Home / ಲೇಖನ / ಇತರೆ / ವಚನ ವಿಚಾರ – ಅರ್ಧ ಮಂಚ

ವಚನ ವಿಚಾರ – ಅರ್ಧ ಮಂಚ

ಆನೆ ಕುದುರೆ ಭಂಡಾರವಿರ್ದಡೇನೋ
ತಾನುಂಬುದು ಪಡಿಯಕ್ಕಿ
ಒಂದಾವಿನ ಹಾಲು
ಮಲಗುವುದರ್ಧ ಮಂಚ
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ
ಒಡಲು ಭೂಮಿಯ ಸಂಗ
ಒಡವೆ ತಾನೇನಪ್ಪುದೋ
ಕೈಹಿಡಿದ ಮಡದಿ ಪರರ ಸಂಗ
ಪ್ರಾಣ ವಾಯುವಿನ ಸಂಗ
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ
ನಿಃಕಳಂಕ ಮಲ್ಲಿ ಕಾರ್ಜುನಾ

[ಪಡಿ-ಒಂದು ಅಳತೆ, ಒಂದಾವಿನ-ಒಂದು ಹಸುವಿನ]

ಮೋಳಿಗೆ ಮಾರಯ್ಯನ ವಚನ. `ನನ್ನದು’ ಎಂದುಕೊಂಡ ವಸ್ತುಗಳಲ್ಲೇ ಬದುಕಿನ ಸಾರ್ಥಕತೆಯನ್ನು ಕಾಣುವ ಧೋರಣೆ ಸರಿಯಲ್ಲ ಅನ್ನುತ್ತದೆ ಈ ವಚನ. ಆನೆ, ಕುದುರೆ, ಭಂಡಾರ ಅನ್ನುವದರ ಬದಲು ಕಾರು, ಬೈಕು, ಆರಂಕಿಯ ಸಂಬಳ ಎಂದು ಕೊಳ್ಳೋಣ. ಆಗ ನಮ್ಮ ಕಾಲದ ಬಗ್ಗೆ ಕಾಮೆಂಟರಿ ಮಾಡುತ್ತಿರುವಂತೆ ಇದೆ ಅನ್ನಿಸುವುದಿಲ್ಲವೇ? ಅಷ್ಟೆಲ್ಲ ಇದ್ದರೂ ತಿನ್ನುವುದು ಮಾತ್ರ ಒಂದಳತೆ ಅಕ್ಕಿಯ ಅನ್ನ, ಅದೂ ನಮ್ಮ ಹೊಟ್ಟೆ ಹಿಡಿಸುವುವಷ್ಟೇ. ಅರ್ಧಮಂಚ ಅನ್ನುವುದಂತೂ ಅದ್ಭುತವಾದ ರೂಪಕ.

ನನಗೆ ಸುಖಕೊಡುವ ಜೊತೆ ಜೀವಿಯೊಡನೆ ಅರ್ಧ ಮಂಚ ಹಂಚಿಕೊಳ್ಳಬೇಕು. ಇಬ್ಬರೂ ಸ್ವಂತದ ಸುಖವನ್ನೇ ಅಪೇಕ್ಷಿಸುತ್ತಾ ಸುಖ ಸಿಕ್ಕಿದ್ದೂ ಭ್ರಮೆಯೇ ಆಗಬಹುದು. ಹಾಗೆ ಸುಖದ ಸಾಧನ ಅಂದುಕೊಂಡಿರುವ ಮಂಚ ಸಿಕ್ಕಿದ್ದೂ ಅರ್ಧವೇ! ಸುಖಸಾಧನವಾದ ದೇಹ ನನ್ನದು ಅಂದುಕೊಂಡರೆ ಅದೂ ಭೂಮಿಯ ಪಾಲು, ಜೀವಿಸಿದ್ದೇನೆನ್ನುವುದಕ್ಕೆ ಆಡುತ್ತಿರುವ ಉಸಿರು ಕೂಡ ಗಾಳಿಯ ಪಾಲು. ನನ್ನವಳೆಂದುಕೊಂಡ ಹೆಂಡತಿ ನನ್ನ ನಂತರ ಬೇರೆಯವರ ಪಾಲಾಗುವುದಿಲ್ಲವೇ, ಆಗಬಾರದೇ? ಹಾಗಿದ್ದರೆ ನನ್ನ ಜೊತೆಗೆ ಯಾರಿದ್ದಾರೆ, ಏನಿದೆ? ಸಾವು ಒಂದೇ, ಸಂಗಡ ಇರುವವರು ಯಾರೂ ಇಲ್ಲ. ಹತಾಶೆಯೋ, ಅಗಾಧ ಒಂಟಿತನದ ಅನುಭವವೋ, ಇಂಗ್ಲಿಶಿನಲ್ಲಿ ಆಂಗ್ಸ್ಟ್ ಅನ್ನುತ್ತಾರಲ್ಲ ಅದೋ, ಏನಾದರೂ ಕರೆಯಿರಿ. ಕಾಡುವ ಏಕಾಂಗಿತನ ಕೇವಲ ಆಧುನಿಕ ಕಾಲದ್ದೂ ಅಲ್ಲ. ಅದು ಎಲ್ಲ ಕಾಲದ ಮನುಷ್ಯ ಬದುಕಿನ ಸತ್ಯ ಅನ್ನಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...