Home / ಕವನ / ಕವಿತೆ / ಗುಲಾಮ ಗೀತೆ

ಗುಲಾಮ ಗೀತೆ

ಬೇರು ಕಿತ್ತ ಮರ, ನಾರು ನನ್ನ ನರ
ಹಗ್ಗವಾಯಿತು ನಿಮಗೆ ಉರುಳು ನನಗೆ
ಸಾವ ನೇಯುವ ನೂಲು, ಭಾವ ಬತ್ತಿದ ಮಾಲು
ಬಣ್ಣ ಬಣ್ಣದ ನೇಯ್ಗೆ ಬಿದ್ದೆ ಬಲೆಗೆ.

ನಿಮ್ಮ ಅನ್ನದ ಅಗುಳು, ಯಾರೂ ತಿನ್ನದ ಉಗುಳು
ಕಾಲು ಒತ್ತುವ ಕಾಲ-ಎಲ್ಲ ನಾನು
ಹುಟ್ಟು ಹಬ್ಬದ ಕಾಳು, ಸತ್ತ ಸೂಚನೆ ಕೂಳು
ನಡುವೆ ನಡ ಮುರಿದಂಥ ನಗುವು ನಾನು.

ಕಲ್ಲುಕೋಟೆಯ ಬೆವರು, ಗುಡಿಯ ಗೋಪುರ ಸೂರು
ಆಣೆಕಟ್ಟ ನಿಟ್ಟುಸಿರು, ನೀರಾದ ನಂಬಿಗನು
ಓಣಿ ಓಣಿಯ ಪೊರಕೆ, ಶುದ್ಧ ಬಯ್ಗಳ ಹರಕೆ
ಗುಡಿಸುತ್ತ ಗುಡಿ-ಸುತ್ತ ತಾನೇ ಕಸವಾದವನು.

ಯುದ್ಧಕಾಲದ ಕವಚ, ನಿದ್ದೆ ಕಾಲದ ಕಾವಲು
ಕಾಲದ ಕಾಲಿಗೆ ಮೆಟ್ಟು ಮೈಯ್ಯಾದೆನು
ಈಜು ಬುರುಡೆಯ ರೀತಿ ಮೇಲೆದ್ದು ಬರುವಂಥ
ಕನಸುಗಳು ಸುಟ್ಟು ಕರುಕಾದೆನು.

ನಿಮ್ಮ ಕನಸಿನ ಮನಸು, ಸುಳ್ಳ ಹಿಂದಿನ ಸತ್ಯ
ಕಾನೂನು ಕಂಬಿಗಳ ಕರುಳು ನಾನು
ಚಳಿಗೆ ಉಣ್ಣೆಯ ಉಡುಪು, ಬಿಸಿಲು ಕಾಲದ ಕೊಡೆ
ಗುಡುಗು ಸಿಡಿಲುಗಳ ಕೊರಳು ನಾನು.

ನಿಮ್ಮ ಮದುವೆಗೆ ತಾಳಿ, ಹಾಸಿಗೆಯು ಪ್ರಸ್ತಕೆ
ಜೀವರಸ ಧಾರೆಯ ಎರೆದು ಕೊಟ್ಟಾಯ್ತು
ಜೋಲಿ ಹೊಡೆಯದ ನಾನು ಜೋಗುಳದ ಹಾಡು
ಅತ್ತು ಕರೆದರೆ ಇಲ್ಲಿ ಕತ್ತು ಹೋದೀತು.

ಏನ ಹೇಳಲಿ ನಾನು ಕಣ್ಣ ಕಸಿದರೊ ನನ್ನ
ಹೇಳುತ್ತ ಬಂದದ್ದೆ ನೋಟವಾಯ್ತು
ನಾಲಗೆಯ ಕಿತ್ತು ನೆತ್ತರ ಕುಡಿದರೊ
ಅಮಲಲ್ಲಿ ಅಂದದ್ದೆ ವೇದವಾಯ್ತು.

ಹುಲಿಯ ವೇಷಕೆ, ನನ್ನ ಚರ್‍ಮ ತಮಟೆ
ನೋವ ಕಾಯಿಸಿದಾಗ ಕೆರಳುಶಬ್ದ
ಗಬ್ಬ ಹತ್ತಿದ ಗೀತೆ ಹೇಗೆ ಹಾಡಲಿ ನಾನು
ನಿಮ್ಮ ಕಾಲ್ತುಳಿತಕ್ಕೆ ಜೀವ ಸ್ತಬ್ಧ.

ಒತ್ತೆಯಾದವು ಚಿತ್ತ ಮಾತು ಮೈ ಮುನಿಸು,
ತಿನಿಸುಗಳ ರಾಜ್ಯದಲಿ ಮೇವು ನಾನು
ಗೋಳ ಗೀತೆಯು ಇಲ್ಲಿ ಗುಲಾಮ ಗುರುವೆ
ಮುಕುತಿಯೆಂದರೆ ನಮ್ಮ ಮಣ್ಣು ಹುಣ್ಣು.

ಉದ್ದ ಹಾಸಿದ ನಿಮ್ಮ ಹೆಬ್ಬಾವ ಇತಿಹಾಸ
ಸೀಳಿ ಬಂದೀತು ಸತ್ಯ ನಾಳೆ ಬೆಳಕು
ಹೂತ ಭೂತದ ಬೆವರು ವರ್‍ತಮಾನದ ನೀರು
ಹರಿದೀತು ನೆಲ ತುಂಬ ತೆನೆಯು ತೂಗೀತು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...