ಅಗಲಿಕೆ

ಸಾರಂಗ

ಅಗಲಿಕೆಯೆ, ನಿನ್ನಗಲನಳೆಯುವವರಾರು ?
ಬಗೆಯೊಲವೆ ನಿನ್ನ ನೆಲೆ ತಿಳಿಯುವವರಾರು ?

ಹಿಂದೆ ಗೋವಳತಿಯರು ನಂದಕಂದನನಗಲಿ
ದಂದುಗದಿ ಮೈಮನದ ಹೊಂದಿಕೆಯ ಮರೆಯುತಲಿ
ನೊಂದು ನಿಡುಸರದಿ ಮನಬಂದಂತೆ ಕೂಗುತಲಿ
ಬೆಂದು ಬಾಯ್‌ಬಿಡುತ ಅಲೆದಾಡಿದರು ಅಡವಿಯಲಿ
“ಹುಲ್ಲೆಯೇ ನಲ್ಲನೆಲ್ಲಿರುವ ನೀನರುಹು !
“ಕೋಗಿಲೆಯೆ ಕೂಗಿ ನುಡಿ ಅವನಿರುವ ಕುರುಹು !
“ಗಿಳಿಹಿಂಡೆ ಕಂಡಿಹೆಯ ಗೆಳೆಯನನು ? ಹೇಳು !
“ಅಳಿಕುಳವೆ ಅಡಗಿರುವನೆಲ್ಲಿ ನಮ್ಮಾಳು ?

“ಅಣ್ಣ ! ಗರಿಗಣ್ಣ ! ಮನದನ್ನನಿರುಹನು ತಿಳುಹು !
“ಹೆಣ್ಣುಗಳ ಹೋಗಲಿಹ ಹರಣಗಳ ನೀನುಳುಹು !
“ಹಕ್ಕಿಗಳೆ, ನುಡಿಹೇಳಿ ಚಿಕ್ಕ ಚೆನ್ನಿಗನೆಲ್ಲಿ?
“ದಿಕ್ಕ ತೋರಿರಿ, ಸಾಕು, ಹೊಕ್ಕು ಹುಡುಕುವೆವಲ್ಲಿ!
“ಜಂಗುಳಿಯ ಹಸುಗಳೇ ರಂಗನೆಲ್ಲಿಹನು?
“ಕಂಗಳಿಗೆ ಕಾಣದೊಲು ಮೈಯ ಮರೆಸಿಹನು;
“ಮಂಗಣ್ಣಗಳಿರ, ಮಿತ್ರನ ಮರೆಯ ಹೇಳಿ!
“ಹೆಂಗಳೀ ಹರಕೆಯನು ಹೊಂದಿ ಸೊಗಬಾಳಿ!

“ಮರಬಳ್ಳಿಗಳೆ ಅರುಹಿ ಹರಿಯಿರುವ ತಾಣವನು !
“ಕೆರೆತೊರೆಗಳೇ ತೋರಿ ಅರಸನಿಹ ಗುರುತನ್ನು !
“ಹೊಳೆಯಮ್ಮ, ತಿಳುಹಿಸೌ ಕೊಳಲಿಗನ ನೆಲೆಯನ್ನು !
“ಬೆಟ್ಟದೊರೆ, ಮೂಗುತನ ಬಿಟ್ಟು ತೋರಾತನನು !
“ಮುಗಿಲೆ, ನಿನ್ನಂತಿರುವ ಸೊಗಸೊಡಲನೆಲ್ಲಿ ?
“ಹಗಲೊಡೆಯ, ನಮ್ಮ ಬಗೆಗಳ್ಳನಿಹನೆಲ್ಲಿ ?
“ಸುಳಿವೆಲರೆ, ನಮ್ಮೊಲವ ಸುಲಿದಾತನೆಲ್ಲಿ?
“ಬನಸಿರಿಯೆ, ನಮ್ಮ ಮನ ತಣಿಸುವವನೆಲ್ಲಿ?”

ಇಂತು ಹೆಣ್ಣುಗಳು ಕಣ್ಣಿಗೆ ಕಂಡುದೆಲ್ಲವನು-
ನಸುವು ತಿಳಿವಿರದಿರುವ ಹಸು ಹಕ್ಕಿ ಮಿಗಗಳನು-
ಉಸಿರಿಲ್ಲದಿಹ ಬಳ್ಳಿ-ಹಸಿರು-ಗಿಡ-ಮರಗಳನು-
ನುಡಿಸುತಳುತಲೆದ ಕತೆಯನ್ನ೦ದು ಕೇಳಿದೆನು.
‘ಹುಚ್ಚು ಹೆಣ್ಣುಗಳವರು !’ ಎಂದು ಬಗೆದಂದೆ
‘ಹೆಚ್ಚು ಇದು ! ಎಲ್ಲ ಕವಿಕಲ್ಪನೆಯು !’ ಎಂದೆ;
‘ಕೆಲಸವಿಲ್ಲದ ಕವಿಗೆ ಹುಸಿಯ ಹೆಣೆಯುವುದೇ
‘ಬಲು ಕೆಲಸ!’ ಎಂದು ಬೀಳ್‌ಗಳೆದು ನಾ ನುಡಿದೆ.

