Home / ಕವನ / ಕವಿತೆ / ಅರಿವು

ಅರಿವು

ಬೆದೆ ಹತ್ತಿದ ಎದೆ ಹಾಡಿದಾಗ
ಸದೆ ಬಡಿಯುವ ಸಿಂಹಾಸನವೇ
ಸಾವ ಸಂಭ್ರಮದಲ್ಲಿ ನೋವು
ನಿವಾರಿಸುವ ಜೋಳವಾಳಿಯೇ.

ಕಾಲ ಚಕ್ರ ಉರುಳುತ್ತಲೇ ಅರಿವು ಅರಳುತ್ತ
ನಾಲಗೆ ನಿಧಾನವಾಗಿ ಮಿಸುಕಾಡುತ್ತಿದೆ
ಬಾಯೊಳಗೆ ಬ್ರಹ್ಮಾಂಡ, ಶತಶತಮಾನದ ವಿರಾಟ್
ದರ್‍ಶನ ವಿರಾಟಪರ್‍ವದ ಅಜ್ಞಾತ ಅಳಿಯುತ್ತಿದೆ.

ನಂಬಿಕೆ ನಿಷ್ಠೆಯ ಜಡಕಾಡು
ಋಣದ ಒಣಹವೆಯಲ್ಲಿ ಹದ್ದು-
ಬಸ್ತಾಗಿ ಹಸ್ತಿನಾವತಿಯ ಹರಕೆ ಹೊತ್ತು
ಅಲೆಮಾರಿಯಾದದ್ದು ಹನ್ನೆರಡಕ್ಕೇ ಸಾಕು;
ಅಜ್ಞಾತವಾಸದ ಹುತ್ತ ವಾಲ್ಮೀಕಿಯಾಗಬೇಕು.
ಮತ್ತದೇ ರಾಮಾಯಣ!
ಅಲೆಮಾರಿ ಅರಿವಿಗೆ ಹದಿನಾಲ್ಕರ ಹರೆಯ!

ಹೆಪ್ಪುಗಟ್ಟುತ್ತ ಬಂದ ಗಡಿಯಾರ
ಹನ್ನೆರಡು ಹೊಡೆದಾಗ ಕಾಲ ಕಡೆದ ಮೊಸರಲ್ಲಿ
ಹೊರಬಂದ ಬಸವಾದಿ ಅಸಂಖ್ಯಾತ ಅರಿವು-
ಅಸ್ಪೃಶ್ಯರ ಹಟ್ಟಿಯಿಂದ
ಮಹಿಳೆಯ ಮುಟ್ಟಿನಿಂದ
ದೋಣಿಯ ಹುಟ್ಟಿನಿಂದ
ಕಟ್ಟೊಡೆದು ಬಂದ ನಿಟ್ಟುಸಿರು
ನಲಿವಾಯಿತು ಅದು ನಿಲುವಾಯಿತು.

ಹನ್ನೆರಡಕ್ಕೆ ಎರಡು ಸೇರಿ ಹದಿನಾಲ್ಕು ತುಂಬಿದಾಗ
ಆಸ್ಥಾನ ದೂರ ಅಲೆಮಾರಿ ಅರಿವು
ಹರಿದಾಸ ತೇರಾಯಿತು ಊರೆಲ್ಲ ಹರಿದಾಡಿತು.

ಮಹಾಭಾರತದ ಹನ್ನೆರಡಾಗಲಿ
ರಾಮಾಯಣದ ಹದಿನಾಲ್ಕಾಗಲಿ
ಅಲೆಮಾರಿ ಅನುಭವಕ್ಕೆ ಅರಮನೆಯಿಲ್ಲ
ಅರಿವಿಗೆ ಆಸ್ಥಾನವಿಲ್ಲ.

