ಅಗಲಿಕೆ

ಸಾರಂಗ

ಅಗಲಿಕೆಯೆ, ನಿನ್ನಗಲನಳೆಯುವವರಾರು ?
ಬಗೆಯೊಲವೆ ನಿನ್ನ ನೆಲೆ ತಿಳಿಯುವವರಾರು ?

ಹಿಂದೆ ಗೋವಳತಿಯರು ನಂದಕಂದನನಗಲಿ
ದಂದುಗದಿ ಮೈಮನದ ಹೊಂದಿಕೆಯ ಮರೆಯುತಲಿ
ನೊಂದು ನಿಡುಸರದಿ ಮನಬಂದಂತೆ ಕೂಗುತಲಿ
ಬೆಂದು ಬಾಯ್‌ಬಿಡುತ ಅಲೆದಾಡಿದರು ಅಡವಿಯಲಿ
“ಹುಲ್ಲೆಯೇ ನಲ್ಲನೆಲ್ಲಿರುವ ನೀನರುಹು !
“ಕೋಗಿಲೆಯೆ ಕೂಗಿ ನುಡಿ ಅವನಿರುವ ಕುರುಹು !
“ಗಿಳಿಹಿಂಡೆ ಕಂಡಿಹೆಯ ಗೆಳೆಯನನು ? ಹೇಳು !
“ಅಳಿಕುಳವೆ ಅಡಗಿರುವನೆಲ್ಲಿ ನಮ್ಮಾಳು ?

“ಅಣ್ಣ ! ಗರಿಗಣ್ಣ ! ಮನದನ್ನನಿರುಹನು ತಿಳುಹು !
“ಹೆಣ್ಣುಗಳ ಹೋಗಲಿಹ ಹರಣಗಳ ನೀನುಳುಹು !
“ಹಕ್ಕಿಗಳೆ, ನುಡಿಹೇಳಿ ಚಿಕ್ಕ ಚೆನ್ನಿಗನೆಲ್ಲಿ?
“ದಿಕ್ಕ ತೋರಿರಿ, ಸಾಕು, ಹೊಕ್ಕು ಹುಡುಕುವೆವಲ್ಲಿ!
“ಜಂಗುಳಿಯ ಹಸುಗಳೇ ರಂಗನೆಲ್ಲಿಹನು?
“ಕಂಗಳಿಗೆ ಕಾಣದೊಲು ಮೈಯ ಮರೆಸಿಹನು;
“ಮಂಗಣ್ಣಗಳಿರ, ಮಿತ್ರನ ಮರೆಯ ಹೇಳಿ!
“ಹೆಂಗಳೀ ಹರಕೆಯನು ಹೊಂದಿ ಸೊಗಬಾಳಿ!

“ಮರಬಳ್ಳಿಗಳೆ ಅರುಹಿ ಹರಿಯಿರುವ ತಾಣವನು !
“ಕೆರೆತೊರೆಗಳೇ ತೋರಿ ಅರಸನಿಹ ಗುರುತನ್ನು !
“ಹೊಳೆಯಮ್ಮ, ತಿಳುಹಿಸೌ ಕೊಳಲಿಗನ ನೆಲೆಯನ್ನು !
“ಬೆಟ್ಟದೊರೆ, ಮೂಗುತನ ಬಿಟ್ಟು ತೋರಾತನನು !
“ಮುಗಿಲೆ, ನಿನ್ನಂತಿರುವ ಸೊಗಸೊಡಲನೆಲ್ಲಿ ?
“ಹಗಲೊಡೆಯ, ನಮ್ಮ ಬಗೆಗಳ್ಳನಿಹನೆಲ್ಲಿ ?
“ಸುಳಿವೆಲರೆ, ನಮ್ಮೊಲವ ಸುಲಿದಾತನೆಲ್ಲಿ?
“ಬನಸಿರಿಯೆ, ನಮ್ಮ ಮನ ತಣಿಸುವವನೆಲ್ಲಿ?”

ಇಂತು ಹೆಣ್ಣುಗಳು ಕಣ್ಣಿಗೆ ಕಂಡುದೆಲ್ಲವನು-
ನಸುವು ತಿಳಿವಿರದಿರುವ ಹಸು ಹಕ್ಕಿ ಮಿಗಗಳನು-
ಉಸಿರಿಲ್ಲದಿಹ ಬಳ್ಳಿ-ಹಸಿರು-ಗಿಡ-ಮರಗಳನು-
ನುಡಿಸುತಳುತಲೆದ ಕತೆಯನ್ನ೦ದು ಕೇಳಿದೆನು.
‘ಹುಚ್ಚು ಹೆಣ್ಣುಗಳವರು !’ ಎಂದು ಬಗೆದಂದೆ
‘ಹೆಚ್ಚು ಇದು ! ಎಲ್ಲ ಕವಿಕಲ್ಪನೆಯು !’ ಎಂದೆ;
‘ಕೆಲಸವಿಲ್ಲದ ಕವಿಗೆ ಹುಸಿಯ ಹೆಣೆಯುವುದೇ
‘ಬಲು ಕೆಲಸ!’ ಎಂದು ಬೀಳ್‌ಗಳೆದು ನಾ ನುಡಿದೆ.

