Home / ಕವನ / ಕವಿತೆ / ಕನ್ನಡದ ಬಾವುಟ

ಕನ್ನಡದ ಬಾವುಟ

ಏರಿಸಿ, ಹಾರಿಸಿ, ಕನ್ನಡದ ಬಾವುಟ!
ಓಹೊ ಕನ್ನಡನಾಡು, ಆಹ್ ಕನ್ನಡನುಡಿ!
ಹಾರಿಸಿ, ತೋರಿಸಿ, ಕೆಚ್ಚೆದೆಯ ಬಾವುಟ!
ಗಾಳಿಯಲಿ ಫಟಪಟ, ದಾಳಿಯಲಿ ಚಟಚಟ,
ಉರಿಯಿತೋ ಉರಿಯಿತು ಹಗೆಯ ಹಟ ಮನೆ ಮಟ,
ಹಾಳ್ ಹಾಳ್ ಸುರಿಯಿತು ಹಗೆಯ ಬೀಡಕ್ಕಟ!
ಬಾಳ್ ಕನ್ನಡ ತಾಯ್!
ಏಳ್ ಕನ್ನಡ ತಾಯ್!
ಆಳ್ ಕನ್ನಡ ತಾಯ್!
ಕನ್ನಡಿಗರೊಡತಿ ಓ ರಾಜೇಶ್ವರೀ!
ರಾಜೇಶ್ವರೀಽ!

ಮೌರ್‍ಯ ಕಳಚೂರ್‍ಯರು, ಗಂಗರು, ಕದಂಬರು,
ರಟ್ಟರು, ಚಳುಕ್ಯರು ಹೊಯ್ಸಳರು, ಯಾದವರು,
ಇಳೆಗೆ ಮೇಲಾದವರು, ಬಾಣರು, ಜೀಣರು,
ಕೊಲೆಯ ಕೇಳ್‌ಕಿಚ್ಚಿಂಗೆ ತಂಪುಮಳೆ ತಳಿದು,
ಚೆಲುವು ನೆಲ ಸಾಲುತ್ತು, ಕಲೆಯ ಹೊಂಬೆಳೆಯಿಟ್ಟು,
ನಗಿಸಿದರು ನಾಡನು, ಕಡಿದು ಕಗ್ಗಾಡನು:
ಮಾನವನ ದೇವತೆಗೆ ತಂದ ಜಿನಭಕ್ತರು,
ಹಂಪೆಯ ವಿರುಪಾಕ್ಷ ಪುತ್ರರು, ವಿರಕ್ತರು,
ವೀರನಾರಾಯಣನ ಕೃಪೆಯೊಳಾಸಕ್ತರು,
ಶ್ರೀ ಗೌರಿ ಕಾವಲಿಹ ರಾಯರನುರಕ್ತರು,
ನಮ್ಮ ತಾಯ ಮಕ್ಕಳು-
ಬಾಳ ಬೆಳ್‌ದಿಂಗಳಲಿ ಒಲಿದು ನಲಿದವರು-
ಬೇವೊ ಬೆಲ್ಲವೊ ಬರಲಿ, ಮಲ್ಲಿಗೆಯೊ ಮುಳ್ಳೋ,
ಬಾನ ಬೆಳಕಿನಲಿ, ಮೇನದಳುಕಿನಲಿ,
ಚೆನ್ನು ಬದುಕನು ಕುಣಿಸಿ ಒಲಿದು ನಲಿದವರು-

ನಮ್ಮ ತಾಯಣುಗರು,
ಪಂಪನೋ, ರನ್ನನೋ, ಬಸವನೋ, ಮಾಧವನೊ,
ಆ ಅಕ್ಕಮಹದೇವಿ, ನಾರಣಪ, ಚಿಕದೇವ,
ಜಕ್ಕಣ, ಹೊನ್ನಮ್ಮ, ನಮ್ಮಮ್ಮನೆಳೆಯರು,
ಚೆಲುವ ಚೆಲುವೆಯರು-ಚಿನ್ನದ ಚಿಣ್ಣರು,
ಕಲಿಗಳು, ಕಿಡಿಗಳು, ಗಂಡರು, ಮೊಂಡರು,
ನಲಿದೊಲಿದು ಬೆಚ್ಚೊಂದು ನೆಚ್ಚಿಂಗೆ ಮೆಚ್ಚಿಂಗೆ
ಕಿಚ್ಚಿನಲಿ ಹಾಯ್ದು ನಲ್ಲನ ಹಿಡಿದ ಹೆಂಡಿರು,
ಸತಿಗಳು, ಯತಿಗಳು, ವ್ರತಿಗಳು, ಕೃತಿಗಳು-

ಕನ್ನಡದ ಬಾವುಟವ ಹಿಡಿಯದವರಾರು?
ಕನ್ನಡದ ಬಾವುಟಕೆ ಮಡಿಯದವರಾರು?
ನಮ್ಮ ಈ ಬಾವುಟಕೆ ಮಿಡಿಯದವರಾರು?
ಹೇಳಿರೋ ಹೆಸರೊಂದು ನೆನಹಿನಲಿ ಸುಳಿದರೆ!
ಹುಡಿಕಿರೋ ಹೇಡಿ ತಾನೊಬ್ಬ ಮನೆಗುಳಿದರೆ!

