Home / ಕವನ / ಕವಿತೆ / ಯಾವ ದಾರಿಯೊ!

ಯಾವ ದಾರಿಯೊ!

ನಾದನಾಮಕ್ರಿಯಾ


ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!

ಭಾವಿಸುತ ಬಾಯ್ದೆರೆದು ಕುಳಿತರೆ
ಸಾವೆ ಸರಿ! ಎಂಬಾ ವಿಚಾರದಿ
ಜೀವದರಸನದಲ್ಲಿರುವನಾ
ಠಾವನರಸುತ ತೆರಳಲಿರುವೆ;

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು.


ದೇಶವಲೆದವನೆಂದು ನಾ ಸಂ-
ನ್ಯಾಸಿಯೊಬ್ಬನನಿಂದು

ಹಾರಯಿಸಿ ಕೇಳಿದರೆ ಆತನು
ತೋರಿಸುತ ತೆಂಕಣವ ಬೆರಳಲಿ:
`ಸಾರು ಈ ದಾರಿಯೊಳು ನಿನ್ನವ-
ನೂರ ಸೇರುವೆ ನೇರ’ ಎಂದನು.

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಕೇಳಿದರೆ ಯಾಜಿಗಳನಾಗಲೆ
ಹೇಳಿದರು ಬಲಿ ಕೊಡುತಲೆ:

“ಬೋಳುಮರಗಳ ಸಾಲುದಾರಿಯ
ಕೇಳಿ ಬಲ್ಲೆಯೆ? ಹಾಗೆ ಹೋದರೆ
ನಾಳೆಯೇ ನೋಡುವೆಯೆ ನಿನ್ನ –
ನ್ನಾಳುವವನಾಳಿಯನು” ಎಂದರು.

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಯೋಗಿರಾಜಯ್ಯನಿಗೆ ನಾ ತಲೆ-
ಬಾಗಿ ವಿನಯದಿ ಕೇಳಿದೆ.

ಮುಗಿದ ಕಂಗಳನಗಲಿಸದೆ, ತುಟಿ-
ಬಿಗಿದ ಬಾಯನು ಬಿಚ್ಚದೆಯೆ, ಕೈ-
ಮುಗಿಲ ಕಡೆ ನೀಡಿದನು; ತಿಳಿಯದೆ
ವಿಗಡತನವದು ನಗುತ ಮರಳಿದೆ.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು !


ಭಾಗವತದಾ ದಾಸರಲ್ಲಿಗೆ
ಹೋಗಿ ಕೇಳಿದೆ ಮೆಲ್ಲಗೆ.

‘ವಿಟ್ಠಲನ ಗುಡಿಯೆದುರ ಬೀದಿಯೊ-
‘ಳಿಟ್ಟು ಅಡಿಯನು ಮುಂದೆ ಸಾಗಲು
‘ನೆಟ್ಟನೆಯದಾ ಬಟ್ಟೆ, ಸೇರುವೆ
‘ತಟ್ಟನೆಯೆ ನಿನ್ನವನ’ ನೆಂದರು.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಬುದ್ದಿಶಾಲಿಗಳೆನಿಸಿ ಕೊಂಬರ
ಹೊದ್ದಿ ಹಾದಿಯ ಕೇಳಿದೆ;

ಇದ್ದ ಊರನ್ನುಳಿದು ಬೇರೆಯ
ಸುದ್ದಿಯನೆ ನಾವರಿಯೆವೆಂದರು;
ಮೊದ್ದುತನವೇನೆಯ್ದ ಬೇಕವ-
ನಿದ್ದೆಡೆಯ ನಾನೆಂಬುದಿದುವೇ!

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಜೋಯಿಸರ ಕೇಳಿದೆನು ಬಗೆಬಗೆ-
ಕಾಯಕಿಗಳನ್ನು ಕೇಳಿದೆ.

ಬೇರೆ ಬೇರೊಂದೊಂದು ದಾರಿಯ
ತೋರಿಸಿದರೊಬ್ಬೊಬ್ಬರೂ ಎನೆ
ಗಾರುಗೊಂಡಿತು ಮನವು; ಯಾವುದು
ತೋರದೆಯೆ ತೊಳಲುತ್ತಲಿಹೆನು.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಎಲ್ಲರೂ ಅರಿತಿರಲು ಬಹುದೇ
ನಲ್ಲನೆಡೆಯನು….! ಅಲ್ಲದೆ-

ಎಲ್ಲರೂ ಬಳಸಿರಲು ಬಹುದೇ-
ಸುಳ್ಳನೇ ಬರಿ..! ತಿಳಿಯದೊಂದೂ,
ನಲ್ಲನೊಡನಿದ್ದೆನ್ನ ನೆನಹದೆ
ಟೊಳ್ಳು ಕನಸಾಗಿರಲು ಬಹುದೇ…!

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು !
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...