ಅಂದೆನಗೆ ತಿಳಿಯದೆಯೆ ಬಾಯ್ಗೆ ಬಂದುದನೊರೆದೆ;
ಇಂದು ಆ ಕತೆಯೆಲ್ಲ ಸರಿಯೆಂದು ತೋರುತಿದೆ.
ಸಟಿಯಲ್ಲ ಕವಿಯುಸಿರು, ಹುಚ್ಚಲ್ಲ ಹುಡುಗಿಯರು,
ದಿಟವನನುಭವಿಸದೆಯೆ ಅರಿತವರದಾರಿಹರು ?
‘ಮುಳುಗದೆಯೆ ನೀರ ನೆಲೆಯೊಳಗನರಿಯಲಿಕೆ-
‘ಬೆಳಕಳಿದ ಕಣ್ಗೆ ತಿಂಗಳನು ತಿಳಿಯಲಿಕೆ-
‘ಎಂತಾಗುವುದು?’ ಎಂಬ ಕಂಡುಂಡ ಮಾತು
ಇಂತೆನಗೆ ತಿಳಿದು ಮನದಾ ಮುಸುಕು ಹೋಯ್ತು.

ದೂರವಿಹ ನನ್ನಿನಿಯನೂರ ದಿಕ್ಕಿನ ಮುಗಿಲು
ಏರಿ ನನ್ನಯ ಬಳಿಯ ಸಾರಿ ಬರೆ ಬಾನಿನೊಳು,
ನನ್ನವುಗಳೆಂದು ನೇಹದ ನೆಟ್ಟ ನೋಟದಲಿ
ಮುಗಿಲ ನೋಡುತ ನಿಲುವೆ ಹಲವು ಹಾರಯಿಸುತಲಿ;
ದೊರೆಯಿರುವ ದೆಸೆಯಿಂದ ಹಕ್ಕಿಗಳು ಹಾರಿ
ಬರುತಿರಲು, ಹರುಷದೊಳು ನವಿರುಗಳು ನಿಮಿರಿ
ನನ್ನ ನಂಟುಗಳೆಂದು ನೆನೆವೆನವುಗಳನು,
ನನ್ನಾತನೊಸಗೆಯನು ಕೇಳಲೆಳಸುವೆನು.

ಮೆಲುಗಾಳಿಯೆ ಇರಲಿ, ಬಲುಗಾಳಿಯೇ ಇರಲಿ,
ಗೆಳೆಯನಿಹ ಕಡೆಯಿಂದ ಸುಳಿದು ಒರೆ-ಮೋಹದಲಿ
ತಿಳಿಯುವೆನು ನಾ ತೀರ ಬಳಿಯಾಪ್ತನೆಂದದನು-
ತಿಳುಹಿಸಲು ನನ್ನೆದೆಯ ಒಳಮಾತನೆಲ್ಲವನು
ನಾಲಗೆಯು ನಲಿಯುವುದು, ಮನವು ಕುಣಿಯುವುದು
ಕೇಳಲಾತನ ಕತೆಯ ಕಿವಿಯು ಕೋರುವುದು,
ಹೀಗೆನ್ನ ನಾಡಿಸುವುದಾವುದದು ಹುಚ್ಚೋ..?
ಆಗದಿರಲಿನಿಯನಲ್ಲಿರುವೆದೆಯ ನಚ್ಚೋ…?

ಇನಿಯನನು ನೋಡಿ ನುಡಿಸಿದ ಮಂದಿಯೆಲ್ಲರನು
ಮನೆಯವರೆ ಎಂದು ನಾ ಮನ್ನಿಸುವೆನವರನ್ನು
ಮನದನ್ನನಾ ರೂಪುಗುಣದ ಬಣ್ಣನೆಯನ್ನು
ನನಗೊರೆಯೆ ನನ್ನ ನಾನೇ ಮರೆತು ಕೇಳುವೆನು.
ಎನಿತೊ ಜನರಿಲ್ಲವೇ ಮತ್ತೆ ನೆರೆಗಳೊಳು ?
ಎನಿಸುವರು ನನಗವರು ಬರಡುಬೊಂಬೆಯೊಲು;
ಮಾತಿಲ್ಲದುವನೆಲ್ಲ ಮಾತನಾಡಿಸುವೆ,
ಮಾತನಾಡುವರಲ್ಲಿ ಮಗುವಡೆದಿರುವೆ.

ಜಡವಸ್ತುಗಳನ್ನು ಜೀವಿಗಳಂತೆ ಕಾಣಿಸುವ
ನಡೆನುಡಿವ ಜೀವಿಗಳ ಜಡಗಳಂತಾಗಿಸುವ
ಅಗಲಿಕೆಯೆ, ನಿನ್ನ ಗಲಗಳೆಯುವವರಾರಿಹರು?
ಬಗೆಯೊಲವೆ ನಿನ್ನ ನೆಲೆ ತಿಳಿದವರದಾರು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಡಿ ಬಾರೋ ರಂಗ
Next post ವಿದ್ಯುತ್‌ಪುತ್ರನ ಅವತಾರ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys