Home / ಕವನ / ಕವಿತೆ / ಸೃಷ್ಟಿಕರ್‍ತ

ಸೃಷ್ಟಿಕರ್‍ತ

ಸದಾ ಉತ್ಸವ ಜಗದೊಳಗೆ-
ಉಳುವ, ಬಿತ್ತುವ, ಟಿಸಿಲೊಡೆಯುವ
ಕಾಯಿಯಾಗುವ, ಮಾಗುವ ಸಂಭ್ರಮ ಪ್ರಕೃತಿಗೆ!
ಹಸಿರು ತೋರಣ, ಋತುಗಳ ಮೆರವಣಿಗೆ,
ಬಣ್ಣಗಳ ಚೆಲ್ಲಾಟ, ಹಕ್ಕಿಗಳ ಕಲರವ, ಗಾಳಿಯ ನಿನಾದ,
ಸೂರ್‍ಯನ ಬಿಸಿ, ಚಂದಿರನ ತಂಪು
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಭಾವಗಳ ರಂಗು ಹೃದಯದ ಒಸರಲ್ಲಿ
ಹೊಂಬಣ್ಣದ ತೆನೆ ಹಸಿರಿನ ಬಸಿರಲ್ಲಿ
ಬಣ್ಣಗಳ ಮೇಳ ಧರಣಿಯ ಉಸಿರಲ್ಲಿ
ಧರಿತ್ರಿಗೆ ಕಿರೀಟಗಳು ಹಿಮಚ್ಛಾದಿತ ಪರ್ವತಶ್ರೇಣಿಗಳು
ಏರದೆಗೆ ಪೀಠಗಳು ಗುಡ್ಡ ಬೆಟ್ಟಗಳು
ಜೀವಚರಗಳಿಗೆ ಜೀವಸೆಲೆ ಜಲಪಾತ, ಝರಿಗಳು.
ಜೀವಜಲಕೆ ಒಸರು ನದಿ, ಕೆರೆ, ಸರೋವರಗಳು!
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಪ್ರಥ್ವಿಯ ಜತೆಗೆ ಸಾಗರವನ್ನಿಟ್ಟೆ
ಕಂಬಗಳಿಲ್ಲದೆ ಬಾನಿನ ಚಪ್ಪರ ಹಾಕಿಯೇ ಬಿಟ್ಟೆ
ಭೂಮಿಯ ಮೇಲೆ ಪಶುಪಕ್ಷಿ ಪ್ರಾಣಿಗಳ ಓಡಾಡಬಿಟ್ಟೆ,
ಮನುಷ್ಯರ ಸೃಷ್ಟಿಸಿ ಭಾವಗಳ ರಂಗನು ತುಂಬಿ ಆಳಲು ಬಿಟ್ಟೆ
ಸಾಗರದೊಳಗೆ ಬಣ್ಣ ಬಣ್ಣದ ಜಲಚರಗಳ ತೇಲಿಸಿಬಿಟ್ಟೆ
ಪುಟ್ಟ, ಚಿಟ್ಟೆಗಳ ಬಣ್ಣದಲ್ಲದ್ದಿ ಮೆರೆಯಲು ಬಿಟ್ಟೆ.
ಎಲ್ಲವೂ ನಿನ್ನಯ ಸೃಷ್ಟಿ. ಆದರೂ ಬೇರೆ ಬೇರೆ.
ಒಂದರ ಹಾಗೆ ಇನ್ನೊಂದಿಲ್ಲ.
ಒಂದರ ಬಣ್ಣ ಇನ್ನೊಂದಕ್ಕಿಲ್ಲ.
ಎಲ್ಲಿಂದ ತಂದೆ ಇಷ್ಟೊಂದು ವೈವಿಧ್ಯತೆ?

