Home / ಲೇಖನ / ಇತರೆ / ಆಡಿಸಿ ನೋಡು ಬೀಳಿಸಿ ನೋಡು ಎಂದೂ ಉರುಳದು

ಆಡಿಸಿ ನೋಡು ಬೀಳಿಸಿ ನೋಡು ಎಂದೂ ಉರುಳದು

ಸೋಲಿರಲಿ, ಗೆಲುವಿರಲಿ, ನಗುವಿರಲಿ ಅಳುವಿರಲಿ ದಿನಗಳು ಉರುಳುತ್ತವೆ. ಉರುಳುತ್ತಿರುವ ದಿನಗಳಲ್ಲಿ ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಯಾರಿಗೂ ಭಾರವಾಗದೆ ಜೀವಿಸುವ ಛಲವಿದೆಯಲ್ಲ ಅದು ಜೀವನಕ್ಕೆ ಎಸೆಯುವ ಸವಾಲು. ಎಷ್ಟು ಆಡಿಸುತ್ತಿಯೋ ಅಷ್ಟು ಆಡಿಸು ನಾನು ಮಾತ್ರ ಕೆಳಕ್ಕೆ ಉರುಳುವುದಿಲ್ಲ ಎನ್ನುವ ಎದೆಗಾರಿಕೆಯ ನಿರ್ಧಾರಕ್ಕೆ ಯಾವ ದೇವರಾದರೂ ತಲೆಬಾಗಲೇಬೇಕು.

ಎಲ್ಲರೂ ಇಂತಹ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಜೀವನಕ್ಕೆ ಸವಾಲು ಹಾಕಬೇಕು. “ಸತ್ತೆನೆಂದೆನಬೇಡ; ಸೋತೆನೆಂದೆನಬೇಡ; ಬತ್ತಿತೆನ್ನೊಳು ಸತ್ವದೂಟೆಯೆನಬೇಡ; ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು! ಮತ್ತೆ ತೋರ್ಪುದು ನಾಳೆ- ಮಂಕುತಿಮ್ಮ!” ಇದು ಜೀವನ. ಹೀಗೆ ಬಾಳಲು ಆತ್ಮವಿಶ್ವಾಸ ಬೇಕು. ಜೀವನವನ್ನು ಪ್ರೀತಿಸುವ ಮನಸ್ಸು ಬೇಕು. ಜೀವನದಲ್ಲಿ ಶ್ರದ್ಧೆ ಇರಬೇಕು. ಏನಾದರೂ ಕೆಳಕ್ಕೆ ಉರುಳಬಾರದು, ಒಂದು ವೇಳೆ ಬಿದ್ದರೂ ಎದ್ದು ನಿಲ್ಲಬೇಕು ಎನ್ನುವ ಛಲಬೇಕು. ಈ ಮನೋಭಾವವಿದ್ದಲ್ಲಿ ಬಿದ್ದಲ್ಲಿಂದ ಎದ್ದು, ಅಳುನುಂಗಿ ನಗುವ, ನೋವಲ್ಲೂ ನಗುವ ಕಲೆಯನ್ನು ಕರಗತ ಮಾಡಿಕೊಳ್ಳಬಹುದು. ಜೀವನದಲ್ಲಿ ಮುಂದೆ ಸಾಗಬಹುದು.

