Home / ಲೇಖನ / ಹಾಸ್ಯ / ಕಲಿಯುಗಾ ಬಂತು

ಕಲಿಯುಗಾ ಬಂತು

(ಪೇನಶನ್‌ ಪಡೆದ ಮಾಮುಲೇದಾರ ಕಚೇರಿಯ – ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕೂಗಿ ಕೂಗಿ ಹೇಳುತ್ತಲಿದ್ದಾರೆ.)

ನಾ ಏನ್ ಹೇಳಿದೆ ನಿಮಗ..! ಈ ಲಂಡ… ಮಕ್ಕಳಿಗೆ ಮಡೀ ಇಲ್ಲಾ… ಮೈಲಿಗಿ ಇಲ್ಲಾ! ದಶಮೀ ಕಟಿಗೊಂಡು ಫಿರತೀಮ್ಯಾಲೆ ಹೋಗೂ ಮಾಮಲೇದಾರನ್ನ ಎಂದಽರೇ ನೋಡಿದ್ದೀರಾ? ಏನ್‌ ಹೇಳ್ಳಿ…!

ಈಗಿನ್ನೂ ಎಲ್ಲಾ ದಶಮಿ ಕಟಿಗೊಂಡು ಹೋಗುತಾವಂತ….; ದುಡ್ಡಿನ ಹಾಲು ದುಡ್ಡಿನ ಮಸರು ತರಿಸಿ ಚ್ಯಾವಡಿ ಕಟ್ಟೇಮ್ಯಾಲೆ ದಶಮೀ ಗಂಟು ಬಿಚ್ಚಿ, ತಿಂದು ಬರತಾವಂತ…. ವಾಲೀಕಾರರ ಹಾಂಗ! ಇವರು ಮಾಮಲೇದಾರರಽ ಇವರು..!

“ಹೋಗಬೇಕು ಹೋದರ ಫಿರತೀಮ್ಯಾಲೆ…. ನಮ್ಮ ಗೋವಿಂದ ರಾಯರಗೂಡಾ! ಅವರ ಮಡೀ ಏನೂ, ಮೈಲಿಗಿ ಏನೂ, ಎಲ್ಲಾ-ವಿಲಕ್ಷಣ ನೋಡ್ರಿ! ನರಸಿಂಹ ಸಾಲಿಗ್ರಾಮ ಇರತಿತ್ತು…. ಅವರ ಪೆಟ್ಟಿಗ್ಯಾಗ; ನಿತ್ಯ ಅದರ ಅಭಿಷೇಕ ಆಗದ ಹೊರತು ಊಟಾನೆ ಇಲ್ಲಾ! ನಾಕು ಸೇರು ಹಾಲು ಬೇಕಾಗತಿದ್ದೂ ಅಭಿಷೇಕಕ್ಕ! ಇಷ್ಟ ಹಾಲು ಹ್ಯಾಂಗ ಸಿಗತದ್ದೂವಽ….? ಹಳ್ಳಿ ಗೌಡ ಕುಲಕರ್ಣ್ಯಾರ ತಾಯಿ ಏನ ಹಡೆದ್ದು ಹಾಲು ಇಲ್ಲಾಽಂತ ಹೇಳಲಿಕ್ಕೆ!”

“ನಿಮಗೊಂದು ಮೋಜು ಹೇಳತೀನಿ ರಾಯರಽ! ಒಮ್ಮೆ ಚೈತ್ರ ಮಾಸ, ತಿಮ್ಮಾಪೂರದಾಗ ಮುಕ್ಕಾಂ ಇತ್ತು! ರಣಾ ರಣಾ ಬ್ಯಾಸಗಿ; ಬಿಸಲಾಗ ತಿರಿಗಿ ತಿರಿಗಿ ಬ್ಯಾಸತ್ತು ಹೋಗಿತ್ತು ಕಚೇರಿ….! ಒಂದು ದಿನಾ ಶ್ರೀಖಂಡ ಅರೇ ತಿಂದರ ಥಣ್ಣಗಽ ಅನಿಸೀತೂ ಅಂತಾ ವಿಚಾರ ಬಂತು. ನಸೀಕಲೇ ಎದ್ದವರೇ ಮಸರಗಡಗೀ ತರಿಸಲಿಕ್ಕೆ ಹೇಳಿದಿವಿ ಗ್ರಾಮಸ್ತರಿಗೆ! ಐದಾರು ಮಸರಗಡಗೀ ತಂದರು…! ನೋಡತೀವಽ ಮಸರಿನಮ್ಯಾಲ ಕೆನೀನೇ ಇಲ್ಲಾ! ಇಂಥಾ ಲುಚ್ಚಾ ಆಗೇದ ಜನಾ! ಒಂದರ ಬೆನ್ನ ಹಿಂದ ಒಂದರಂತೇ ಯಾವ ಗಡಗೀ ನೋಡಿದರೂ ಅದೇ ಹಣೇಬಾರ! ನಮ್ಮ ಸಿರಸ್ತಾರರ ಸಿಟ್‌ ಏನ್‌ ಕೇಳತೀರಿ… ಗಡಗೀ ತೊಗೊಂಡು ಬಿಸಾಟೆ ಬಿಟ್ಟರ, ಕುದರೀ ಕಾಲಾಗ ಹೋಗಿ ಬಿತ್ತು ಗಡಗಿ! ಧರ್ಮಸಾಲಿ ಮುಂದೆಲ್ಲ ಗೋಪಾಳ ಕಾವಲಿ ಅದ್ಹಾಂಗ ಆಯ್ತು! ಮತ್ತೇನದ…! ಗೌಡಾ ಕುಲಕರ್ಣಿ ಬಂದರು….; ನಮೋ ನಮೋ ಅನಿಸಿ ಬಿಟ್ಟೆ ಅವರ ಕಡಿಂದ! ಮುಂದೇನ್ ಕೇಳತೀರಿ, ಆ ಮುಕ್ಕಾಮಿನೊಳಗ ಇರೂ ತನಕ ಒಂದು ದಿನಾ ಶ್ರೀಖಂಡ… ಒಂದು ದಿನಾ ಬಾಸುಂದೀ….! ಅಮಲಂದರ ಹೀಂಗ ಕೂಡಿಸಬೇಕಾಗತದಽ ರಾಯರಽ! ಇಂಥಾ ಕೆಲಸ ದುಡ್ಡಿನ ಹಾಲು ಮಸರು ತೊಗೊಳ್ಳುವರ ಕಡಿಽಂದ ಆಗತದಽ ಎಲ್ಯಾರೆ?