ಅಂದೆನಗೆ ತಿಳಿಯದೆಯೆ ಬಾಯ್ಗೆ ಬಂದುದನೊರೆದೆ;
ಇಂದು ಆ ಕತೆಯೆಲ್ಲ ಸರಿಯೆಂದು ತೋರುತಿದೆ.
ಸಟಿಯಲ್ಲ ಕವಿಯುಸಿರು, ಹುಚ್ಚಲ್ಲ ಹುಡುಗಿಯರು,
ದಿಟವನನುಭವಿಸದೆಯೆ ಅರಿತವರದಾರಿಹರು ?
‘ಮುಳುಗದೆಯೆ ನೀರ ನೆಲೆಯೊಳಗನರಿಯಲಿಕೆ-
‘ಬೆಳಕಳಿದ ಕಣ್ಗೆ ತಿಂಗಳನು ತಿಳಿಯಲಿಕೆ-
‘ಎಂತಾಗುವುದು?’ ಎಂಬ ಕಂಡುಂಡ ಮಾತು
ಇಂತೆನಗೆ ತಿಳಿದು ಮನದಾ ಮುಸುಕು ಹೋಯ್ತು.

ದೂರವಿಹ ನನ್ನಿನಿಯನೂರ ದಿಕ್ಕಿನ ಮುಗಿಲು
ಏರಿ ನನ್ನಯ ಬಳಿಯ ಸಾರಿ ಬರೆ ಬಾನಿನೊಳು,
ನನ್ನವುಗಳೆಂದು ನೇಹದ ನೆಟ್ಟ ನೋಟದಲಿ
ಮುಗಿಲ ನೋಡುತ ನಿಲುವೆ ಹಲವು ಹಾರಯಿಸುತಲಿ;
ದೊರೆಯಿರುವ ದೆಸೆಯಿಂದ ಹಕ್ಕಿಗಳು ಹಾರಿ
ಬರುತಿರಲು, ಹರುಷದೊಳು ನವಿರುಗಳು ನಿಮಿರಿ
ನನ್ನ ನಂಟುಗಳೆಂದು ನೆನೆವೆನವುಗಳನು,
ನನ್ನಾತನೊಸಗೆಯನು ಕೇಳಲೆಳಸುವೆನು.

ಮೆಲುಗಾಳಿಯೆ ಇರಲಿ, ಬಲುಗಾಳಿಯೇ ಇರಲಿ,
ಗೆಳೆಯನಿಹ ಕಡೆಯಿಂದ ಸುಳಿದು ಒರೆ-ಮೋಹದಲಿ
ತಿಳಿಯುವೆನು ನಾ ತೀರ ಬಳಿಯಾಪ್ತನೆಂದದನು-
ತಿಳುಹಿಸಲು ನನ್ನೆದೆಯ ಒಳಮಾತನೆಲ್ಲವನು
ನಾಲಗೆಯು ನಲಿಯುವುದು, ಮನವು ಕುಣಿಯುವುದು
ಕೇಳಲಾತನ ಕತೆಯ ಕಿವಿಯು ಕೋರುವುದು,
ಹೀಗೆನ್ನ ನಾಡಿಸುವುದಾವುದದು ಹುಚ್ಚೋ..?
ಆಗದಿರಲಿನಿಯನಲ್ಲಿರುವೆದೆಯ ನಚ್ಚೋ…?

ಇನಿಯನನು ನೋಡಿ ನುಡಿಸಿದ ಮಂದಿಯೆಲ್ಲರನು
ಮನೆಯವರೆ ಎಂದು ನಾ ಮನ್ನಿಸುವೆನವರನ್ನು
ಮನದನ್ನನಾ ರೂಪುಗುಣದ ಬಣ್ಣನೆಯನ್ನು
ನನಗೊರೆಯೆ ನನ್ನ ನಾನೇ ಮರೆತು ಕೇಳುವೆನು.
ಎನಿತೊ ಜನರಿಲ್ಲವೇ ಮತ್ತೆ ನೆರೆಗಳೊಳು ?
ಎನಿಸುವರು ನನಗವರು ಬರಡುಬೊಂಬೆಯೊಲು;
ಮಾತಿಲ್ಲದುವನೆಲ್ಲ ಮಾತನಾಡಿಸುವೆ,
ಮಾತನಾಡುವರಲ್ಲಿ ಮಗುವಡೆದಿರುವೆ.

ಜಡವಸ್ತುಗಳನ್ನು ಜೀವಿಗಳಂತೆ ಕಾಣಿಸುವ
ನಡೆನುಡಿವ ಜೀವಿಗಳ ಜಡಗಳಂತಾಗಿಸುವ
ಅಗಲಿಕೆಯೆ, ನಿನ್ನ ಗಲಗಳೆಯುವವರಾರಿಹರು?
ಬಗೆಯೊಲವೆ ನಿನ್ನ ನೆಲೆ ತಿಳಿದವರದಾರು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಡಿ ಬಾರೋ ರಂಗ
Next post ವಿದ್ಯುತ್‌ಪುತ್ರನ ಅವತಾರ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…