ಕನ್ನಡದ ನಾಡಲಾ,
ಕನ್ನಡದ ನುಡಿಯಲಾ,
ಕನ್ನಡಿಗನೆದೆ ಕಡೆದ ತೆನೆಯಲಾ ಕೆನೆಯಲಾ!
ಬೆಳಕು ಹರಿಯಿತು ಏಳಿ,
ಇರುಳೂ ಸವೆಯಿತು ಏಳಿ,
ತಾಯ ಕರೆ ಕೇಳಿ,
ಏಳಿರೋ, ಏಳಿರೋ, ಬಾಳ ಬಲಿ ಬೇಳಿರೋ
ಎಲ್ಲೊಲುಮೆಯೂ ಕೂಡಿದೊಂದೊಲುಮೆ ತಾಳಿರೋ,
“ತಾಯುಳಿಯೆ ನಾನುಳಿದೆ,
ತಾಯಳಿಯೆ ನಾನಳಿದೆ.
ಮನೆ ಕಾಯಿ, ತುರು ಕಾಯಿ, ನಾಡ ಗಡಿ ಗುಡಿ ಕಾಯಿ,
ಕಾಯಲಾರೆಯ, ಸಾಯಿ,”
ಎಂದೆಲ್ಲ ಏಳಿರೋ-
ಆಹ ಕನ್ನಡನುಡಿ, ಆಹ ಕನ್ನಡನಾಡು,
ಹಿರಿಯ ಕನ್ನಡ ಪಡೆ, ಮರಿಯ ಕನ್ನಡ ಪಡೆ,
ಏಳಿರೋ, ಬಾಳಿರೋ,
ಕನ್ನಡದ ಬಾವುಟವ ಹಿಡಿಯಿರೋ, ನಡೆಯಿರೋ!

ಏಳ್ ಕನ್ನಡ ತಾಯ್,
ಬಾಳ್ ಕನ್ನಡ ತಾಯ್,
ಆಳ್ ಕನ್ನಡ ತಾಯ್,
ಕನ್ನಡಿಗರೊಡತಿ ಓ ರಾಜೇಶ್ವರೀ!

ಇಂದಿನದೆ ಹೇಳಿರೋ ಈ ನಮ್ಮ ಬಾವುಟ!
ಕುಂದಿಹುದೆ ನೋಡಿರೋ ಈ ನಮ್ಮ ಬಾವುಟ!
ಕಂದದಿದೆ ಇಂದಿಗೂ ಕನ್ನಡದ ಬಾವುಟ!
ಏನೇನ ಕಂಡುದೋ ಬಾನಾಡಿ ಬಾವುಟ!
ಆವುದನು ಕಾಣದೋ ಜೀವಕಳೆ ಬಾವುಟ!
ಕನ್ನಡದ ಬಾವುಟಗಳೊಂದಾದ ಬಾವುಟ!
ಏರಿಸಿ, ಹಾರಿಸಿ, ತೋರಿಸಿ ಬಾವುಟ!
ತೇಲಾಡು, ಮೇಲಾಡು ಓಲಾಡು ಬಾವುಟ!
ಚೆಲುವಾಗು, ಗೆಲುವಾಗು, ಬಲವಾಗು, ಬಾವುಟ!
ಹೊನ್ನಾಗಿ, ಹೆಣ್ಣಾಗಿ, ಹಸನಾದ ಮಣ್ಣಾಗಿ,
ಹೊಸಹೊಸತು ಕಣ್ಣಾಗಿ, ಬೆಳಕಾಗಿ, ಬೆಳೆಯಾಗಿ,
ಕೂಡುತಿಹ ಕನ್ನಡದ ಹೊಮ್ಮುಗೆಯ ಕಾವಾಗಿ,
ಪರಿಪರಿಯ ಹೊಂಬಗೆಯ ಹೆರಿಗೆಯಾ ನೋವಾಗಿ,
ಸಿರಿಯ ಜಯಚಾಮನೆ* ಹಿರಿಯೊಲುಮೆ ಹೂವಾಗಿ,
ಬಾಳು ಎಲೆ ಬಾವುಟ!
ಬಾಳ್ ಕನ್ನಡ ತಾಯ್,
ಏಳ್ ಕನ್ನಡ ತಾಯ್,
ಆಳ್ ಕನ್ನಡ ತಾಯ್,
ಕನ್ನಡಿಗರೊಡತಿ ಓ ರಾಜೇಶ್ವರೀ!
* ಮೊದಲು – ನಾಲುಮಡಿ ಕೃಷ್ಣನೇ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...