Home / ಕವನ / ಕವಿತೆ / ನನಗೋ ಇಂಥ ಹೆಳವು…

ನನಗೋ ಇಂಥ ಹೆಳವು…

ಅಯ್ಯೋ…ನೋಡಲ್ಲಿ ಕಂದನನ್ನು
ಅದೇನು ಹೀಗೆ ಏರುತ್ತಿದೆ ಮೆಟ್ಟಿಲಿನಂತೆ?
ಮರಕ್ಕಾತು ಜಡವಾಗಿ ಕೂತಿದ್ದಕ್ಕೇ
ಅವನನ್ನೇನು ಕೊರಡೆಂದುಕೊಂಡಿದೆಯೋ?

ಕಾಲುಚಕ್ರ ಸೋತ ಹೊತ್ತಲ್ಲಿ
ಮರಕ್ಕೊರಗುತ್ತಾನೆ ಕುಸಿದು
ಅವನೊಂದಿಗೇ ಮರಕ್ಕೂ
ಅದರ ಮೇಲಿನ
ಸಕಲೆಂಟು ಜೀವಜಂತುಗಳಿಗೂ
ಗಾಢ ಮೈಮರೆವಿನ ವಿಸ್ಮೃತಿ.

ಕಂದನಿಗೇನು ಗೊತ್ತು ಪಾಪ?
ಅವನೋ ಎದ್ದರೆ
ತಿರುಗಾಲ ತಿಪ್ಪನಂತಾ ಅಲೆಮಾರಿ
ಕೂತರೆ ಹೆಬ್ಬಂಡೆಯಂತಾ ಸೋಮಾರಿ

ಇದಕ್ಕದೆಂಥಾ ಹುಚ್ಚು ಉಮೇದೋ?
ಮರವೋ
ಗಾಢ ನಿದ್ದೆ ಹೋದ ಅವನೋ
ಮೂಲೆ ಹಿಡಿದ
ಮುರುಕು ಕುರ್ಚಿಯೋ
ಯಾವುದಾದರೂ ಸರಿ
ಅದರ ಮೈಮೇಲೆ ಏರಿ
ಹಿಪ್ ಹಿಪ್ ಹುರ್ರೇ ಸಡಗರ.

ನೀನಾದರೂ ಹೇಳಬಾರದೇ
ಅದವನ ದೇಹವೆಂದು?
ಅದನ್ನೇ ಮೆಟ್ಟಿಲಾಗಿಸಿ
ಪುಟ್ಟ ಪುಟಾಣಿ
ಅಂಬೆಗಾಲಿಕ್ಕುತ್ತಾ
ಮೆಲ್ಲಗೆ ತೊಡೆಯೇರಿ ಕುಳಿತು
ಅದೋ ನೋಡು
ನಗು ಮುಕ್ಕಳಿಸುತಿದೆ ಮೊಗ,
ಥೇಟ್ ಪೀಠಾಧಿಪತಿಯ ಠೀವಿ!

ಮತ್ತೆ ನೋಡಿಗ
ಹುಮ್ಮಸ್ಸಿನಲಿ ಮೇಲೇರಿ
ಪಕ್ಕೆಲುಬಿನ ಮೆಟ್ಟಿಲಿಗೆ
ಗುಲಾಬಿ ಕಾಲಿನ ಪಾದವೂರಿದೆ
ಅವನಿಗೋ ಕಚಗುಳಿಯಾದರೂ ಆಗಬಾರದೇ?
ಮಿಸುಕಿದರೆ ಕೇಳು!

ಅಲೆಲೆ…ನೋಡು
ಹೊಟ್ಟೆಯುಬ್ಬಿಗೆ
ಇನ್ನೊಂದು ಪಾದ!
ಬಿಗಿ ಹಿಡಿತಕ್ಕೆ ಅವನದೇ ಜುಟ್ಟು!
ಹುರುಪಿನ ಏರು
ದಿಗ್ವಿಜಯದ ನಗೆ
ಅವಿರತ ಚಾರಣ
ಆಯಾಸವೇ ಆಗದಲ್ಲಾ ಕಂದನಿಗೆ?
ಅವನಿಗೋ ಎಚ್ಚರವಿಲ್ಲಾ
ಇದಕ್ಕೋ ಸುಸ್ತೆಂಬುದೇ ಇಲ್ಲಾ!

ಈಗವನ ಎದೆಯೂ
ಕಂದನಿನ್ನೊಂದು
ಪಾದಕ್ಕೆ ಸೋಪಾನವಾಯ್ತೇ?
ನೇರ ಮೂಗಿನುಬ್ಬಿಗೆ ಬಾಯಿ!
ನೆಕ್ಕಿ ಚೀಪಿ ರುಚಿ ನೋಡಿ….
ಮುಂದುವರೆದಿದೆ ದಿಗ್ವಿಜಯ ಯಾತ್ರೆ!

ಈಗ ನೋಡು,
ಏರುತ್ತಾ ಏರುತ್ತಾ
ಅವನ ಕತ್ತಿನ ಬಲಕ್ಕೊಂದು ಪಾದ
ಎಡಕ್ಕೊಂದು ಪಾದ
ಕುತ್ತಿಗೆಯ ಕುಳಿಯೇ
ಮತ್ತೊಂದು ಮಜಲು.

ಅವನ ಜುಟ್ಟು ಹಿಡಿದೇ
ಹಿಂದೆ ಮುಂದಾಗುವ ಸರ್ಕಸ್ಸು
ಅಯ್ಯೋ ಕಂದ ಬಿದ್ದಾತು ಎಚ್ಚರ…
ನೋಡವನ ತಲೆಯ ಮೇಲೆಯೇ ಕೂತು
ಮರಕ್ಕೊರಗಿದ ಭಂಗಿ!
ಥೇಟ್ ಕಳಸವಿಟ್ಟಂತೆ ತಲೆ ಮೇಲೆ…
ಪುಟಾಣಿ ಪುಟ್ಟ ಕೈ ಬಡಿಯುತ್ತಾ
ಕೇಕೆ… ಚಪ್ಪಾಳೇ…
ವಿಜಯೋತ್ಸವ…

ಕಂಡೋರ ದಿಟ್ಟಿ ತಾಕೀತು ಕಂದಮ್ಮಗೆ
ಮೂಲೆ ಕಸಬರಿಕೆ
ನಾಲ್ಕು ಕಡ್ಡಿಯ ಸುಟ್ಟು
ನೀವಳಿಸಿ ಒಗೆಯಬಾರದೇ ಆಚೆಗೆ?

ಇಷ್ಟೆಲ್ಲವಾದರೂ
ಅವನಿಗೋ ಮೈಮೇಲೆ ಖಬರಿಲ್ಲ.
ಕುಂಭಕರ್ಣನ ನಿದ್ದೆ
ಈ ಕಂದಮ್ಮನಿಗೋ
ಎಲ್ಲವೂ ಆಡಿದ್ದೇ ಆಟ.

ಅವನು ದಯಾಳು
ತಲೆಯೇರಿದ ಕಂದನನು
ಖಂಡಿತಾ ಬೇಕೆಂದೇ
ಕೊಡವಿ ಕೆಡವಲಾರ….

ಆದರವನಿಗೆ ಪಾಪ…
ಮೈಮೇಲಿನೆಚ್ಚರವೇ ಇಲ್ಲದೇ
ಧಡಕ್ಕನೆದ್ದು ಮೈ ಕೊಡವಿದರೆ….

ಕೊಡವಿದರೆ….
ಗತಿಯೇನು ಕಂದನದು?

ನನಗೋ ಇಂಥ ಹೆಳವು…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...