Home / ಕವನ / ಕವಿತೆ / ನನಗೋ ಇಂಥ ಹೆಳವು…

ನನಗೋ ಇಂಥ ಹೆಳವು…

ಅಯ್ಯೋ…ನೋಡಲ್ಲಿ ಕಂದನನ್ನು
ಅದೇನು ಹೀಗೆ ಏರುತ್ತಿದೆ ಮೆಟ್ಟಿಲಿನಂತೆ?
ಮರಕ್ಕಾತು ಜಡವಾಗಿ ಕೂತಿದ್ದಕ್ಕೇ
ಅವನನ್ನೇನು ಕೊರಡೆಂದುಕೊಂಡಿದೆಯೋ?

ಕಾಲುಚಕ್ರ ಸೋತ ಹೊತ್ತಲ್ಲಿ
ಮರಕ್ಕೊರಗುತ್ತಾನೆ ಕುಸಿದು
ಅವನೊಂದಿಗೇ ಮರಕ್ಕೂ
ಅದರ ಮೇಲಿನ
ಸಕಲೆಂಟು ಜೀವಜಂತುಗಳಿಗೂ
ಗಾಢ ಮೈಮರೆವಿನ ವಿಸ್ಮೃತಿ.

ಕಂದನಿಗೇನು ಗೊತ್ತು ಪಾಪ?
ಅವನೋ ಎದ್ದರೆ
ತಿರುಗಾಲ ತಿಪ್ಪನಂತಾ ಅಲೆಮಾರಿ
ಕೂತರೆ ಹೆಬ್ಬಂಡೆಯಂತಾ ಸೋಮಾರಿ

ಇದಕ್ಕದೆಂಥಾ ಹುಚ್ಚು ಉಮೇದೋ?
ಮರವೋ
ಗಾಢ ನಿದ್ದೆ ಹೋದ ಅವನೋ
ಮೂಲೆ ಹಿಡಿದ
ಮುರುಕು ಕುರ್ಚಿಯೋ
ಯಾವುದಾದರೂ ಸರಿ
ಅದರ ಮೈಮೇಲೆ ಏರಿ
ಹಿಪ್ ಹಿಪ್ ಹುರ್ರೇ ಸಡಗರ.

ನೀನಾದರೂ ಹೇಳಬಾರದೇ
ಅದವನ ದೇಹವೆಂದು?
ಅದನ್ನೇ ಮೆಟ್ಟಿಲಾಗಿಸಿ
ಪುಟ್ಟ ಪುಟಾಣಿ
ಅಂಬೆಗಾಲಿಕ್ಕುತ್ತಾ
ಮೆಲ್ಲಗೆ ತೊಡೆಯೇರಿ ಕುಳಿತು
ಅದೋ ನೋಡು
ನಗು ಮುಕ್ಕಳಿಸುತಿದೆ ಮೊಗ,
ಥೇಟ್ ಪೀಠಾಧಿಪತಿಯ ಠೀವಿ!

ಮತ್ತೆ ನೋಡಿಗ
ಹುಮ್ಮಸ್ಸಿನಲಿ ಮೇಲೇರಿ
ಪಕ್ಕೆಲುಬಿನ ಮೆಟ್ಟಿಲಿಗೆ
ಗುಲಾಬಿ ಕಾಲಿನ ಪಾದವೂರಿದೆ
ಅವನಿಗೋ ಕಚಗುಳಿಯಾದರೂ ಆಗಬಾರದೇ?
ಮಿಸುಕಿದರೆ ಕೇಳು!

ಅಲೆಲೆ…ನೋಡು
ಹೊಟ್ಟೆಯುಬ್ಬಿಗೆ
ಇನ್ನೊಂದು ಪಾದ!
ಬಿಗಿ ಹಿಡಿತಕ್ಕೆ ಅವನದೇ ಜುಟ್ಟು!
ಹುರುಪಿನ ಏರು
ದಿಗ್ವಿಜಯದ ನಗೆ
ಅವಿರತ ಚಾರಣ
ಆಯಾಸವೇ ಆಗದಲ್ಲಾ ಕಂದನಿಗೆ?
ಅವನಿಗೋ ಎಚ್ಚರವಿಲ್ಲಾ
ಇದಕ್ಕೋ ಸುಸ್ತೆಂಬುದೇ ಇಲ್ಲಾ!

ಈಗವನ ಎದೆಯೂ
ಕಂದನಿನ್ನೊಂದು
ಪಾದಕ್ಕೆ ಸೋಪಾನವಾಯ್ತೇ?
ನೇರ ಮೂಗಿನುಬ್ಬಿಗೆ ಬಾಯಿ!
ನೆಕ್ಕಿ ಚೀಪಿ ರುಚಿ ನೋಡಿ….
ಮುಂದುವರೆದಿದೆ ದಿಗ್ವಿಜಯ ಯಾತ್ರೆ!

ಈಗ ನೋಡು,
ಏರುತ್ತಾ ಏರುತ್ತಾ
ಅವನ ಕತ್ತಿನ ಬಲಕ್ಕೊಂದು ಪಾದ
ಎಡಕ್ಕೊಂದು ಪಾದ
ಕುತ್ತಿಗೆಯ ಕುಳಿಯೇ
ಮತ್ತೊಂದು ಮಜಲು.

ಅವನ ಜುಟ್ಟು ಹಿಡಿದೇ
ಹಿಂದೆ ಮುಂದಾಗುವ ಸರ್ಕಸ್ಸು
ಅಯ್ಯೋ ಕಂದ ಬಿದ್ದಾತು ಎಚ್ಚರ…
ನೋಡವನ ತಲೆಯ ಮೇಲೆಯೇ ಕೂತು
ಮರಕ್ಕೊರಗಿದ ಭಂಗಿ!
ಥೇಟ್ ಕಳಸವಿಟ್ಟಂತೆ ತಲೆ ಮೇಲೆ…
ಪುಟಾಣಿ ಪುಟ್ಟ ಕೈ ಬಡಿಯುತ್ತಾ
ಕೇಕೆ… ಚಪ್ಪಾಳೇ…
ವಿಜಯೋತ್ಸವ…

ಕಂಡೋರ ದಿಟ್ಟಿ ತಾಕೀತು ಕಂದಮ್ಮಗೆ
ಮೂಲೆ ಕಸಬರಿಕೆ
ನಾಲ್ಕು ಕಡ್ಡಿಯ ಸುಟ್ಟು
ನೀವಳಿಸಿ ಒಗೆಯಬಾರದೇ ಆಚೆಗೆ?

ಇಷ್ಟೆಲ್ಲವಾದರೂ
ಅವನಿಗೋ ಮೈಮೇಲೆ ಖಬರಿಲ್ಲ.
ಕುಂಭಕರ್ಣನ ನಿದ್ದೆ
ಈ ಕಂದಮ್ಮನಿಗೋ
ಎಲ್ಲವೂ ಆಡಿದ್ದೇ ಆಟ.

ಅವನು ದಯಾಳು
ತಲೆಯೇರಿದ ಕಂದನನು
ಖಂಡಿತಾ ಬೇಕೆಂದೇ
ಕೊಡವಿ ಕೆಡವಲಾರ….

ಆದರವನಿಗೆ ಪಾಪ…
ಮೈಮೇಲಿನೆಚ್ಚರವೇ ಇಲ್ಲದೇ
ಧಡಕ್ಕನೆದ್ದು ಮೈ ಕೊಡವಿದರೆ….

ಕೊಡವಿದರೆ….
ಗತಿಯೇನು ಕಂದನದು?

ನನಗೋ ಇಂಥ ಹೆಳವು…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...