ಪುರಾಣದ ಸ್ಥಿತಿಯಾಗಿ ಇತಿಹಾಸದ ಗತಿಯಾಗಿ
ಗತಿ ಸ್ಥಿತಿಯ ಸ್ಥಿತ್ಯಂತರದಲ್ಲೇ
ಮುಷ್ಟಿಗೆ ಸಿಕ್ಕದ ಸೃಷ್ಟಿಯಾಗಿ
ವಚನವಾಗಿ ದಾಸರ ಪದವಾಗಿ
ಗುಡಿಸಲ ಗೋಳಾಗಿ ನೇಗಿಲ ನೋವಾಗಿ
ಪದವಿಟ್ಟಳುಪದೊಂದಗ್ಗಳಿಕೆಯಾಗ ಹೊರಟರೂ
ಮಸಿ ಅಳಿಸುವ ರಬ್ಬರು ಉತ್ಪಾದನೆಯಾಗುತ್ತದೆ
ಮತ್ತೆ ಮತ್ತೆ ಅಕ್ಷರ ಆಕಾರ ತಳೆಯುತ್ತದೆ.

ಇದು ಇಂದು ನೆನ್ನೆಯದಲ್ಲ
ಕಾಲ ಸಾಯುವುದಿಲ್ಲ
ಹದಿನಾಲ್ಕಕ್ಕೆ ಹಿಂದೆ ಹನ್ನೆರಡು
ಹನ್ನೆರಡಕ್ಕೆ ಹಿಂದೆ ಹತ್ತು ಇರುತ್ತದೆ
ಚರಿತ್ರೆಯ ಸರಪಳಿ ಬೆಳೆಯುತ್ತದೆ.

ಹತ್ತರ ಪಂಪ ಪೊರೆ ಬಿಡುತ್ತ ಬಂದದ್ದು
ಒತ್ತೆಯಿಟ್ಟ ಉಸಿರು ಉತ್ತರ ಹುಡುಕ ತೊಡಗಿದ್ದು
ಸುಳಿವು ಸಿಕ್ಕಿದ ಸಿಂಹಾಸನ ಗಡಗಡ ನಡುಗಿದ್ದು
ಪಂಡಿತರಿಗೆ ಪಡಿತರ ಹಂಚಿ ಪಟ್ಟಾಗಿ ಕೂತದ್ದು
ಪಟ್ಟದ ಕೆಳಗೆ ಚಟ್ಟದ ಚರಿತ್ರೆ
ನಿಲ್ಲದೆ ನಿರ್‍ಮಾಣವಾಗುತ್ತ ಬಂದದ್ದು-

ಎಲ್ಲಾ ಗೊತ್ತಾಗುತ್ತಿದೆ ಸಿಂಹಾಸನವೇ
ನಿನಗೆ ಹೊತ್ತಾಗುತ್ತಿದೆ ಜೋಳವಾಳಿಯೇ

ಈಗ-
ನನ್ನ ಕಿವಿ ನನ್ನದು
ನನ್ನ ನುಡಿ ನನ್ನದು
ನನ್ನ ಚರ್‍ಮ ನನ್ನದು
ನನ್ನ ಮೂಗು ನನ್ನದು
ನನ್ನ ಕಣ್ಣು ನನ್ನದು
ಕಡೆಗೆ-
ಈ ಮಣ್ಣು ನನ್ನದು.

ಯಾಕೆಂದರೆ-
ನೋಟ ನುಡಿಗಳ ಮೇಲೆ
ಸ್ಪರ್‍ಶ ಸಂವೇದನೆಯ ಮೇಲೆ
ಶಬ್ದ ಸ್ಪಂದನದ ಮೇಲೆ
ವಾಸನೆ ವಿವೇಚನೆಯ ಮೇಲೆ

ಗುಲಾಮ ಗೀರುಗಳು ಈಗ ಮಾಯುತ್ತಿವೆ
ವರ್‍ತಮಾನದ ಅರ್‍ಥ ಹುಡುಕುತ್ತಿವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...