Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...