Home / ಲೇಖನ / ಇತರೆ / ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...