Home / ಕವನ / ಕವಿತೆ / ಶುಕ್ರಗೀತೆ

ಶುಕ್ರಗೀತೆ

[ಮೈಸೂರು ವಿಶ್ವವಿದ್ಯಾನಿಲಯದ ಬೆಳ್ಳಿಯ ಹಬ್ಬದ ಕವಿಸಮ್ಮೇಳನದಲ್ಲಿ ಓದಿದ್ದು]

ಓಂ, ಸಹ ನಾವವತು ; ಸಹ ನೌ ಭುನಕ್ತು;
ಸಹ ವೀರ್‍ಯಂ ಕರವಾವಹೈ ;
ತೇಜಸ್ವಿನಾವಧೀತಮಸ್ತು ;
ಮಾ ವಿದ್ವಿಷಾವಹೈ.
ಓಂ ಶಾಂತಿಃ ಶಾಂತಿಃ ಶಾಂತಿಃ

ಮೊತ್ತಮೊದಲೇ, ಬೆಳಕಾಗಲೆಂದಾಗ, ಬೆಳಕಾಯ್ತು ; ಬೆಳಕು ಚೆಲುವಾಯ್ತು;
ಕಿಡಿ ಸಿಡಿದು ಮಿನುಗಿದುವು ಜ್ಯೋತಿಗಳ್‌ ; ಮೂಡಿದರು ಸೂರ್ಯ ಚಂದಿರರು
ಲೋಕಚಕ್ಷುಗಳೆನಿಸಿ, ಸತ್ಯ ಧರ್ಮಗಳಂತೆ, ಕ್ಷಮೆ ದಯೆಗಳಂತೆ.
ಹಸುರ ಸೊಬಗಂ ತೊಟ್ಟು, ಹಾಡುತ್ತ, ಬಾನ್‌ಬಯಲೊಳಾಟವಾಡುತ್ತ,
ಸೌಂದರ್‍ಯದಿಂ ತೀವಿ, ಭೂದೇವಿ ಬೆಳಗಿದಳು, ಜೀವ ಪರಮಾತ್ಮರಿಂ ತೊಳಗಿ.

ಆ ದಿವ್ಯ ದರ್ಶನಂ ಕಣ್ಮುಂದೆ ನೋಡಿದರ್
ದಿವಿಜರುಂ, ಋಷಿಗಳುಂ ; ನಲಿದು ಕುಣಿದಾಡಿದ‌ರ್‌ ;
ಪಾಟಮಂ ಪಾಡಿದರ್-
ಓಂ, ತತ್ಸವಿತುರ್ ವರೇಣಿಯಂ
ಭರ್ಗೋ ದೇವಸ್ಯ ಧೀಮಹಿ,
ಧಿಯೋ ಯೋ ನಃ ಪ್ರಚೋದಯಾತ್.
ಮತ್ತಮವರಿಂತೆಂದು ಬೇಡಿದರ್‌-
ಹಿರಣ್ಮಯೇನ ಪಾತ್ರೇಣ
ಸತ್ಯಸ್ಯಾಪಿಹಿತಂ ಮುಖಂ ;
ತತ್ ತ್ವಂ ಪೂಷನ್ ಅಪಾವೃಣು
ಸತ್ಯಧರ್ಮಾಯ ದೃಷ್ಟಯೇ.

ಇನ್ನು ಮೊಂದಂ ಬಯಸಿ ಪೂಟಮಂ ಪೂಡಿದರ್-
ಅಸತೋ ಮಾ ಸದ್ಗಮಯ,
ತಮಸೋ ಮಾ ಜ್ಯೋತಿರ್‌ಗಮಯ,
ಮೃತ್ಯೋರ್ ಮಾ ಅಮೃತಂ ಗಮಯ,

ಇಂದಿಂಗಮೆಮಗದುವೆ ದರ್ಶನಂ, ಬಯಸಿದುದೆ ಆ ಅಮೃತಪುತ್ರರ್.
ಬ್ರಹ್ಮ ಮೀ ವಿಶ್ವಂ ; ಬ್ರಹ್ಮಮುಂ ಪೂರ್‍ಣಮೆನೆ ಏನ್ ಚೆಲುವೊ ನಮ್ಮ ಬಾಳ್ ಚೆಲುವು,
ಏನ್ ನಲಿವೊ ನಮ್ಮ ನಲಿವಾತ್ಮನಾನಂದಂ!

