Home / ಕವನ / ಕವಿತೆ / ಬಸವಿ ಮಗಳು

ಬಸವಿ ಮಗಳು

ನಾಲ್ಕು ಜನರಿರುವ ಜಾಗವನ್ನು ದಾಟಿ ಹೋಗ ಬೇಕೆಂದರೆ
ಕುತ್ತಿಗೆಗೆ ಬರುವುದು
ಜನರ ನೋಟ ಹೊಟ್ಟೆಯೊಳಗೆ ಕಟ್ಟು ಚೂರಿಯನ್ನಾಡಿಸಿದಂತಾಗುವುದು
ಮಾತುಗಳು ನಗಾರಿಯ ಭೇರಿಯಂತೆ ತಮಟೆ ಹರಿಯುವವು
ತಲೆ, ತಂತಾನೆ ಮಣ ಭಾರ ವಾಗುವುದು; ಮೇಲೆತ್ತದಂತಾಗುವುದು
ನಿತ್ರಾಣವಾಗಿ ಕಾಲುಗಳು ಕಿತ್ತಿಡಲಾಗದಷ್ಟು ಭಾರವಾಗುವವು
ಜೀವ ಮುದ್ದೆ, ಮುದ್ದೆಯಾಗುವುದು.
ಬಸವಿಯ ಮಗಳಾದ ಪಾಪಕ್ಕಾಗಿ ಎಲ್ಲಾ ಸಹಿಸ ಬೇಕಾಗುವುದು

ಹೊರಗೆ ಈ ವಾಡು
ಒಳಗೆ, ಕೇಳೋದೆ ಬೇಡ!

ನಮ್ಮನ್ನು ಸಾಕಿದ ದೊಡ್ಡಮ್ಮನ ಮಗನೂ
ಮಾತಿಗೆ ಬಂದರೆ ಏನೇನೂ ಉಳಿಸನು, ಜನ್ಮ ಜಾಲಾಡಿ ಬಿಡುವನು-
“ನಿಮಗೆ ಯಾರಿದ್ದರು?
ನಾನೊಬ್ಬ ಕೈ ಹಿಡಿಯದಿದ್ದರೆ
ಎಂದೋ ತುರುಕರು, ತುಂಡರ ಪಾಲಾಗಿ ಹೋಗಿ ಬಿಡುತ್ತಿದ್ದಿರಿ,
ನಿಮ್ಮಮ್ಮ, ಬೀದಿ ನಾಯಿಯಂತೆ
ಸಿಕ್ಕಿದವರಿಗೆ ಬಸುರಾಗಿ, ಸಿಕ್ಕಲ್ಲಿ ಈದುಕೊಂಡು, ಹಾಗೇನೆ,
ಮೂರು ಹೆಣ್ಣು ಬೋಕಿಗಳನ್ನು ಕಟ್ಟಿ ಕೊಂಡು
ಹೊಸ್ತಿಲಿಂದ ಹೊಸ್ತಿಲಿಗೆ ತಳ, ಕೂಳಿಗಾಗಿ ಅಲೆಯುತ್ತಿದ್ದಾಗ
ಪಾಪ! ಅಂದ ನಾನು ಕರಕೊಂಡು ಬಂದು
ಒಳಗಿಟ್ಟು ಕೊಂಡೆ;
ಒಂದು ಗೌರವ, ಬಾಳು ಕೊಟ್ಟೆ ಕಣಿರೆ” ಎನ್ನುವನು

ಮಾಡಿದ್ದ ಆಡಿದರೆ ಏನು ಬಂತು? ಹೇಳಿ

ಕಟ್ಟಿ ಕೊಂಡವನೋ…
ದೇವರಿಗೆ ಪ್ರೀತಿಯಾಗ ಬೇಕು!-
ಅಂಬದ ಮಾತಿಲ್ಲ
ಕೊಡದ ಚಿತ್ರ ಹಿಂಸೆಯಿಲ್ಲ
ಅವನಿಗೆ ನಾನೊಬ್ಬಳು ಮನುಷ್ಯಳೆಂಬುದೇ ಗೊತ್ತಿಲ್ಲ
ನನಗೆ ಅನುಭವಿಸದೆ ವಿಧಿಯಿಲ್ಲ

