Home / ಕವನ / ಕವಿತೆ / ಶ್ರೀ ಜಯನ ಬೆಳಕು

ಶ್ರೀ ಜಯನ ಬೆಳಕು

ಕನ್ನಡದ ಬಾನಿನಲಿ ಮೂಡಿತದೊ ಬೆಳಕು,
ಪುಣ್ಯ ಕಣ್ದೆರೆದಂತೆ ಬೆಳಕು!
ಕನ್ನಡಿಗರೊಲುಮೆ ತೆರೆಹೊಮ್ಮಿಸುವ ಬೆಳಕು,
ಹೊನ್ನ ಕನಸನು ತರುವ ಹೊಸ ಕಳೆಯ ಬೆಳಕು,
ಮುನ್ನರಿಯದಚ್ಚರಿಯ ಮೆಚ್ಚು ಬೆಳಕು.
ಬೆಳ್ಳಿ ಬೆಳಗುವ ಬಾನ ಬೆಳ್ಳನೆಯ ಬೆಳಕು,
ಒಳ್ಳಿತೊಸರುವ ಹೆಸರ ದೊಡ್ಡ ಬೆಳಕು.
ಸೂರ್‍ಯ ಚಂದ್ರರು ಮುಳುಗಿ, ಸುತ್ತೆತ ಕಗ್ಗತ್ತಲೆಯ ಮೋಡ ಹೇರಿ.
ತೆರೆ ನರಳ್ವ ನಡುಗಡಲ ಹಡಗಿನೆಡೆ, ಮೂಡಗೆಂಪೇರಿ,
ಮತ್ತೊಮ್ಮೆ ಮೇಲ್ ನೆಗೆವ ದೇವರುರಿಗಣ್ಣಂತೆ ತೋರಿ,
ನೆಗೆಯುತ್ತಿದೆ ಮತ್ತೊಮ್ಮೆ ನಮಗದೋ ತುಂಬು ಬಾಳ್ ಬೀರಿ
ಹಿರಿಯ ಬೆಳಕೊಂದು ಸಿರಿ ಸಾರಿ.

ಆಡಿ, ಕುಣಿದಾಡಿ, ಜಲವೆಲ್ಲಾ!
ಪಾಡಿ, ಓ ಪಾಡಿ, ನೆಲವೆಲ್ಲಾ!
ಕೂಗಿ, ನಾಡೆಲ್ಲಾ, ಬೀಗಿ, ಬೀಡೆಲ್ಲಾ,
ಓಲಾಡಿ, ಊರೆಲ್ಲ, ಮೇಲಾಡಿ ಹಳ್ಳಿಗಾಡೆಲ್ಲಾ,
ಸೋಲು ನಮಗಿನ್ನಿಲ್ಲ, ಗೆಲವೆ ಇನ್ನೆಲ್ಲಾ!
ಭಯ ಚೆದರೆ, ಚಿಮ್ಮುತಿದೆ ಕಳಕಳಿಯ ಬೆಳಕು,
ದಯದ ತಣ್ಬೆಳಕು,
ಜಯದ ಕಣ್ಬೆಳಕು,
ನಯದ ನುಣ್ಬೆಳಕು!
ಬೆರಗೆನಿಸಿ, ಮುದ್ದೆನಿಸಿ, ಗೆಲುವೆನಿಸಿ, ಚೆಲುವೆನಿಸಿ,
ಅರಿವಾಗಿ, ಅರುಳಾಗಿ, ಅರಸಿಯ ತಿರುಳಾಗಿ,
ಬೆಳ್ಗೊಡೆಯ ನೆರಳಾಗಿ, ಭಕ್ತಿಯರಳಾಗಿ,
ತಂದೆ ತಾಯ್ಗೆಂದಿಲ್ಲದೊಲವ ಮಣಿಸಿ,
ಹಿರಿತಂದೆಗರಸಾಳ್ಕೆ ನೆಚ್ಚ ತಣಿಸಿ,
ತಂಗಿಯರ ಮೆರಸಿ ಕುಣಿಸಿ,
ಯದುಕುಲದ ಕಲ್ಪವೃಕ್ಷದ ಫಲದ ಸೊದೆಯೆನಿಸಿ ಮನೆಮನೆಯನುಣಿಸಿ,
ತುಂಬುತಿದೆ, ನೆರೆಯುತಿದೆ, ನೋಡಿ, ಆ ಬೆಳಕು !
ಆಳ ಬಾಳಲ್ಲಾ?
ನೋವು ನಲಿವಲ್ಲಾ ?
ಪಾವು ಚಂದ್ರಂಗಿಲ್ಲ ? ಕೋಳು ಸೂರ್‍ಯಂಗಿಲ್ಲ ?
ದೇವರ್ಗಮೆಡರುತೊಡರಿಲ್ಲಾ ?
ತಂದೆಯಿರ್‍ವರ ಸೆಳೆದು ತಂದನೇ ಅಳಲ ವಿಧಿ !
ನೊಂದನೇ ನಮ್ಮ ನಿಧಿ !
ನೊಂದು, ನೋವನು ನುಂಗಿ, ಮುಂಬರಿಯುತಿದೆ, ಅಚ್ಚ ಬೆಳಕು!
ಕೆಚ್ಚೆದೆಯ ಬೆಳಕು!
ಕಣ್ಣೀರ ತೊಡೆದು, ಮಿಡಿದು,
ತಣ್ಣನೆಯ ಹರಕೆಗಳ ಹೊನ್ನ ಮುಡಿ ಮುಡಿದು,
ತನ್ನ ಹೊಣೆಗಳ ಹೊರೆಗೆ ನಾಡವರ ನೆರವ ಕುರಿತಾಳ್ವ ನುಡಿ ನುಡಿದು,
ನಾಡವರ ಬಾಳಾದ ಬಾಳ ಬೆಳಕು,
ನರಸಿಂಹ ಕೃಷ್ಣರಿರ್‍ವರು ಕೂಡಿ ನೆರೆದರೆನೆ ತೇಜಸ್ವಿಯಾಗಿ,
ಎಳೆಯ ಹೆರೆಯೊಳೆ ತೊಳಗಿ ತುಂಬು ಹೆರೆಯಾಗಿ,
ಸಿರಿಯೊಡೆಯ ಜಯಚಾಮರಾಜೇಂದ್ರನೆಂಬೊಂದು ದಿವ್ಯಮಣಿ ಬೆಳಕು,
ಮೂಡಿ, ಕಳೆಗೂಡಿ,
ಕನ್ನಡದ ಚೆಲುವಿಗದೊ ಬೆಳಗುತಿದೆ, ನೋಡಿ,
ದೈವ ಕೃಪೆ ಕೂಡಿ,
ಬೆಳಗುತಿದೆ ನಮಗಾಗಿ ಆ ದೊಡ್ಡ ಬೆಳಕು,
ಶ್ರೀ ಜಯನ ಬೆಳಕು.
*****
೧೯೪೦

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...