ಹೆಣ್ಣಿನ ಜತೆಗೆ ಗಂಡನ್ನಿಟ್ಟೆ
ಭಾವಗಳ ಓಟಕೆ ರಂಗನು ಎರೆದೆ.
ಕಾಮದ ಬೆಂಕಿಯ ಉರಿಸಿ ಹೊಸಹುಟ್ಟಿಗೆ ಇಂಬನ್ನಿತ್ತೆ.
ಪ್ರೀತಿ ಪಾಠದ ಅಕ್ಕರಿಗ ನೀನು
ಪ್ರೀತಿಯೇ ಜಗದ ಉಸಿರೆಂದೆ.
ಆದರೂ ಪ್ರೀತಿಯ ಜತೆಗೆ ದ್ವೇಷವನ್ನಿಟ್ಟೆ
ಸುಖದ ಜತೆಗೆ ದುಃಖವನ್ನಿಟ್ಟೆ
ಯಾಕೆ ಹೀಗೆ ಮಾಡಿದೆ?

ಹಗಲಿನಾಗಸದಲಿ ನೇಸರ ಹೊಂಬಿಸಲು
ಇರುಳಿನಾಕಾಶದಲಿ ಶಶಿಯ ತಂಬೆಳಕು;
ಅಂಬರದಂಗಳದಲಿ ನಕ್ಷತ್ರಗಳ ಹೊಳಪು;
ಮರಗಳ ತುಂಬ ಮಿಂಚುಳ್ಳಿ ಮಿಣುಕು,
ಮೋಡಗಳ ನಡುವೆ ಮಿಂಚಿನ ಝಳಪು;
ಬೆಳಕಿಗೆಂದೂ ಬರವಿಲ್ಲ.
ಆದರೆ ಮನಮನದೊಳಗೊಂದೊಂದು
ನಕ್ಷತ್ರವನ್ನಿಡಲು ಏಕೆ ಮರೆತೆ?

ಭೂಮಿಯ ಸಹನೆ, ಅಲೆಗಳ ಚಂಚಲತೆ
ಗಾಳಿಯ ಚೈತನ್ಯ, ಆಗಸದ ಐಕ್ಯತೆ
ಎಲ್ಲವೂ ಕಲಿಕೆಯ ಆಗರ. ಎಲ್ಲಕ್ಕೂ ನೀನೇ ಗುರು
ಎಲ್ಲರೂ ನಿನ್ನ ಕೈಯಲ್ಲಿ ಅಕ್ಷ,
ನೀ ಹೇಳಿದಂತೆ ಇಡೀ ಜಗ.
ಆದರೂ ಮುತ್ತಿದೆ ದ್ವೇಷದ ಹಗೆ; ನೋವಿನ ಧಗೆ
ಶಾಂತಿಯ ಏಕೆ ತುಟ್ಟಿಯಾಗಿಸಿದೆ?

ನಿನ್ನಯ ಬಣ್ಣದ ಬಾಂಡಲಿ ಅಕ್ಷಯ!
ರಂಗಿಗೆ ಬರವಿಲ್ಲ. ರಾಗಕೆ ಮೌನವಿಲ್ಲ
ನೀ ಬರೆವ ಚಿತ್ರಗಳಿಗೆ ಕೊನೆಯಿಲ್ಲ
ಇಡೀ ಬಹ್ಮಾಂಡವೇ ನಿನ್ನ ಕ್ಯಾನ್‌ವಾಸ್
ಎಲ್ಲವೂ ಅಗಾಧ, ಅಕಲಂಕ, ಅಕೃತಿಮ.
ಕಣ್ಣಿಗೆ ಕಾಣದ ಚಿತ್ರಿಕ ನೀನು;
ನಿನ್ನೊಲವು ಅಕ್ಷೀಣ. ನಿನ್ನ ಅಣತಿಗೆ ನಮ್ಮ ಸವಾಲಿಲ್ಲ.
ಎಲ್ಲವ ಹೊತ್ತ ಅಗಧರ ನೀನು. ನಿನಗೆ ನೀನೇ ಸವಾಲು.
ಎಲ್ಲಿರುವ ನೀನು? ಹೇಗಿರುವೆ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...