ಯಾರಾದರೂ ಸದಾ ನಗುತ್ತಿದ್ದರೆ, ಅವರಿಗೆ ಯಾವ ನೋವೂ ಇಲ್ಲ ಎನ್ನುವುದು ಸತ್ಯವಲ್ಲ. ಆಳುವಿನಲ್ಲೂ ನಗುವ ಎದೆಗಾರಿಕೆಯನ್ನು ಅವರು ರೂಢಿಸಿಕೊಂಡಿದ್ದಾರೆ ಎನ್ನುವುದು ಸತ್ಯ. ಚಾರ್ಲಿ ಚಾಪ್ಲಿನ್ ಹೇಳುವ ಒಂದು ಮಾತಿದೆ. ‘ಮಳೆಯಲ್ಲಿ ತೊಯ್ದುಕೊಂಡು ನಡೆಯುವುದೆಂದರೆ ನನಗಿಷ್ಟ, ಯಾಕೆಂದರೆ, ಆಗ ನನ್ನ ಕಣ್ಣೀರು ಯಾರಿಗೂ ಕಾಣಿಸುವುದಿಲ್ಲ.’ ಅವನ ಕಣ್ಣೀರು ಬೇರೆಯವರಿಗೆ ಕಾಣಿಸುತ್ತಿದ್ದರೆ ಅವನನ್ನು ನೋಡಿ ನಗುವವರಿಗೂ ಮುಜುಗರವಾಗುತ್ತಿತ್ತು. ಅನುಕಂಪ ಮೂಡುತ್ತಿತ್ತು. ಅನುಕಂಪಕ್ಕೆ ಸಿಕ್ಕಿದಿದ್ದರೆ ಅವನು ಯಾವಾಗಲೋ ಸತ್ತು ಹೋಗುತ್ತಿದ್ದ. ಚಾರ್ಲಿ ಚಾಪ್ಲಿನ್ ಆಗಿ ಎಲ್ಲರ ಮನದಲ್ಲಿ ಇವತ್ತಿಗೂ ಜೀವಂತವಾಗಿ ಉಳಿಯುತ್ತಿರಲಿಲ್ಲ. ಅವನಂತೆ ತಮ್ಮ ಕಣ್ಣೀರನ್ನು ಯಾರಿಗೂ ಕಾಣಿಸದಂತೆ ಇಂಗಿಸುವವರು ಬಹಳ ಜನರಿರುತ್ತಾರೆ. ಹೊರಗೆ ನಗುನಗುತ್ತಾ ಇದ್ದು ಬಚ್ಚಲು ಮನೆಯಲ್ಲಿ ತಮ್ಮ ಕಣ್ಣೀರನ್ನು ಹರಿಬಿಡುವ ಇಂಥವರ ಕಣ್ಣೀರು ಯಾರಿಗೂ ಕಾಣಿಸದೆ ಇಂಗಿ ಹೋಗುತ್ತದೆ. ಇವರು ತಮ್ಮ ಒಳಗಿನ ದಾವಾನಲವನ್ನು ಮುಚ್ಚಿಟ್ಟು ನಗುನಗುತ್ತಾ ಮುಂದೆ ಹೆಜ್ಜೆ ಹಾಕುತ್ತಾರೆ. ಹೊರ ಪ್ರಪಂಚಕ್ಕೆ ಇವರು ಸುಖಿಗಳು.

ನೋವು ನುಂಗಿ ನಗಲಾಗದವರು ಜೀವನದಲ್ಲಿ ಅಳುತ್ತಾ ಹೆಜ್ಜೆ ಹಾಕುತ್ತಾರೆ. ಅವರ ಹೆಜ್ಜೆಗಳು ಭಾರವಾಗಿ ಬಿದ್ದಲ್ಲಿಂದ ಏಳುವುದು ಕಷ್ಟವಾಗುತ್ತದೆ. ನಗುವವರ ಹೆಜ್ಜೆಗಳು ಹಗುರವಾಗಿ ಬಿದ್ದಲ್ಲಿಂದ ಏಳಲು ಸುಲಭವಾಗುತ್ತದೆ. ನಗು ಜೀವನವನ್ನು ಹಗುರ ಮಾಡುತ್ತದೆ.

