Home / ಕವನ / ಕವಿತೆ / ಮಹಾ ಪರಿನಿರ್ವಾಣ

ಮಹಾ ಪರಿನಿರ್ವಾಣ


ಕಾಂಡವೇ ಶಿಲೀಕೃತಗೊಂಡು
ಕಲ್ಲಾದ ಪಳೆಯುಳಿಕೆ, ಮರಗಲ್ಲಿನಲಿ
ಕೆತ್ತಿದ ಬುದ್ಧನಿಗೆ
ಅವಳಡುಗೆ ಮನೆಯೀಗ ತಪೋವನ.
ನೀಳ ಕಣ್ಣು ಮುಚ್ಚಿ
ಧ್ಯಾನಕ್ಕೆ ಕೂತ ಅವನೊಂದಿಗೆ
ಅವಳ ನಿತ್ಯ ಕಸುಬಿನಲ್ಲೇ
ಮೌನ ಜುಗಲ್‌ಬಂದಿ.


ಸೊಪ್ಪು ಸೋಸುತ್ತಾ
ಕಾಳು ಬಿಡಿಸುತ್ತಾ
ಪಾತ್ರೆ ತೊಳೆಯುತ್ತಾ
ಮಗುವಿಗೆ ಹಾಲೂಡಿ
ಲಾಲಿ ಹೇಳುತ್ತಾ
ಮರಗಲ್ಲ ಬುದ್ಧನನ್ನು ನೆಟ್ಟಿದ್ದಾಳೆ
ಹೆಣ್ಣ ಪ್ರತಿರೂಪದ ಮೃತ್ತಿಕೆಯಲಿ.


ಗಡಿಬಿಡಿಯಲಿ ಕೈಸುಟ್ಟು
ಬೆರಳು ಕೊಯ್ದು
ಜಾರಿ ಬಿದ್ದು
ನೋವು ಉಮ್ಮಳಿಸಿ
ಬಿಕ್ಕಳಿಸಿದ ಸದ್ದು.
ಒಂದಿಷ್ಟೇ ಕಣ್ತೆರೆದು ನೋಡಿ
ಥಟ್ಟನೆ ಮುಚ್ಚುವ ತಥಾಗತ!
ಅವಳ ನೋವಿಗೆ ಮಿಡುಕುವನೇ?
ತನ್ನ ಸಂಘಕ್ಕೇ ಹೆಣ್ಣ ನಿರಾಕರಿಸಿ
ಅವಳೊಡಲನೇ ಅಪಮಾನಿಸಿ
ಈ ಹಸಿಮಣ್ಣನೊದ್ದು ಮೇಲೇರಿದವನು?


ಆದರೀಗ…
ಈರುಳ್ಳಿ ಹೆಚ್ಚುವ ನೆವದಲಿ
ಒಳಗಿನ ಸಂಕಟಕ್ಕೇ ಬಾಯ್ಬಂದು
ದಳ ದಳ ಉದುರುವ ಅವಳ ಕಣ್ಣೀರಿಗೆ
ಈಗೀಗ ಅವನ ಕಣ್ಣಂಚಿನಲ್ಲೂ
ಕಂಡೂ ಕಾಣದಂತೆ ನೀರ ಪಸೆಯೇ?


ಒಲೆಯ ಕಾವಿಗೆ ಬಿಸಿಯಾಗಿ
ಕುಳಿರ್ಗಾಳಿಗೆ ತಂಪಾಗಿ
ಜೋಗುಳಕ್ಕೆ ನಿದ್ದೆಯಾಗಿ
ಪಾತ್ರೆ ಸಪ್ಪಳಕ್ಕೆ ಕಿವಿಯಾಗಿ
ಅಡುಗೆ ಘಮಕ್ಕೆ ವಾಸನೆಯಾಗಿ
ಅವಳ ತುಡುಮುಡಿಕೆಗೆ ಕಣ್ಣಾಗಿ
ಅರಳುತ್ತಿವೆ ಅವನೊಳಹೊರಗು
ಬುದ್ಧನೆನಿಸಿಕೊಂಡೂ ಮುಕ್ಕಾಗಿ
ಮಿಕ್ಕುಳಿದ ಸಾಕ್ಷಿಗಾಗಿ.


ಹೆಣ್ಣ ಮಿಡಿತದ ಮೃತ್ತಿಕೆಯಲಿ ನೆಟ್ಟ
ಮರಗಲ್ಲ ಬುದ್ಧನಿಗೀಗ
ನೆಲದಾಳದಲ್ಲೆಲ್ಲಾ ಬೇರು
ಕೈಕಾಲು ಎದೆ ತಲೆಗಳೆಲ್ಲ ಚಿಗುರು
ಕಣಕಣದ ಚಲನೆಗೂ ಮಿಡಿವ
ಹೆಣ್ಣ ನೋವಿಗೂ ತುಡಿವ
ಅವನೀಗ ಮರ್ತ್ಯಲೋಕದ ಕೂಸು!

[ಮರದ ಕಾಂಡ ಒಣಗಿ ಅನೇಕ ವರ್ಷಗಳ ಕಾಲ ಮಣ್ಣಿನೊಂದಿಗಿನ ಸಂಪರ್ಕ ದಿಂದ, ರಾಸಾಯನಿಕ ಕ್ರಿಯೆ ನಡೆದು ಖನಿಜವನ್ನು ಹೀರಿ ಮರದ ಕಾಂಡವೇ ಕಲ್ಲಾಗಿ ಪರಿವರ್ತನೆಯಾಗುವ ಸೃಷ್ಟಿ ವಿಶೇಷಕ್ಕೆ ಇಂಗ್ಲಿಷಿನಲ್ಲಿ petrified wood ಎನ್ನುತ್ತಾರೆ. ಅದಕ್ಕೆ ಸಂವಾದಿಯಾಗಿ ‘ಮರಗಲ್ಲು’ ಎಂದಿಲ್ಲಿ ಬಳಸಿದ್ದೇನೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...