Home / ಲೇಖನ / ಹಾಸ್ಯ / ಕಲಿಯುಗಾ ಬಂತು

ಕಲಿಯುಗಾ ಬಂತು

(ಪೇನಶನ್‌ ಪಡೆದ ಮಾಮುಲೇದಾರ ಕಚೇರಿಯ – ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕೂಗಿ ಕೂಗಿ ಹೇಳುತ್ತಲಿದ್ದಾರೆ.)

ನಾ ಏನ್ ಹೇಳಿದೆ ನಿಮಗ..! ಈ ಲಂಡ… ಮಕ್ಕಳಿಗೆ ಮಡೀ ಇಲ್ಲಾ… ಮೈಲಿಗಿ ಇಲ್ಲಾ! ದಶಮೀ ಕಟಿಗೊಂಡು ಫಿರತೀಮ್ಯಾಲೆ ಹೋಗೂ ಮಾಮಲೇದಾರನ್ನ ಎಂದಽರೇ ನೋಡಿದ್ದೀರಾ? ಏನ್‌ ಹೇಳ್ಳಿ…!

ಈಗಿನ್ನೂ ಎಲ್ಲಾ ದಶಮಿ ಕಟಿಗೊಂಡು ಹೋಗುತಾವಂತ….; ದುಡ್ಡಿನ ಹಾಲು ದುಡ್ಡಿನ ಮಸರು ತರಿಸಿ ಚ್ಯಾವಡಿ ಕಟ್ಟೇಮ್ಯಾಲೆ ದಶಮೀ ಗಂಟು ಬಿಚ್ಚಿ, ತಿಂದು ಬರತಾವಂತ…. ವಾಲೀಕಾರರ ಹಾಂಗ! ಇವರು ಮಾಮಲೇದಾರರಽ ಇವರು..!

“ಹೋಗಬೇಕು ಹೋದರ ಫಿರತೀಮ್ಯಾಲೆ…. ನಮ್ಮ ಗೋವಿಂದ ರಾಯರಗೂಡಾ! ಅವರ ಮಡೀ ಏನೂ, ಮೈಲಿಗಿ ಏನೂ, ಎಲ್ಲಾ-ವಿಲಕ್ಷಣ ನೋಡ್ರಿ! ನರಸಿಂಹ ಸಾಲಿಗ್ರಾಮ ಇರತಿತ್ತು…. ಅವರ ಪೆಟ್ಟಿಗ್ಯಾಗ; ನಿತ್ಯ ಅದರ ಅಭಿಷೇಕ ಆಗದ ಹೊರತು ಊಟಾನೆ ಇಲ್ಲಾ! ನಾಕು ಸೇರು ಹಾಲು ಬೇಕಾಗತಿದ್ದೂ ಅಭಿಷೇಕಕ್ಕ! ಇಷ್ಟ ಹಾಲು ಹ್ಯಾಂಗ ಸಿಗತದ್ದೂವಽ….? ಹಳ್ಳಿ ಗೌಡ ಕುಲಕರ್ಣ್ಯಾರ ತಾಯಿ ಏನ ಹಡೆದ್ದು ಹಾಲು ಇಲ್ಲಾಽಂತ ಹೇಳಲಿಕ್ಕೆ!”

“ನಿಮಗೊಂದು ಮೋಜು ಹೇಳತೀನಿ ರಾಯರಽ! ಒಮ್ಮೆ ಚೈತ್ರ ಮಾಸ, ತಿಮ್ಮಾಪೂರದಾಗ ಮುಕ್ಕಾಂ ಇತ್ತು! ರಣಾ ರಣಾ ಬ್ಯಾಸಗಿ; ಬಿಸಲಾಗ ತಿರಿಗಿ ತಿರಿಗಿ ಬ್ಯಾಸತ್ತು ಹೋಗಿತ್ತು ಕಚೇರಿ….! ಒಂದು ದಿನಾ ಶ್ರೀಖಂಡ ಅರೇ ತಿಂದರ ಥಣ್ಣಗಽ ಅನಿಸೀತೂ ಅಂತಾ ವಿಚಾರ ಬಂತು. ನಸೀಕಲೇ ಎದ್ದವರೇ ಮಸರಗಡಗೀ ತರಿಸಲಿಕ್ಕೆ ಹೇಳಿದಿವಿ ಗ್ರಾಮಸ್ತರಿಗೆ! ಐದಾರು ಮಸರಗಡಗೀ ತಂದರು…! ನೋಡತೀವಽ ಮಸರಿನಮ್ಯಾಲ ಕೆನೀನೇ ಇಲ್ಲಾ! ಇಂಥಾ ಲುಚ್ಚಾ ಆಗೇದ ಜನಾ! ಒಂದರ ಬೆನ್ನ ಹಿಂದ ಒಂದರಂತೇ ಯಾವ ಗಡಗೀ ನೋಡಿದರೂ ಅದೇ ಹಣೇಬಾರ! ನಮ್ಮ ಸಿರಸ್ತಾರರ ಸಿಟ್‌ ಏನ್‌ ಕೇಳತೀರಿ… ಗಡಗೀ ತೊಗೊಂಡು ಬಿಸಾಟೆ ಬಿಟ್ಟರ, ಕುದರೀ ಕಾಲಾಗ ಹೋಗಿ ಬಿತ್ತು ಗಡಗಿ! ಧರ್ಮಸಾಲಿ ಮುಂದೆಲ್ಲ ಗೋಪಾಳ ಕಾವಲಿ ಅದ್ಹಾಂಗ ಆಯ್ತು! ಮತ್ತೇನದ…! ಗೌಡಾ ಕುಲಕರ್ಣಿ ಬಂದರು….; ನಮೋ ನಮೋ ಅನಿಸಿ ಬಿಟ್ಟೆ ಅವರ ಕಡಿಂದ! ಮುಂದೇನ್ ಕೇಳತೀರಿ, ಆ ಮುಕ್ಕಾಮಿನೊಳಗ ಇರೂ ತನಕ ಒಂದು ದಿನಾ ಶ್ರೀಖಂಡ… ಒಂದು ದಿನಾ ಬಾಸುಂದೀ….! ಅಮಲಂದರ ಹೀಂಗ ಕೂಡಿಸಬೇಕಾಗತದಽ ರಾಯರಽ! ಇಂಥಾ ಕೆಲಸ ದುಡ್ಡಿನ ಹಾಲು ಮಸರು ತೊಗೊಳ್ಳುವರ ಕಡಿಽಂದ ಆಗತದಽ ಎಲ್ಯಾರೆ?

