Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...