Home / ಕವನ / ಕವಿತೆ / ನಿರೀಕ್ಷೆ

ನಿರೀಕ್ಷೆ

ಮೋಹನ


ಮೂರು ದಿನಗಳು ಜಾರಿದುವು, ಬರಿ-
ದಾರಿ ಕಾಯುತಲಿರುವೆನು.
ಹಾರಯಿಕೆಯಂತಹದು ! ನನ್ನವ
ಬಾರನೇಕೆನುತಿರುವೆನು.
ಬರುವೆನೆನ್ನುವ ಓಲೆಯಿಲ್ಲವ-
ನರುಹಿದೊಸಗೆಗಳಿಲ್ಲ,
ಬರುವನೆನ್ನುತ ಬಗೆಯಿದೇನೋ
ಮೊರೆಯುತಿದೆ ಸುಳ್ಳಲ್ಲ.
ಎಂತಲೇ ದಿನವೆಲ್ಲಾ….
ಎಂತಲೇ ದಿನವೆಲ್ಲ ಹೀಗೆಯೆ
ನಿಂತು ನಿರುಕಿಪೆನಲ್ಲಾ !


ಸದ್ದನಾವುದ ಕೇಳಿದರೆ ಜು-
ಮ್ಮೆದ್ದ ಮೈಮನದಿಂದ
ಎದ್ದು ನೋಡುವೆ ಇನಿಯನೆಂದೇ
ಹೊದ್ದಿದಾತುರದಿಂದ.
ಆತನಲ್ಲದೆ ಇರಲು ಬಯಕೆಯು
ಬೀತು ಬಳಲಿಕೆಯಾಂತು,
ಕಾತರದಿ ಬಂದೊಳಗೆ ಬೀಳುವೆ-
ಕಾಯ್ದ ಸುಯ್ಲಲಿ-ಸೋತು.
ಮತ್ತೆ ಆಶೆಯು ಕೂಗಿ ….
ಮತ್ತೆ ಆಶಯು ಕೂಗಿ ಕರೆಯಲು
ಒತ್ತಿ ಏಳುವೆ ಬೀಗಿ.


ದೂರ ಬರುತಿರಬಹುದು ನನ್ನಾ
ನೀರನೆಂಬ ವಿಚಾರದಿ,
ಏರಿ ನೆಲೆಮನೆ ಹುಬ್ಬಿನೊಳು ಕೈ-
ಯೂರಿ ನಿರುಕಿಪೆ ದೂರದಿ;
‘ಏನಿದಿವಳಾರನ್ನು ನೋಡುವ-
ಳೇನಿದಾತುರ?’ ಎನ್ನುತ
ಆಡುವುದೆ ಜನ ?-ಎಂದು ಸುತ್ತಲು
ನೋಡುವೆನು ನಾನಂಜುತ
ಬರಲಿರುವನವನೆಂದು….
ಬರಲಿರುವನೆಂಬೀ ಬಗೆಯ ಬರಿ-
ಮೊರೆತಕೇನೆನಲಿಂದು ?
* * *

ಮೂರು ದಿನಗಳು ಜಾರಿದುವು ಬರಿ-
ದಾರಿ ಕಾಯುತಲಿರುವೆನು.
ಹಾರಯಿಕೆಯಂತಹದು ? ನಲ್ಲನು
ಬಾರನೇಕೆನುತಿರುವೆನು.
ಮನವನ್ನೇತರೊಳೊ
ಹೆಣೆದವನ ಮರೆಯಲಿಕೆ
ಹಣುಗಿಯೇ ಹಣುಗುವೆನು, ಆದರೇನು !


ಕಿಡಗೇಡಿ ತಂಗಾಳಿ-
ಯೊಡನೆ ಬಂದಾ ನೆನಹು
ಒಡಲ ಜುಽಮ್ಮೆನಿಸಿ ನವಿರೇರಿಸುವುದು.
ಬೆಳುದಿಂಗಳೊಡಗೊಂಡು
ತಿಳಿಯದಂತೈತಂದು
ಕಳವಳವ ಕರುಳಿನೊಳಗೂರಿಸುವುದು.


ತನ್ನವಳ ಜೊತೆಗೂಡಿ
ಹಾಡುತಿಹ ಹಕ್ಕಿಯುಲಿ
ತನ್ನ ಮಟ್ಟಕೆ ಸುಮ್ಮನಿರಬಾರದೆ?
ನನ್ನ ದೇನಿರಲು ಬಹು-
ದನ್ನೆಯವು ! ಅವನ ನೆನ-
ಪನ್ನು ಕಿವಿಗೊತ್ತಿ ಕಾಡುವುದು ಬರಿದೆ.


ಸುಡಲಿ, ಬಂದಿತಿದೇಕೊ
ಜಡಿಯ ಮೋಡದ ಜಿನುಗು !
ಹಿಡಿದು ಬೆಸೆವುದು ಆತನಾಶೆಯೊಡನೆ,
ಇಡಿದ ಕತ್ತಲೆಯಿರುಳು
ಮಿಡುಕುತೊಬ್ಬಳೆ ಮಲಗಿ-
ದೆಡೆಗೆ ಕಳುಹುವುದವನ ಬಯಕೆಯನ್ನೇ.


ಮುಳಿಸು ಹೆಮ್ಮೆಗಳಲ್ಲಿ
ಮಾಡಿದಾ ನಿರ್ಣಯವು
ಗಳಿಗೆಯರೆಗಳಿಗೆಯೂ ನಿಲ್ಲದಿಹುದು.
ನನಗಿರುವ ಆತುರವು
ಇನಿಯಗೇಕಿರದೆಂದು
ಜಿನುಗಿ ನನ್ನೆದೆಯುಸಿರ ಚೆಲ್ಲುತಿಹುದು.


‘ಇನಿತೊಂದು ಹಲುಬಿ ಕಂ-
ಬನಿಯಿಡುವೆನವಗಾಗಿ
‘ನೆನಪಾದರೂ ಇಹುದೆ ನನ್ನದವಗೆ?’
ಎನುವ ಯೋಚನೆ ಬರಲು
ಮುನಿಸು ಮೊಗದೋರಿ ನಾ-
ನೆನುವೆ ‘ಇನಿತೇಕೆ ಮನದಳಲು ನನಗೆ ?’
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...