“ಅಲ್ರಿ… ಇವರ ನಸೀಬಕ್ಕ ಅಡಗೀಯವರು ಸಿಗಬಾರದಽ? ತಾಲೂಕಿಗೆ ದೀಡನೂರ ಹಳ್ಳಿ; ಒಬ್ಬಿಲ್ಲಾ ಒಬ್ಬ ಕುಲಕರ್ಣೇರು ನೇಮಣೂಕಿ ಕೆಲಸ ಇದ್ದೇ ಇರತದ! ಊರಿದ್ದಲ್ಲೆ ಹೊಲಗೇರಿ ಅಂತ, ಎಲ್ಲಾಕಡೆ ಅದಾವ-ತೀನೂ ಇದ್ದೇ ಇರತಾವ! ಯಾರದಾದರೂ ಒಂದು ಅರ್ಜಿ ತಗೊಂಡು ಚೌಕಶೀಗೆ ಹಾಕ್ಕೋಽತ, ನಡದರಾತ್ರೆಪಾ….? ಕುಲಕರ್ಣಿ ಕ್ಯಾಂಪಿನ ಬೆನ್ನು ಹತ್ತೆ ಹತ್ತತಾನ…! ಅಲ್ಲಿಂದೇನು ಅಡಗೀ ಆಗತಽದ – ನೀರು ಆಗತಽದ- ಎಲ್ಲಾ ಆಗತಽದ! ನಮ್ಮ ರಾವಸಾಹೇಬರ ಕಡೆ ಇದ್ದನಲ್ಲಾ ನಾರಾಯಣಪ್ಪ! ಅವನದೊಂದು ಮೋಜಿನ ಕತೀನ. ಆತ; ಬಾಯೀಯವರ ಕೈತೆಳಗಿದ್ದು ಅಡಗೀ ಕಲಿತ ನಾರಾಯಣಪ್ಪ ‘ಇನ್ನೇನು ಕುಲಕರ್ಣಕಿ ಬ್ಯಾಡ, ಅಡಗೀನಽ ಮಾಡಿಕೊಂಡಿರೂದು ನೆಟ್ಟಿಗ! ಅಂದ. ಈಗ ನೋಡ್ರಿ ನಾನೂರು-ಐನೂರು ಜನರ ಪ್ರಸ್ತದ ಅಡಿಗಿ ಅಂದರೂನೂ ಹೊಡದು ಚೆಲ್ಲತಾನ ನಾನಾಯಣಪ್ಪ!

“ಇದೆಲ್ಲಾ ಅಮಲ್ದಾರರ ಕರ್ತಬ ಗಾರೀ ಮಾತು ಅದ ಏನ್ರೆವಾ! ಇವೇನ್ರಿ ಗಳಗಳಾ ಗಳಗಳಾ ಅಳತಾವ! ಸ್ನಾನ ಇಲ್ಲದಽನ, ಮೂರು ಮೂರು ದಿವಸ ತಂಗಳ ದಶೀಮೀ ತಿಂತಾವ! ಅದಕಽ ಕಲಿಯುಗಾ ಬಂತೂ ಅಂದೆ! ಏನು ಮಾಡೂದದಽ! ಆ ಕಾಲ ಹೋತು ಆ ಮಾತು ಹೋತು! ನಡೀರಿ ಪುರಾಣದ ಹೊತ್ತಾತು…. ಆಚಾರ್ರು ಬಂದಿದ್ದಾರು!”

(ಕಾರಕೂನರ ಮಾತನ್ನ ಕೇಳಿದ ರಾಯರ ‘ಈ ಕಲಿಯುಗದಲ್ಲಿ ಜೀವಿಸಿರುವದೇ ಬೇಡ!’ ಎಂದು ಪ್ರತಿಜ್ಞೆ ಮಾಡುತ್ತಲೇ ಪುರಾಣಕ್ಕೆ ಹೊರಟರು.)
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...