Home / ಲೇಖನ / ಇತರೆ / ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...