ಬಿಟ್ಟನೆಂದರೆ ಬರಮಾಡಿಕೊಳ್ಳುವರಾರು!
ಹೊರಟೆನೆಂದರೆ ಹೋಗುವುದೆಲ್ಲಿಗೆ?
ನನಗೆ, ನನ್ನವರೆ, ತನ್ನವರೆ, ಮನೆಯೆ, ಮಠವೆ?
ಯಾರಿದ್ದಾರೆ? ಏನಿದೆ?
ಇದ್ದರೂ ಇಲ್ಲೆ ಬಿದ್ದರೂ ಇಲ್ಲೆ! ನನಗಿರುವುದು ಇದೊಂದೆ!
ಇದ್ದೊಬ್ಬ ತಾಯಿಯೂ ಹೆಣವಾಗಿ ಇಲ್ಲೆ ಬಿದ್ದಿಹಳು

ಎಲ್ಲೆಲ್ಲೋ ಬಿದ್ದೆದ್ದು ಬರುವನು
ತಿಂದು, ಕುಡಿದು ಮಜಾ ಮಾಡಿ ಲಾಕ್ ಲೇಕ್ ಮಾಡುವನು
ಯಾರು ಯಾರನ್ನೋ ಕಟ್ಟಿ ಕೊಂಡು ಬರುವನು
ಹೊತ್ತು ಗೊತ್ತೆಂಬುದೇ ಇಲ್ಲ
ಬಂದಾಗ ಬಾಗಿಲು ತೆರೆಯಬೇಕು
ಈಗ ಆಗ ಬೇಕೆಂದರೆ ಆಗ ಆಗಬೇಕು
ಒಳಗೆ ಐತ್ತೆ ಇಲ್ಲ ಅನ್ನೋದು ನೋಡಲ್ಲ
ತನಗೆ ಹೇಗೊ ತನ್ನ ಹಿಂದೆ ಬಂದಿರುವವರಿಗೂ ಹಾಗೇ
ಏನೂ ಕಡಿಮೆಯಾಗಬಾರದು
ಹಾಗೇನಾದರೂ ಆಯಿತೋ ಕೆಂಡ, ಕೆಂಡವನ್ನೇ ಕಾರುವನು
ಮಹಾರಾಯ! ತಾನು ಸಾಕಿರುವ ನಾಯಿಗೆ ತೋರಿಸುವಷ್ಟು ಪ್ರೀತಿ
ತೋರಿಸಿದ್ದರೂ ಎಷ್ಟೋ ಆಗುತ್ತಿತ್ತು

ಏನಾದರೂ ಮಾಡಲಿ ಬಿಡಲಿ
ಇರುಳು ಹಗಲು ಮಲಗಿ ಕೊಂಡಿರಲಿ ಕೇಳುವ ಹಾಗಿಲ್ಲ
ಬಾಯಿತಪ್ಪಿ ಅಂದರೂ
ಆಂ! ಊಂ… ಊ….!
ಉಸಿರು ಬಿಟ್ಟರೆ ನೋಡು
ತಲೆ ಹೊಯ್ದ ಎಲೆ ಮುಚ್ಚಿ ಬರುವೆ ಹುಷಾರ್!
ಎಚ್ಚರಿಕೆಯಲ್ಲಿರು ಎನ್ನುವನು

ಅದು ಹೋಗಲಿ ಬಿಡಿ!
ಇವುಗಳ ತಲೆ ಬಿದ್ದೋಗ
ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಾದರೂ ಕೂಡ
ನೋಡಿ, ಮಾಡಿ ಮಾತಾಡುವುದಿದೆಯೆ?
“ಲೇ! ಅಪ್ಪನ ಗುರುತು ಅರಿಯದವಳೆ! ಹಾರಾಡ ಬೇಡ”
ವೆನ್ನುವವು

ಥೂ! ಇಂತಾ ಜನ್ಮಬೇಕಿತ್ತಾ?
ಯಾವ ತಾಯಿಗ್ಗಂಡ ಮಾಡಿದನೋ ಈ ಬಸವಿ ಬಿಡೋದಾ!
ಇವನ ವಂಶ ನಿರ್ವಂಶವಾಗಿ ಹೋಗಾ!
ಅವನನ್ನು ಮೆಟ್ಟು ಬೀಳುವಾಗ ಮೆಟ್ಟು ತಗೊಂಡು ಹೊಡಿಬೇಕು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...