Home / ಕವನ / ಕವಿತೆ / ಬೀಳ್ಕೊಡುಗೆ

ಬೀಳ್ಕೊಡುಗೆ

ಮುಗಿಯಿತು
ಬಾಳಿನ ಒಂದು ಮಜಲು
ಅವರು ಕರೆದೊಯ್ಯಲು ಬಂದಿಹರು
ಹೊರಡ ಬೇಕಾಗಿದೆ
ಹೊಸ ಜಾಗಕೆ
ಹೊಸ ಬಾಳನು ನಡೆಸಲು
ಕಸಿ ಮಾಡಿದ ಸಸಿ ತೆರದಿ
ಇಲ್ಲಿಗೆ, ಇನ್ನು ಮೇಲೆ
ನಾನೊಬ್ಬ ಅತಿಥಿಯಾದೆನೆಂದು ತಿಳಿದಾ ಇವಳಿಗೆ,
ತನ್ನೊಳಗೆ ಏನೋ ಆಗುತ್ತಿದೆ
ಏನೆಂದು ಹೇಳಲರಿಯಳು
ಘಳಿಗೆ ಘಳಿಗೆಗೂ ನಿಟ್ಟುಸಿರು, ನಿರಾಸಕ್ತಿ
ಮುಖ ಕಿತ್ತರಿಷ್ಟೂ ರಕ್ತ ಬರುವುದಿಲ್ಲ
ಶಕ್ತಿ ಸೋರಿ ಹೋದಂತೆನಿಸಿ
ಕೂತರೆ ಕೂತಲ್ಲೇ ಆಗಿ
ದೆವ್ವ ಬಡಿದವಳಾಗಿದ್ದಾಳೆ.
ನಿಟ್ತು ಗಣ್ಣಿಗೆ ಬಿದ್ದಿಹಳು
ಏನೋ ನೋಡುತ್ತಿರುವಳು, ಏನೋ ಕಾಣಿಸುವುದು
ಎಲ್ಲಾ ಹೊಸ ಹೊಸದೆನಿಸುವುದು
ಮತ್ತೆ ಮತ್ತೆ ನೋಡ ಬೇಕೆನಿಸುವುದು,
ಎದೆ, ಬಿಳಿ ಮೋಡಕ್ಕಿಟ್ಟು ಕೊಂಡಂತಾಗಿ
ನೋವಿನ ಜಡಿ ಹಿಡಿದಿದೆ….

ಅತ್ತ ಬಂದ ಹಾಗೂ ಅಲ್ಲ
ಇತ್ತ ಬಿಟ್ಟ ಹಾಗೂ ಅಲ್ಲ
ಹೆಜ್ಜೆ ಇಟ್ಟಲ್ಲಿ ಕೆಸರು ಪಿಚಕಾರಿಯಾಗಿ ಹಾರುವಂತೆ
ಏನು ನೋಡಿದರೂ….. ಇನ್ನೆಲ್ಲಿ ಇದೆಲ್ಲಾ
ಯಾರನ್ನು ನೋಡಿದರೂ….. ಇನ್ನೆಲ್ಲಿ ಇವರೆಲ್ಲಾ
ಎಂಬ ನೋವು
ಓಡುತ್ತಾ ಬಂದ
ಮುದ್ದಿನ ಬೆಕ್ಕು
‘ನನಗೆ ತಿಳಿದಿದೆ ನೀನು ಹೋಗುವೆ ’ ಯೆಂಬಂತೆ
‘ಮಿಯಾಂವ್ ಮಿಯಾಂವ್’ ಎಂದು ನರಳಿದರೆ
ಮೊದಲೆ ಏರಿಯ ಮೇಲೆ ಹೊರಳುವಂತೆ ತುಂಬಿ
ಜೀಕುತ್ತಿದ್ದು
ಹಿಡಿಸಲಾರದ ಹಾಗೆ ಕೋಡಿ ಹೋಗುತ್ತಿರಲು
ಮೇಲೆ ಹೊಸದಾಗಿ ಪ್ರವಾಹ ಬಂದು ಗುದ್ದಿದರೆ
ಫಕ್ಕನೆ ಕರಿಬಾನ ಸಾಲು ಉರುಳಿದಂತೆ
ಕೋಡಿ ಧಡ ಧಡ ಕಿತ್ತು ಹೋಗುವ ಹಾಗೆ
ಬಿಕ್ಕುಕ್ಕುವವು ಒಂದೇ ಸಮನೆ