“ಅಲ್ರಿ… ಇವರ ನಸೀಬಕ್ಕ ಅಡಗೀಯವರು ಸಿಗಬಾರದಽ? ತಾಲೂಕಿಗೆ ದೀಡನೂರ ಹಳ್ಳಿ; ಒಬ್ಬಿಲ್ಲಾ ಒಬ್ಬ ಕುಲಕರ್ಣೇರು ನೇಮಣೂಕಿ ಕೆಲಸ ಇದ್ದೇ ಇರತದ! ಊರಿದ್ದಲ್ಲೆ ಹೊಲಗೇರಿ ಅಂತ, ಎಲ್ಲಾಕಡೆ ಅದಾವ-ತೀನೂ ಇದ್ದೇ ಇರತಾವ! ಯಾರದಾದರೂ ಒಂದು ಅರ್ಜಿ ತಗೊಂಡು ಚೌಕಶೀಗೆ ಹಾಕ್ಕೋಽತ, ನಡದರಾತ್ರೆಪಾ….? ಕುಲಕರ್ಣಿ ಕ್ಯಾಂಪಿನ ಬೆನ್ನು ಹತ್ತೆ ಹತ್ತತಾನ…! ಅಲ್ಲಿಂದೇನು ಅಡಗೀ ಆಗತಽದ – ನೀರು ಆಗತಽದ- ಎಲ್ಲಾ ಆಗತಽದ! ನಮ್ಮ ರಾವಸಾಹೇಬರ ಕಡೆ ಇದ್ದನಲ್ಲಾ ನಾರಾಯಣಪ್ಪ! ಅವನದೊಂದು ಮೋಜಿನ ಕತೀನ. ಆತ; ಬಾಯೀಯವರ ಕೈತೆಳಗಿದ್ದು ಅಡಗೀ ಕಲಿತ ನಾರಾಯಣಪ್ಪ ‘ಇನ್ನೇನು ಕುಲಕರ್ಣಕಿ ಬ್ಯಾಡ, ಅಡಗೀನಽ ಮಾಡಿಕೊಂಡಿರೂದು ನೆಟ್ಟಿಗ! ಅಂದ. ಈಗ ನೋಡ್ರಿ ನಾನೂರು-ಐನೂರು ಜನರ ಪ್ರಸ್ತದ ಅಡಿಗಿ ಅಂದರೂನೂ ಹೊಡದು ಚೆಲ್ಲತಾನ ನಾನಾಯಣಪ್ಪ!

“ಇದೆಲ್ಲಾ ಅಮಲ್ದಾರರ ಕರ್ತಬ ಗಾರೀ ಮಾತು ಅದ ಏನ್ರೆವಾ! ಇವೇನ್ರಿ ಗಳಗಳಾ ಗಳಗಳಾ ಅಳತಾವ! ಸ್ನಾನ ಇಲ್ಲದಽನ, ಮೂರು ಮೂರು ದಿವಸ ತಂಗಳ ದಶೀಮೀ ತಿಂತಾವ! ಅದಕಽ ಕಲಿಯುಗಾ ಬಂತೂ ಅಂದೆ! ಏನು ಮಾಡೂದದಽ! ಆ ಕಾಲ ಹೋತು ಆ ಮಾತು ಹೋತು! ನಡೀರಿ ಪುರಾಣದ ಹೊತ್ತಾತು…. ಆಚಾರ್ರು ಬಂದಿದ್ದಾರು!”

(ಕಾರಕೂನರ ಮಾತನ್ನ ಕೇಳಿದ ರಾಯರ ‘ಈ ಕಲಿಯುಗದಲ್ಲಿ ಜೀವಿಸಿರುವದೇ ಬೇಡ!’ ಎಂದು ಪ್ರತಿಜ್ಞೆ ಮಾಡುತ್ತಲೇ ಪುರಾಣಕ್ಕೆ ಹೊರಟರು.)
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...