Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...