Home / ಕವನ / ಕವಿತೆ / ಸಹಜ ಧ್ಯಾನ

ಸಹಜ ಧ್ಯಾನ

ಹೂಕೋಸಿನ ರೂಪ ಬಣ್ಣದಲಿ
ಮನ ಲೀನ, ಮಲಿನ.
ಹೆಚ್ಚುತ್ತಾ ಮೆಚ್ಚುತ್ತಾ ಅದರ
ಬುಡದಲ್ಲೇ ಹರಿವ
ಪಿತಿಪಿತಿ ಹುಳು
ಕಂಡರೂ ಕಾಣದಂತೆ
ಚೆಲುವಿನಾರಾಧನಾ ಧ್ಯಾನ

ಪೀಠಸ್ಥ ಆದೇಶಕ್ಕೆ ಮಹಾಮೌನ.

ದಂಟು ಬೇಳೆ ಬೇಯಿಸಿ ಬಸಿದು
ಮೆಣಸು ಮಸಾಲೆ ಖಾರ
ಹದ ಬೆರೆಸಿ ಕುದಿಸಿ ಒಗ್ಗರಿಸಿ
ಬಸ್ಸಾರಿನ ರಸಗಂಧವ
ಆಘ್ರಾಣಿಸಿ ಹೀರಿ
ಕರುಳಿನಾಳದ ಬಾಯ್ಚಪ್ಪರಿಕೆ
ಮಹಾರಸದುನ್ಮಾದ ಧ್ಯಾನ
ಅಮಲಿನಲಿ ಮೈಮರೆವು

ಹೊರಳು ದಾರಿಯಲಿ ತಿಳಿವು.

ಬೆಳ್ಳುಳ್ಳಿ ಒಗ್ಗರಣೆ ಘಮ ಮೂಗಿಗಡರಿ
ಆ ಗಂಧದ ಬೆನ್ನು ಹಿಡಿದು
ಗಾಳಿಯಲೆಗಳ ಮೇಲೆ ಸವಾರಿ
ಬೀಸಿ ಕೆಡವುತ್ತದೆ ವಾಸನಾ ಧ್ಯಾನ
ತಪ್ಪುತ್ತದೆ ಪ್ರಭುತ್ವ ನಿರ್ದೇಶಿತ ದಾರಿ

ನಡೆದ ದಾರಿಯೇ ಸರಿ.

ಸಬ್ಬಸಿಗೆ ಸೊಪ್ಪಿನ
ವಿನ್ಯಾಸಕ್ಕೆ ಮೃದು ಸ್ಪರ್ಶಕ್ಕೆ
ಅದೆಂಥಾ ನವುರು ಮುದ.
ಮೃದುವಾಗಿ ಮುಟ್ಟುತ್ತಾ
ಆವರಿಸುವ ಆವಾಹಿಸುವ
ಹಿತವಾದ ಮಿಡಿತ
ಕಾಡುತ್ತದೆ ಅದೇ
ಸ್ಪರ್ಶಸುಖದ ಧ್ಯಾನ

ಅನುಭವಕ್ಕೇ ಬದ್ಧ ಮನ.

ಹೆಚ್ಚಲು ಕೈಗೆತ್ತಿಕೊಂಡ
ಈರುಳ್ಳಿಯ ಮೂಲ ಕಾಡಿ
ಪಕಳೆ ಪಕಳೆಗಳ ಬಿಡಿಸುತ್ತಾ ಹೋದಂತೆ
ಅದರಲ್ಲೇ ತಲ್ಲೀನ
ಆ ಕೌತುಕಕ್ಕೇ ಸೋತು
ಆವರಿಸುತ್ತದೆ ವಿಸ್ಮಿತ ಧ್ಯಾನ

ಅಳಿಸಿಹೋಗುತ್ತದೆ ಯಾರೋ ಬರೆದಿಟ್ಟ
ಅಲೌಕಿಕ ದಿವ್ಯ ಪುರಾಣ.

ಈ ನಿತ್ಯ ಪ್ರೀತಿಯ
ರೂಪ ರಸ ಗಂಧ ಸ್ಪರ್ಶ ವಿಸ್ಮಯಗಳ
ಮಾನುಷ ಸಹಜ ಧ್ಯಾನದಲಿ
ಅನುಕ್ಷಣದ ಎಚ್ಚರ
ಮತ್ತೆ ಮತ್ತ ಮೈಮರೆವಿನ
ಹುಚ್ಚು ಮೋಹದ ಜೂಟಾಟ.
ನಿಲುಕಲಾರದ ಎತ್ತರದಲೇ ಇರಲಿ ಬಿಡು
ಅವರಿಟ್ಟ ಸಂತ ಪೀಠ.

ನನಗಾಗಿ
ಈ ನೆಲದಲ್ಲೇ ಹೀಗೇ
ಈ ಕ್ಷಣ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...