ಹೆಜ್ಜೆ ಸಪ್ಪಳವಾಯಿತು
ಕಂಡರಿನ್ನು –
ಯಾಕಮ್ಮಣ್ಣಿ ಹೀಗಳುವೆ?
ನೀನು ಸೀಮೆಗಿಲ್ಲದವಳಾಗಿಬಿಟ್ಟೆ ಬಿಡು
ಶುಭವೆಂದು ಕಾಲಿಡುವಾಗ ಅಳುವರೇನು?
ಹೀಗಾದರಾಯಿತು ಹೆತ್ತವರಿಗೆ ಹೊತ್ತವರಿಗೆ
ಕೀರ್ತಿ ಬಂದ ಹಾಗೆಯೆ!

ಇಷ್ಟಕ್ಕೂ ಏನಾಗಿದೆಯೆಂದು ಅಳುವೆ
ಏನು ನಿನ್ನನ್ನು ಕೊಲೆ ಕೊಟ್ಟಿದ್ದೀವಾ?
ಸುಲಿಗೆ ಕೊಟ್ಟಿದ್ದೀವಾ?
ಏಳೇ ಬೆಳೆಕಾತಿ!
ಹೀಗಳುವವಳು ಮದುವೆ ಯಾಕೆ ಮಾಡಿಕೊಂಡೆ?
ನಿನಗಷ್ಟು ಸಂಕಟವಾದರೆ ಇಷ್ಟು ಮಾಡು!
ಇಲ್ಲೆ ಇದ್ದು ಬಿಡು ಹುಟ್ಟಿದ ಮನೆ ಹುಳುವಾಗಿ
ಕಟ್ಟಿ! ಕೆಟ್ಟಿ! ಏಳೇಳು
ನಿನಗ್ಯಾಕೆ ಬುದ್ದಿ ಇಲ್ಲ
ಮೊದ ಮೊದಲು ಎಲ್ಲರಿಗೂ ಹಾಗೇನೆ
ಏಳು! ಮೊದಲು ಹೋಗಿ ಮುಖ ತೊಳೆದುಕೊಂಡು ಬಾ
ನೋಡಿದವರೇನಾದರೂ ಅಂದಾರು
ಅಳುತ್ತಾ ಕುಳಿತಿಹಳೆಲ್ಲಮ್ಮಾ! ಎಂದೆಲ್ಲಿ ಘಾತಿಸುವರೋ ಎಂದು
ಅವಸರ, ಅವಸರವಾಗಿ
ಅಡಸಲ, ಪಡಸಲ ಕಣ್ಣೀರ ಒರೆಸಿಕೊಂಡು,
ಏನೂ ಆಗಿಲ್ಲವೆಂಬಂತಿರಲು ಹವಣಿಸುವಳು,

ಆಗತಾನೇ ಬಂದವರು
ಬಿದ್ದು ಬಿದ್ದು ಅಳುವಂತೆ
ಸಾಗ ಹಾಕಲು ಬಂದ ಅಜ್ಜಿ
ಮೊಮ್ಮಗಳನ್ನಪ್ಪಪ್ಪಿ ರೋದಿಸುವಳು

ಊರು, ಉದ್ವಾನ ಕಂಡಿಲ್ಲ
ಒಳ್ಳೆಯದು ಕೆಟ್ಟದ್ದೊಂದೂ ಗೊತ್ತಿಲ್ಲ
ಹೇಗೆ ಸಂಭಾಳಿಸುವಳೋ ನನ್ನ ಕಂದಾ
ಪ್ರೀತಿಯಲಿ ಬೆಳೆದವಳು
ಬೇಕಾದ್ದೆ ತಿಂದವಳು
ಯಾರು ನೋಡುವರಿನ್ನು
ನನ ಕಂದಾ ‘ಹ್ಹಾ!’ ಎಂದಳೇ ‘ಹ್ಹೋ!’ ಎಂದಳೆಯೆಂದು
ಇನ್ನು ಮುಂದ
ದೇವರೇ!
ನಾವೆಷ್ಟರವರು
ನೀನು ಕಾಪಾಡ ಬೇಕಾದನೆನ್ನುವಳು; ಬೋರಾಡುವಳು
ಕಣ್ಣಲ್ಲಿ ನೀರು ತರಿಸುವಳು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...