Home / ಲೇಖನ / ಇತರೆ / ವಚನ ವಿಚಾರ – ನೀರಿನಂಥ ಮನಸ್ಸು

ವಚನ ವಿಚಾರ – ನೀರಿನಂಥ ಮನಸ್ಸು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್‍ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

[೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ: ಮನ-ಇಚ್ಛಂದ-ಆಗದೆ-ಒಂದೆ-ಅಂದದಲಿ-ಇಪ್ಪಂತೆ-ಅಪ್ಪ-ಆ; ಪೊದ್ದಿರ್ಪುದು-ಹೊಂದಿರುವುದು]

ಸಿದ್ಧರಾಮನ ವಚನ.
ಹಿಂದಿನ ಜನ್ಮದಲ್ಲಿ ಏನೇ ಆಗಿರಲಿ, ಅಥವಾ ಮಾಡಬಾರದ ಕೆಲಸಗಳನ್ನೇ ಮಾಡಿರಲಿ, ಅಂಥವನು ನೀರು ಕುಡಿಯಲೆಂದು ಹೋದರೆ ‘ನೀನು ಅಯೋಗ್ಯ’ ಎಂದು ಅವನ ದಾಹವನ್ನು ತಣಿಸಲು ನಿರಾಕರಿಸುತ್ತದೆಯೇ ನೀರು? ಇಲ್ಲವಲ್ಲಾ. ನಿಜವಾದ ಹಿರಿಯರ ಮನ ಹಾಗೆ ಇರಬೇಕಲ್ಲವೇ? ಯಾವುದರ ಬಗ್ಗೆಯೂ ತಿರಸ್ಕಾರದ ಲವಲೇಶವೂ ಇಲ್ಲದಂತಿರುವುದೇ ನಿಜವಾದ ಹಿರಿತನ. ಮನಸ್ಸು ಇಚ್ಛಂದವಾಗದೆ (ಇಬ್ಬಾಗವಾಗು) ಒಂದೇ ಅಂದದಲ್ಲಿ ಇರುವಂಥ ನಿಮ್ಮ ಸಮತಾಗುಣವನ್ನು ನನ್ನ ಮನಸ್ಸು ಎಂದು ಹೊಂದೀತು ಎಂದು ಸಿದ್ಧರಾಮ ಕೇಳುತ್ತಾನೆ.

ದೇವರು ಎಂಬುದಿದ್ದರೆ ಅದು ಸಮತಾಗುಣವೇ. ಸಿದ್ಧರಾಮನ ದೃಷ್ಟಿಯಲ್ಲಿ ಏನನ್ನೂ ತಿರಸ್ಕರಿಸಿದ ಗುಣವೇ, ಯಾವ ಗುಣದಿಂದಲೂ ಮನಸ್ಸು ಇಚ್ಚಂದವಾಗದೇ ಇರುವುದೇ, ದೇವರ ಗುಣ, ಅಂಥ ಗುಣ ಬೇಕು ಅನ್ನುವುದು ಬಯಕೆ.

ನಿಸರ್ಗಕ್ಕೆ ಇಂಥ ಸಮತಾಗುಣವಿರುವುದರಿಂದಲೇ ನಾವು ಬದುಕಿದ್ದೇವೆ. ಕೇವಲ ‘ಒಳ್ಳೆ’ಯವರಿಗೆ ಮಾತ್ರವೇ ಮಳೆ ಸುರಿಯುವುದು, ಸೂರ್ಯ ಹೊಳೆಯುವುದು, ನದಿ ಹರಿಯುವುದು, ಮರ ಹಣ್ಣು ಕೊಡುವುದು ಎಂದಾಗಿದ್ದರೆ ಲೋಕದಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಜನ ಬದುಕುವುದಕ್ಕೇ ಆಗುತ್ತಿರಲಿಲ್ಲವೇನೋ! ಸೇಡಿಲ್ಲದ, ಅವಜ್ಞೆ ಇಲ್ಲದ, ತಿರಸ್ಕಾರವಿಲ್ಲದ ಗುಣ ಎಂದು ಸಮತೆಯನ್ನು ವರ್ಣಿಸಿರುವುದು ಹೊಸತೆಂಬಂತಿದೆ.

ಛಂದ ಮತ್ತು ಅಂದ ಪದಗಳನ್ನು ಒಟ್ಟುಗೂಡಿಸಿರುವ ರೀತಿಯೂ ಗಮನಾರ್ಹ. ಛಂದ ಅನ್ನುವುದು ಛಂದಸ್ಸನ್ನೂ ಚಂದವನ್ನೂ ಒಟ್ಟಿಗೆ ಸೂಚಿಸೀತು.
*****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...