Home / ಕವನ / ಕವಿತೆ / ಅರಿವು

ಅರಿವು

ಬೆದೆ ಹತ್ತಿದ ಎದೆ ಹಾಡಿದಾಗ
ಸದೆ ಬಡಿಯುವ ಸಿಂಹಾಸನವೇ
ಸಾವ ಸಂಭ್ರಮದಲ್ಲಿ ನೋವು
ನಿವಾರಿಸುವ ಜೋಳವಾಳಿಯೇ.

ಕಾಲ ಚಕ್ರ ಉರುಳುತ್ತಲೇ ಅರಿವು ಅರಳುತ್ತ
ನಾಲಗೆ ನಿಧಾನವಾಗಿ ಮಿಸುಕಾಡುತ್ತಿದೆ
ಬಾಯೊಳಗೆ ಬ್ರಹ್ಮಾಂಡ, ಶತಶತಮಾನದ ವಿರಾಟ್
ದರ್‍ಶನ ವಿರಾಟಪರ್‍ವದ ಅಜ್ಞಾತ ಅಳಿಯುತ್ತಿದೆ.

ನಂಬಿಕೆ ನಿಷ್ಠೆಯ ಜಡಕಾಡು
ಋಣದ ಒಣಹವೆಯಲ್ಲಿ ಹದ್ದು-
ಬಸ್ತಾಗಿ ಹಸ್ತಿನಾವತಿಯ ಹರಕೆ ಹೊತ್ತು
ಅಲೆಮಾರಿಯಾದದ್ದು ಹನ್ನೆರಡಕ್ಕೇ ಸಾಕು;
ಅಜ್ಞಾತವಾಸದ ಹುತ್ತ ವಾಲ್ಮೀಕಿಯಾಗಬೇಕು.
ಮತ್ತದೇ ರಾಮಾಯಣ!
ಅಲೆಮಾರಿ ಅರಿವಿಗೆ ಹದಿನಾಲ್ಕರ ಹರೆಯ!

ಹೆಪ್ಪುಗಟ್ಟುತ್ತ ಬಂದ ಗಡಿಯಾರ
ಹನ್ನೆರಡು ಹೊಡೆದಾಗ ಕಾಲ ಕಡೆದ ಮೊಸರಲ್ಲಿ
ಹೊರಬಂದ ಬಸವಾದಿ ಅಸಂಖ್ಯಾತ ಅರಿವು-
ಅಸ್ಪೃಶ್ಯರ ಹಟ್ಟಿಯಿಂದ
ಮಹಿಳೆಯ ಮುಟ್ಟಿನಿಂದ
ದೋಣಿಯ ಹುಟ್ಟಿನಿಂದ
ಕಟ್ಟೊಡೆದು ಬಂದ ನಿಟ್ಟುಸಿರು
ನಲಿವಾಯಿತು ಅದು ನಿಲುವಾಯಿತು.

ಹನ್ನೆರಡಕ್ಕೆ ಎರಡು ಸೇರಿ ಹದಿನಾಲ್ಕು ತುಂಬಿದಾಗ
ಆಸ್ಥಾನ ದೂರ ಅಲೆಮಾರಿ ಅರಿವು
ಹರಿದಾಸ ತೇರಾಯಿತು ಊರೆಲ್ಲ ಹರಿದಾಡಿತು.

ಮಹಾಭಾರತದ ಹನ್ನೆರಡಾಗಲಿ
ರಾಮಾಯಣದ ಹದಿನಾಲ್ಕಾಗಲಿ
ಅಲೆಮಾರಿ ಅನುಭವಕ್ಕೆ ಅರಮನೆಯಿಲ್ಲ
ಅರಿವಿಗೆ ಆಸ್ಥಾನವಿಲ್ಲ.

ಪುರಾಣದ ಸ್ಥಿತಿಯಾಗಿ ಇತಿಹಾಸದ ಗತಿಯಾಗಿ
ಗತಿ ಸ್ಥಿತಿಯ ಸ್ಥಿತ್ಯಂತರದಲ್ಲೇ
ಮುಷ್ಟಿಗೆ ಸಿಕ್ಕದ ಸೃಷ್ಟಿಯಾಗಿ
ವಚನವಾಗಿ ದಾಸರ ಪದವಾಗಿ
ಗುಡಿಸಲ ಗೋಳಾಗಿ ನೇಗಿಲ ನೋವಾಗಿ
ಪದವಿಟ್ಟಳುಪದೊಂದಗ್ಗಳಿಕೆಯಾಗ ಹೊರಟರೂ
ಮಸಿ ಅಳಿಸುವ ರಬ್ಬರು ಉತ್ಪಾದನೆಯಾಗುತ್ತದೆ
ಮತ್ತೆ ಮತ್ತೆ ಅಕ್ಷರ ಆಕಾರ ತಳೆಯುತ್ತದೆ.

ಇದು ಇಂದು ನೆನ್ನೆಯದಲ್ಲ
ಕಾಲ ಸಾಯುವುದಿಲ್ಲ
ಹದಿನಾಲ್ಕಕ್ಕೆ ಹಿಂದೆ ಹನ್ನೆರಡು
ಹನ್ನೆರಡಕ್ಕೆ ಹಿಂದೆ ಹತ್ತು ಇರುತ್ತದೆ
ಚರಿತ್ರೆಯ ಸರಪಳಿ ಬೆಳೆಯುತ್ತದೆ.

ಹತ್ತರ ಪಂಪ ಪೊರೆ ಬಿಡುತ್ತ ಬಂದದ್ದು
ಒತ್ತೆಯಿಟ್ಟ ಉಸಿರು ಉತ್ತರ ಹುಡುಕ ತೊಡಗಿದ್ದು
ಸುಳಿವು ಸಿಕ್ಕಿದ ಸಿಂಹಾಸನ ಗಡಗಡ ನಡುಗಿದ್ದು
ಪಂಡಿತರಿಗೆ ಪಡಿತರ ಹಂಚಿ ಪಟ್ಟಾಗಿ ಕೂತದ್ದು
ಪಟ್ಟದ ಕೆಳಗೆ ಚಟ್ಟದ ಚರಿತ್ರೆ
ನಿಲ್ಲದೆ ನಿರ್‍ಮಾಣವಾಗುತ್ತ ಬಂದದ್ದು-

ಎಲ್ಲಾ ಗೊತ್ತಾಗುತ್ತಿದೆ ಸಿಂಹಾಸನವೇ
ನಿನಗೆ ಹೊತ್ತಾಗುತ್ತಿದೆ ಜೋಳವಾಳಿಯೇ

ಈಗ-
ನನ್ನ ಕಿವಿ ನನ್ನದು
ನನ್ನ ನುಡಿ ನನ್ನದು
ನನ್ನ ಚರ್‍ಮ ನನ್ನದು
ನನ್ನ ಮೂಗು ನನ್ನದು
ನನ್ನ ಕಣ್ಣು ನನ್ನದು
ಕಡೆಗೆ-
ಈ ಮಣ್ಣು ನನ್ನದು.

ಯಾಕೆಂದರೆ-
ನೋಟ ನುಡಿಗಳ ಮೇಲೆ
ಸ್ಪರ್‍ಶ ಸಂವೇದನೆಯ ಮೇಲೆ
ಶಬ್ದ ಸ್ಪಂದನದ ಮೇಲೆ
ವಾಸನೆ ವಿವೇಚನೆಯ ಮೇಲೆ

ಗುಲಾಮ ಗೀರುಗಳು ಈಗ ಮಾಯುತ್ತಿವೆ
ವರ್‍ತಮಾನದ ಅರ್‍ಥ ಹುಡುಕುತ್ತಿವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...