ!

ಇಷ್ಟಕ್ಕೂ ಏನಾಗಿದೆಯೆಂದು ಅಳುವೆ
ಏನು ನಿನ್ನನ್ನು ಕೊಲೆ ಕೊಟ್ಟಿದ್ದೀವಾ?
ಸುಲಿಗೆ ಕೊಟ್ಟಿದ್ದೀವಾ?
ಏಳೇ ಬೆಳೆಕಾತಿ!
ಹೀಗಳುವವಳು ಮದುವೆ ಯಾಕೆ ಮಾಡಿಕೊಂಡೆ?
ನಿನಗಷ್ಟು ಸಂಕಟವಾದರೆ ಇಷ್ಟು ಮಾಡು!
ಇಲ್ಲೆ ಇದ್ದು ಬಿಡು ಹುಟ್ಟಿದ ಮನೆ ಹುಳುವಾಗಿ
ಕಟ್ಟಿ! ಕೆಟ್ಟಿ! ಏಳೇಳು
ನಿನಗ್ಯಾಕೆ ಬುದ್ದಿ ಇಲ್ಲ
ಮೊದ ಮೊದಲು ಎಲ್ಲರಿಗೂ ಹಾಗೇನೆ
ಏಳು! ಮೊದಲು ಹೋಗಿ ಮುಖ ತೊಳೆದುಕೊಂಡು ಬಾ
ನೋಡಿದವರೇನಾದರೂ ಅಂದಾರು
ಅಳುತ್ತಾ ಕುಳಿತಿಹಳೆಲ್ಲಮ್ಮಾ! ಎಂದೆಲ್ಲಿ ಘಾತಿಸುವರೋ ಎಂದು
ಅವಸರ, ಅವಸರವಾಗಿ
ಅಡಸಲ, ಪಡಸಲ ಕಣ್ಣೀರ ಒರೆಸಿಕೊಂಡು,
ಏನೂ ಆಗಿಲ್ಲವೆಂಬಂತಿರಲು ಹವಣಿಸುವಳು,

ಆಗತಾನೇ ಬಂದವರು
ಬಿದ್ದು ಬಿದ್ದು ಅಳುವಂತೆ
ಸಾಗ ಹಾಕಲು ಬಂದ ಅಜ್ಜಿ
ಮೊಮ್ಮಗಳನ್ನಪ್ಪಪ್ಪಿ ರೋದಿಸುವಳು

ಊರು, ಉದ್ವಾನ ಕಂಡಿಲ್ಲ
ಒಳ್ಳೆಯದು ಕೆಟ್ಟದ್ದೊಂದೂ ಗೊತ್ತಿಲ್ಲ
ಹೇಗೆ ಸಂಭಾಳಿಸುವಳೋ ನನ್ನ ಕಂದಾ
ಪ್ರೀತಿಯಲಿ ಬೆಳೆದವಳು
ಬೇಕಾದ್ದೆ ತಿಂದವಳು
ಯಾರು ನೋಡುವರಿನ್ನು
ನನ ಕಂದಾ ‘ಹ್ಹಾ!’ ಎಂದಳೇ ‘ಹ್ಹೋ!’ ಎಂದಳೆಯೆಂದು
ಇನ್ನು ಮುಂದ
ದೇವರೇ!
ನಾವೆಷ್ಟರವರು
ನೀನು ಕಾಪಾಡ ಬೇಕಾದನೆನ್ನುವಳು; ಬೋರಾಡುವಳು
ಕಣ್ಣಲ್ಲಿ ನೀರು ತರಿಸುವಳು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...