Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...