ಆನಂದನರಿಯದರ್‌,
ಆತ್ಮವನೆ ಒಲ್ಲದರ್,
ಬಾನ ಗಡಿಯಲಿ ಗಿಡಿದ ಕತ್ತಲೆಯ ಗುಹೆಯೊಳಡಗಿರ್‍ದರಾ ಅಸುರರ್
ಕೇಳ್ದರಾ ಪಾಟಮಂ ಪಲ್ಮೊರೆದು, ಕಣ್ಣಿರಿಯೆ ಕಂಡರಾ ಬಿಡುಗಣ್ಣ ಬೆಳಕನ್,
ಪೊಳೆದು ಪೊಳೆಯಿಸುತಿರ್ಪ ಬಿಳಿಯ ಬಾನ್‌ಬೆಳಕನ್.
ಮೆಲ್ಲಮೆಲ್ಲನೆ ನುಸುಳಿ ದೇವರಾವರಣದಲಿ, ಆಳ ತೋಟದಲಿ,
ತೆಕ್ಕೆ ತೆಕ್ಕೆಯೊಳೆದ್ದು ಹೊರಬಿದ್ದು, ಕಾರಿರುಳ ಮೊತ್ತಂಗಳಾಗಿ,
ಪೊಗೆಯಾಗಿ, ನೊಣೆವ ಪಡಿನೆಳಲಾಗಿ, ನಂಜಾಗಿ, ಕಣ್ಣ ಮಂಜಾಗಿ,
ಮುತ್ತಿ ಮರುಳ್ಗೊಳಿಸಿದ‌ರ್‌ ಸಂಶಯಂಗಳನೊತ್ತಿ, ಪಾಪಮಂ ಬಿತ್ತಿ,
ಅಲ್ಲದುದನಹುದೆಂದು, ಅಹುದನಲ್ಲೆಂದು,
ಇಲ್ಲದುದನಿಹುದೆಂದು, ಇಹುದನಿಲ್ಲೆಂದು,
ನಲ್ಲದಂ ಪೊಲೆಯೆಂದು, ಪೊಲೆ ನಲ್ಲದೆಂದು,
ತಿರಿಸಿದರ್ ಮಾಯಾವಿಗಳ್ ಬಾಳ್ವ ಮಕ್ಕಳಂ ಸಾವ ಸಂಸಾರ ಸುತ್ತಿ.
ಪಲ ಪೆಸರ್, ಪುರುಳೊಂದು,
ಪಲ ತೆರನ್, ನೆರೆನೊಂದು-
ಅಹಿ, ವೃತ್ರ, ಮಾರ, ಕಲಿ, ಅಹ್ರಿಮನ್, ಸೈತಾನ್!

ಅಂದು ಮೊದಲಾದುದೇ ದೇವಾಸುರಂ!
ಎಂದು ಕೊನೆಗಾಣ್ಬುದೋ ದೇವಾಸುರಂ!
ಪಸುಳೆವೋಲ್ ನಿಲ್ವಾಳ ನಿಲವು!
ಏನ್ ಚೆಲ್ಲು ಚೆಲ್ವು!

ಓ ಪಂಪ, ನೀನ್ ತುಂಬಿ ತೊರೆದೊಱತೆ ಪರಿವುದಿನ್ನುಂ.
ಸಾವಿರಂ ಸಂದುವುದು ಪರಿವುದಿನ್ನುಂ.
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದರ್ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,
ಮರೆಯದಿರು, ಪರಸು, ಪರಸೆಮ್ಮನ್.
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ!
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ!
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...