Home / ಕವನ / ಕವಿತೆ / ಮಹಾ ಪರಿನಿರ್ವಾಣ

ಮಹಾ ಪರಿನಿರ್ವಾಣ


ಕಾಂಡವೇ ಶಿಲೀಕೃತಗೊಂಡು
ಕಲ್ಲಾದ ಪಳೆಯುಳಿಕೆ, ಮರಗಲ್ಲಿನಲಿ
ಕೆತ್ತಿದ ಬುದ್ಧನಿಗೆ
ಅವಳಡುಗೆ ಮನೆಯೀಗ ತಪೋವನ.
ನೀಳ ಕಣ್ಣು ಮುಚ್ಚಿ
ಧ್ಯಾನಕ್ಕೆ ಕೂತ ಅವನೊಂದಿಗೆ
ಅವಳ ನಿತ್ಯ ಕಸುಬಿನಲ್ಲೇ
ಮೌನ ಜುಗಲ್‌ಬಂದಿ.


ಸೊಪ್ಪು ಸೋಸುತ್ತಾ
ಕಾಳು ಬಿಡಿಸುತ್ತಾ
ಪಾತ್ರೆ ತೊಳೆಯುತ್ತಾ
ಮಗುವಿಗೆ ಹಾಲೂಡಿ
ಲಾಲಿ ಹೇಳುತ್ತಾ
ಮರಗಲ್ಲ ಬುದ್ಧನನ್ನು ನೆಟ್ಟಿದ್ದಾಳೆ
ಹೆಣ್ಣ ಪ್ರತಿರೂಪದ ಮೃತ್ತಿಕೆಯಲಿ.


ಗಡಿಬಿಡಿಯಲಿ ಕೈಸುಟ್ಟು
ಬೆರಳು ಕೊಯ್ದು
ಜಾರಿ ಬಿದ್ದು
ನೋವು ಉಮ್ಮಳಿಸಿ
ಬಿಕ್ಕಳಿಸಿದ ಸದ್ದು.
ಒಂದಿಷ್ಟೇ ಕಣ್ತೆರೆದು ನೋಡಿ
ಥಟ್ಟನೆ ಮುಚ್ಚುವ ತಥಾಗತ!
ಅವಳ ನೋವಿಗೆ ಮಿಡುಕುವನೇ?
ತನ್ನ ಸಂಘಕ್ಕೇ ಹೆಣ್ಣ ನಿರಾಕರಿಸಿ
ಅವಳೊಡಲನೇ ಅಪಮಾನಿಸಿ
ಈ ಹಸಿಮಣ್ಣನೊದ್ದು ಮೇಲೇರಿದವನು?


ಆದರೀಗ…
ಈರುಳ್ಳಿ ಹೆಚ್ಚುವ ನೆವದಲಿ
ಒಳಗಿನ ಸಂಕಟಕ್ಕೇ ಬಾಯ್ಬಂದು
ದಳ ದಳ ಉದುರುವ ಅವಳ ಕಣ್ಣೀರಿಗೆ
ಈಗೀಗ ಅವನ ಕಣ್ಣಂಚಿನಲ್ಲೂ
ಕಂಡೂ ಕಾಣದಂತೆ ನೀರ ಪಸೆಯೇ?


ಒಲೆಯ ಕಾವಿಗೆ ಬಿಸಿಯಾಗಿ
ಕುಳಿರ್ಗಾಳಿಗೆ ತಂಪಾಗಿ
ಜೋಗುಳಕ್ಕೆ ನಿದ್ದೆಯಾಗಿ
ಪಾತ್ರೆ ಸಪ್ಪಳಕ್ಕೆ ಕಿವಿಯಾಗಿ
ಅಡುಗೆ ಘಮಕ್ಕೆ ವಾಸನೆಯಾಗಿ
ಅವಳ ತುಡುಮುಡಿಕೆಗೆ ಕಣ್ಣಾಗಿ
ಅರಳುತ್ತಿವೆ ಅವನೊಳಹೊರಗು
ಬುದ್ಧನೆನಿಸಿಕೊಂಡೂ ಮುಕ್ಕಾಗಿ
ಮಿಕ್ಕುಳಿದ ಸಾಕ್ಷಿಗಾಗಿ.


ಹೆಣ್ಣ ಮಿಡಿತದ ಮೃತ್ತಿಕೆಯಲಿ ನೆಟ್ಟ
ಮರಗಲ್ಲ ಬುದ್ಧನಿಗೀಗ
ನೆಲದಾಳದಲ್ಲೆಲ್ಲಾ ಬೇರು
ಕೈಕಾಲು ಎದೆ ತಲೆಗಳೆಲ್ಲ ಚಿಗುರು
ಕಣಕಣದ ಚಲನೆಗೂ ಮಿಡಿವ
ಹೆಣ್ಣ ನೋವಿಗೂ ತುಡಿವ
ಅವನೀಗ ಮರ್ತ್ಯಲೋಕದ ಕೂಸು!

[ಮರದ ಕಾಂಡ ಒಣಗಿ ಅನೇಕ ವರ್ಷಗಳ ಕಾಲ ಮಣ್ಣಿನೊಂದಿಗಿನ ಸಂಪರ್ಕ ದಿಂದ, ರಾಸಾಯನಿಕ ಕ್ರಿಯೆ ನಡೆದು ಖನಿಜವನ್ನು ಹೀರಿ ಮರದ ಕಾಂಡವೇ ಕಲ್ಲಾಗಿ ಪರಿವರ್ತನೆಯಾಗುವ ಸೃಷ್ಟಿ ವಿಶೇಷಕ್ಕೆ ಇಂಗ್ಲಿಷಿನಲ್ಲಿ petrified wood ಎನ್ನುತ್ತಾರೆ. ಅದಕ್ಕೆ ಸಂವಾದಿಯಾಗಿ ‘ಮರಗಲ್ಲು’ ಎಂದಿಲ್ಲಿ ಬಳಸಿದ್ದೇನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...