ಜೀವನದಲ್ಲಿ ಎಲ್ಲ ರೀತಿಯ ಅನುಭವಗಳಿಗೂ ಸ್ಥಾನವಿದೆ. ಅನುಭವಗಳು ಮನುಷ್ಯನನ್ನು ತಿದ್ದುವುದೆನ್ನುತ್ತಾರೆ. ಶ್ರೀಮಂತಗೊಳಿಸುವುದೆನ್ನುತ್ತಾರೆ. ಪಾಠ ಕಲಿಸುವುದೆನ್ನುತ್ತಾರೆ. ಅನುಭವಗಳು ಕೊಡುವ ಶಿಕ್ಷಣ ಯಾವ ವಿಶ್ವವಿದ್ಯಾಲಯಗಳಿಂದಲೂ ದೊರಕಲಾರದು. ಪ್ರತಿಯೊಂದು ಕೆಟ್ಟ ಅನುಭವಗಳು ಆ ಕ್ಷಣಕ್ಕೆ ನಮ್ಮನ್ನು ಸೋಲಿಸುವಂತೆ ಕಂಡರೂ ಜೀವನಕ್ಕೆ ಒಗ್ಗಿಕೊಳ್ಳುವುದನ್ನು ಕಲಿಸಿಕೊಡುತ್ತದೆ. ನೋವು ನುಂಗಿ ನಗುವ ಜಾಣತನ ಕಲಿಸಿಕೊಡುತ್ತದೆ. ಜೀವಿಸುವ ಧೈರ್ಯ ತುಂಬಿಸುತ್ತದೆ.

‘ಆಡಿಸಿ ನೋಡು ಬೀಳಿಸಿ ನೋಡು ಎಂದೂ ಉರುಳದು’ ಎನ್ನುವ ಒಂದು ಸುಂದರವಾದ ಹಾಡಿದೆ. ಈ ಹಾಡು ನನ್ನ ಸೋಲಿನ ಕ್ಷಣಗಳಲ್ಲಿ ನನ್ನನ್ನು ಬಡಿದೆಬ್ಬಿಸಿದೆ. ಕಾಲಿಗೆ ಎದ್ದುನಿಲ್ಲುವ ಶಕ್ತಿ ನೀಡಿದೆ. ನಗುನಗುತ್ತ ಜೀವನವನ್ನು ಎದುರಿಸಲು ಸಹಾಯ ಮಾಡಿದೆ. ಹಾಡು ಎಲ್ಲರ ಕಿವಿಯಲ್ಲೂ ಗುನುಗುಣಿಸುವಂತಾಗಬೇಕು. ಸೋತು ಕುಸಿಯುವುದರಲ್ಲಿ ಅರ್ಥವೇ ಇಲ್ಲ. ಎದ್ದು ನಿಂತು ಮುಂದೆ ಹೆಜ್ಜೆ ಹಾಕಬೇಕು. ಜೀವನವನ್ನು ಎದುರಿಸಬೇಕು. ಯಾವತ್ತೂ ಹೆದರಿ ಕುಸಿಯುವ ಅಗತ್ಯವಿಲ್ಲ.

“ಸತ್ತನೆಂದೆನಬೇಡ; ಸೋತೆನೆಂದೆನಬೇಡ; ಬತ್ತಿತೆನ್ನೊಳು ಸತ್ವದೂಟೆಯೆನ ಬೇಡ; ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು! ಮತ್ತೆ ತೋರ್ಪುದು ನಾಳೆ- ಮಂಕುತಿಮ್ಮ!” ಇದು ಡಿವಿಜಿ ಕಂಡುಕೊಂಡ ಜೀವನದ ಸತ್ಯ. ಆಡಿಸಿ ನೋಡು ಬೀಳಿಸಿ ನೋಡು ಎಂದೂ ಉರುಳದು ಎನ್ನುತ್ತಲೇ ಬಾಳುವ ಕಲೆಯಿದು.

ಕೊನೆಗೊಂದು ಕಿವಿಮಾತು –

ನಮ್ಮ ನಗು ಎಲ್ಲರಿಗೆ; ಆದರೆ ಅಳು ನಮಗೆ ಮಾತ್ರ. ನಗುವಿಗೆ ಪಾಲುದಾರರಿದ್ದಾರೆ. ಆದರೆ ಅಳುವಿಗೆ ಪಾಲುದಾರರಿಲ್ಲ.
*****
(ಚಿಂತನ- ಆಕಾಶವಾಣಿ: ಮಂತಣಿ)

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...